
ಪುತ್ತೂರು: ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪೂರಕವಾಗಿ ಪುತ್ತೂರಿನಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಾಂಸ್ಕೃತಿಕ ಕಾರ್ಯಕ್ರಮ ಸಮಾಜಕ್ಕೊಂದು ಉತ್ತಮ ಸಂದೇಶ ನೀಡಬೇಕು ಎಂಬ ನಿಟ್ಟಿನಲ್ಲಿ ನ.೧೬ರಂದು ಪುತ್ತೂರು ದೇವಳದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ನಮ್ಮ ವಿದ್ಯಾಸಂಸ್ಥೆಯನ್ನು ವಿಸ್ತರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸುತ್ತಿಲ್ಲ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ.ಎಂ.ಮೋಹನ ಆಳ್ವಾ ಹೇಳಿದರು.
ಮಂಗಳವಾರ ದೇವಸ್ಥಾನದ ಸಭಾಂಗಣದಲ್ಲಿ ಈ ಕಾರ್ಯಕ್ರಮದ ಪೂರ್ವಬಾವಿಯಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಾಸಕ ಅಶೋಕ್ ರೈ ಮಾತನಾಡಿ, ಡಾ.ಎಂ. ಮೋಹನ ಆಳ್ವ ಅವರ ಸಾಂಸ್ಕೃತಿಕ ಹಿರಿಮೆ ಇಡೀ ನಾಡಿಗೆ ಗೊತ್ತು. ಅವರು ನಡೆಸಿದ ಆಳ್ವಾಸ್ ನುಡಿಸಿರಿ, ಆಳ್ವಾಸ್ ವಿರಾಸತ್ ಕಾರ್ಯಕ್ರಮಗಳು ದೇಶದಲ್ಲೇ ಒಂದು ಅಪೂರ್ವ ಸಾಹಿತ್ಯಿಕ, ಸಾಂಸ್ಕೃತಿಕ ಹಬ್ಬಗಳಾಗಿವೆ. ಪುತ್ತೂರಿನಲ್ಲಿ ಒಳ್ಳೆಯ ಕಾರ್ಯಕ್ರಮ ಮಾಡಲು ನಮ್ಮ ಪೂರ್ಣ ಸಹಕಾರವಿದೆ. ಪಕ್ಷಾತೀತವಾಗಿ ಎಲ್ಲರೂ ಇದರಲ್ಲಿ ಸೇರಲಿದ್ದೇವೆ ಎಂದರು.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಮೂಡುಬಿದರೆಯಲ್ಲಿ ನಡೆಯುವ ನುಡಿಸಿರಿ ಮತ್ತು ವಿರಾಸತ್ ಕಾರ್ಯಕ್ರಮಗಳು ದೇಶದ ಉದ್ದ ಅಗಲಕ್ಕೂ ಮುಟ್ಟಿದೆ. ದೇಶದ ಎಲ್ಲ ರಾಜ್ಯಗಳ ಸಾಂಸ್ಕೃತಿಕ ವೈವಿಧ್ಯವನ್ನು ಒಂದೇ ವೇದಿಕೆಯಲ್ಲಿ ಕಟ್ಟಿ ಕೊಡುವ ಕೆಲಸವನ್ನು ಆಳ್ವಾಸ್ ಸಾಂಸ್ಕೃತಿಕ ವೈಭವ ಮಾಡುತ್ತದೆ ಎಂದರು.
ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮಾತನಾಡಿ, ದೇವಸ್ಥಾನದ ಗದ್ದೆಯಲ್ಲಿ ಅನೇಕ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಆಳ್ವಾಸ್ ಸಾಂಸ್ಕೃತಿಕ ವೈಭವ ಭಿನ್ನವಾಗಿ ನಡೆಯಲಿದೆ. ಎಲ್ಲ ಬಗೆಯ ಭೇದ ಮರೆತು ಜನ ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.
ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ೧೦ ವರ್ಷಗಳ ಬಳಿಕ ಪುತ್ತೂರಿನಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯುತ್ತಿದೆ. ಇದು ಪುತ್ತೂರಿನ ಪಾಲಿನ ಕಲೆಯ ರಸದೌತಣ ನೀಡಲಿದೆ ಎಂದರು. ನಗರಸಭೆಯ ಮಾಜಿ ಅಧ್ಯಕ್ಷ ಜೀವಂಧರ ಜೈನ್, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಅಶ್ವಿನ್ ಶೆಟ್ಟಿ, ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಮಿತಿಯ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಬಿ. ಪುರಂದರ ಭಟ್, ಸುದಾನ ವಸತಿಯುತ ಶಾಲೆಯ ಸಂಚಾಲಕ ರೆ.ವಿಜಯ ಹಾರ್ವಿನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಉಪಸ್ಥಿತರಿದ್ದರು. ಪ್ರೊ. ದತ್ತಾತ್ರೇಯ ಪ್ರಾರ್ಥಿಸಿದರು. ಕಸಾಪ ಪುತ್ತೂರು ತಾಲೂಕು ಘಟಕದ ಮಾಜಿ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್ ಸ್ವಾಗತಿಸಿದರು. ಡಾ.ರಾಜೇಶ್ ಬೆಜ್ಜಂಗಳ ಕಾರ್ಯಕ್ರಮ ನಿರೂಪಿಸಿದರು.
—ಕೋಟ್—-
ಪುತ್ತೂರಿಗೆ ನಿಕಟಸಂಬಂಧ
ಪುತ್ತೂರಿಗೂ ಮೋಹನ್ ಆಳ್ವರಿಗೂ ನಿಕಟ ಸಂಬಂಧ ಇದೆ. ಈ ಹಿಂದೆ ೨೦೧೩ರಲ್ಲಿ ಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದಲ್ಲಿ ಅವರು ಕೊಡುಗೆ ಅಪಾರ. ಸಭಾಮಂಟಪ, ವಿನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಘಟನೆಯಲ್ಲಿ ಅವರು ಅನೇಕ ಕಾರ್ಯಕ್ರಮಗಳನ್ನು ಉಚಿತವಾಗಿ ಮಾಡಿಸಿದ್ದರು–ನಳಿನ್ ಕುಮಾರ್ ಕಟೀಲ್, ಮಾಜಿ ಸಂಸದ.

































