ಸಂಜೆವಾಣಿ ವಾರ್ತೆ
ಚಾಮರಾಜನಗರ, ಸೆ.05-ಯುವಜನೋತ್ಸವ-2025ರ ಅಂಗವಾಗಿ ಎಚ್.ಐ.ವಿ. ಏಡ್ಸ್ ಬಗ್ಗೆ ಜನಜಾಗೃತಿಗಾಗಿ ನಗರದಲ್ಲಿ ಏರ್ಪಡಿಸಲಾಗಿದ್ದ ಮ್ಯಾರಥಾನ್, ರೆಡ್ ರಿಬ್ಬನ್ ಓಟ ಸ್ಪರ್ಧೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ನಗರದಲ್ಲಿಂದು ಚಾಲನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿಂದು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಸ್ನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಚಾಮರಾಜನಗರ ವಿಶ್ವವಿದ್ಯಾಲಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ರೋಟರಿ ಸಿಲ್ಕ್ ಸಿಟಿ ಸಹಯೋಗದಲ್ಲಿ ಹೆಚ್ಐವಿ, ಏಡ್ಸ್ ತಡೆಗಟ್ಟಲು ತೀವ್ರಗೊಳಿಸಿದ ಐ.ಇ.ಸಿ. ಪ್ರಚಾರಾಂದೋಲನ 2025ರ ಕಾರ್ಯಕ್ರಮದಡಿ ಆಯೋಜಿಸಿದ್ದ ಮ್ಯಾರಥಾನ್ಗೆ ಜಿಲ್ಲಾಧಿಕಾರಿಯವರು ಹಸಿರು ನಿಶಾನೆ ತೋರಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಹೆಚ್ಐವಿ ಏಡ್ಸ್ ಬಗ್ಗೆ ಜಾಗರೂಕರಾಗುವ ಅವಶ್ಯವಿದೆ. ಎಲ್ಲರೂ ಮನುಷ್ಯರೇ ಆಗಿರುವುದರಿಂದ ಸಮಾಜದಲ್ಲಿ ಏಡ್ಸ್ ಸೋಂಕಿತರನ್ನು ಕೀಳಾಗಿ ನೋಡಿ ಕಡೆಗಣಿಸಬಾರದು. ಅವರಿಗೆ ಆತ್ಮಸ್ಥೈರ್ಯ ತುಂಬಿ ಇತರರಂತೆ ಬದುಕುವ ಅವಕಾಶ ಮಾಡಿಕೊಡಬೇಕು. ಅವರೊಂದಿಗೆ ಮಾತನಾಡುವುದರಿಂದ, ಕೈ ಕುಲುಕುವುದರಿಂದ ಹೆಚ್ಐವಿ ಏಡ್ಸ್ ಹರಡುವುದಿಲ್ಲ. ಪ್ರಜ್ಞಾವಂತ ನಾಗರಿಕರಾದ ನಾವೆಲ್ಲರೂ ಅವರ ಜೊತೆ ಉತ್ತಮ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದರು.
ಏಡ್ಸ್ ಕಾಯಿಲೆಗೆ ಚಿಕಿತ್ಸೆ ಇದೆ. ಮುಖ್ಯವಾಗಿ ಯುವಕರು ಇತರರಿಗೂ ಅರಿವು ಮೂಡಿಸಬೇಕು. ಸಾಮುದಾಯಿಕ ಪ್ರಜ್ಞೆ ಜಾಗೃತವಾಗಬೇಕು. ಎಚ್.ಐ.ವಿ ಏಡ್ಸ್ ನಿಯಂತ್ರಣ, ಜಾಗೃತಿ ಸರ್ಕಾರದ ಇಲಾಖೆಗಳ ಕೆಲಸ ಮಾತ್ರವಲ್ಲ. ನಗರದ ರೋಟರಿ ಸಂಸ್ಥೆ, ಸ್ನೇಹಜ್ಯೋತಿ ನೆಟ್ವರ್ಕ್, ಸಮತಾ ಸೊಸೈಟಿ ಸೇರಿದಂತೆ ನಗರದ ಹಲವು ಸಂಘ ಸಂಸ್ಥೆಗಳು ಏಡ್ಸ್ ಕುರಿತು ತಳಮಟ್ಟದಿಂದ ಕೆಲಸ ಮಾಡುತ್ತಿವೆ. ಜಾಗೃತಿ ನಿರಂತರವಾಗಿರಬೇಕು ಮುಂದಿನ ದಿನಗಳಲ್ಲಿ ಆರೋಗ್ಯಪೂರ್ಣ ಚಾಮರಾಜನಗರಕ್ಕಾಗಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ ಅಧಿಕಾರಿ ಡಾ. ರವಿಕುಮಾರ್, ಸಿಮ್ಸ್ನ ನಿವಾಸಿ ವೈದ್ಯಾಧಿಕಾರಿ ಡಾ. ಮಹೇಶ್, ಆರೋಗ್ಯ ಶಿಕ್ಷಣ ಅಧಿಕಾರಿ ದೊರೆಸ್ವಾಮಿ ನಾಯಕ್, ರಕ್ತನಿಧಿ ಕೇಂದ್ರದ ಮಹದೇವಪ್ರಸಾದ್, ರೋಟರಿ ಸಿಲ್ಕ್ ಸಿಟಿ ಶಮೀತ್, ನಾಗಕೈವಲ್ಯ ಎಂಟರ್ ಪ್ರೈಸಸ್, ಮಹೀಂದ್ರ ಹಾಗೂ ಈಶ್ವರಿ ಟ್ರಾಕ್ಟರ್ಸ್ ಕಂಪನಿ ಪ್ರತಿನಿಧಿಗಳು, ಇತರರು ಈ ಸಂದರ್ಭದಲ್ಲಿ ಇದ್ದರು.
ಆರಂಭದಲ್ಲಿ ಯಳಂದೂರಿನ ರಂಗದೇಗುಲ ಕಲಾವೇದಿಕೆಯ ಶಾಂತರಾಜು ಮತ್ತು ತಂಡದವರು ಎಚ್.ಐ.ವಿ. ಏಡ್ಸ್ ಬಗ್ಗೆ ಜನಜಾಗೃತಿ ಗೀತೆಗಳನ್ನು ಪ್ರಸ್ತುತಪಡಿಸಿದರು.

























