
ಸಂಜೆವಾಣಿ ವಾರ್ತೆ
ಬಳ್ಳಾರಿ,ಜ.23 ಜಿಲ್ಲಾ ಮಾನವ ಅಭಿವೃದ್ಧಿ-2025 ಮತ್ತು ಸಮಗ್ರ ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031 ರವರೆಗೆ ವರದಿ ತಯಾರಿಕೆ ಕುರಿತಂತೆ ಅಧಿಕಾರಿಗಳು ನೀಡುವ ವರದಿಯಲ್ಲಿನ ಅಂಶಗಳು ಜಿಲ್ಲೆಯ ಅಭಿವೃದ್ಧಿ ನಿರ್ಣಯಿಸುವ ಪೂರಕ ಅಂಶಗಳಾಗಿರಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ನ ಹೊಸ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಾನವ ಅಭಿವೃದ್ಧಿ-2025 ಮತ್ತು ಸಮಗ್ರ ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031 ರವರೆಗೆ ವರದಿ ತಯಾರಿಕೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ವರದಿಗಳ ತಯಾರಿಕೆಗೆ ದತ್ತಾಂಶಗಳು, ಸೂಚಕಗಳು ಹಾಗೂ ಸೂಚ್ಯಾಂಕಗಳ ಕುರಿತು ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಒಂದು ದೇಶದ ಅಭಿವೃದ್ಧಿ ಎಂದರೆ ಮಾನವನ ಅಭಿವೃದ್ಧಿ ಅಳತೆಯ ಮೂಲಕ ಹೇಳಬಹುದಾಗಿದ್ದು, ಪ್ರತಿಯೊಂದು ರಾಷ್ಟ್ರಗಳು ಇಂತಹ ವರದಿಗಳನ್ನು ತಯಾರಿಸುತ್ತವೆ. ವಿಶ್ವದಲ್ಲಿಯೇ ಆರ್ಥಿಕತೆಯಲ್ಲಿ ಭಾರತ ದೇಶ 5ನೇ ಸ್ಥಾನದಲ್ಲಿದ್ದು, ಅಭಿವೃದ್ಧಿಯಲ್ಲಿದೆ. ಆದರೆ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಭಾರತ ದೇಶ 130 ನೇ ಸ್ಥಾನದಲ್ಲಿದೆ. ಇದಕ್ಕೆ ಕಾರಣ ಮಾನವ ಸಂಪನ್ಮೂಲ ಅಭಿವೃದ್ಧಿ ಹೊಂದುತ್ತಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.
ಜಿಲ್ಲಾ ಮಾನವ ಅಭಿವೃದ್ಧಿ ವರದಿಯು ಜಿಲ್ಲೆಯ ಜನರ ಕಲ್ಯಾಣ, ಶಿಕ್ಷಣ, ಆರೋಗ್ಯ ಮತ್ತು ಆದಾಯದಂತಹ ಅಂಶಗಳನ್ನು ಅಳೆಯುವ ಬಹಳ ಮುಖ್ಯವಾದ ವರದಿಯಾಗಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳು ವರದಿ ತಯಾರಿಕೆ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯನ್ನು ನೀಡುವ ಮೂಲಕ ಜಿಲ್ಲೆಯ ಅಭಿವೃದ್ದಿಗೆ ಸಹಕರಿಸಬೇಕು. ನಿಖರವಾದ ಅಂಕಿ- ಅಂಶಗಳನ್ನು ನೀಡುವಿದರಿಂದ ಬಳ್ಳಾರಿಯು ಜಿಲ್ಲಾ ಮಾನವ ಅಭಿವೃದ್ಧಿಯಲ್ಲಿ ಮುಂದುವರಿಯಲಿದೆ ಎಂದು ಹೇಳಿದರು.
2014-15 ರ ಸುಚ್ಯಾಂಕದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಬಳ್ಳಾರಿ ಜಿಲ್ಲೆಯು 0.513 ಇತ್ತು. 2019-2020 ರಲ್ಲಿ 0.730 ಕಾಣಬಹುದಾಗಿದೆ. ಹಾಗಾಗಿ ಅಭಿವೃದ್ಧಿಗೆ ಪೂರಕವಾಗಿ ವರದಿಗಳನ್ನು ಸಿದ್ಧಪಡಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಳೆಯ ದತ್ತಾಂಶಗಳನ್ನು ನೀಡದೇ, ಇತ್ತೀಚಿನ ದತ್ತಾಂಶಗಳನ್ನು ಮಾತ್ರ ನೀಡಬೇಕು. ವರದಿ ಉತ್ತಮವಾಗಿ ರೂಪುಗೊಳ್ಳಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ನಿಖರ ಮಾಹಿತಿ ನೀಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಶಿಕ್ಷಣ, ಆರೋಗ್ಯ ಪೋಷಣಾ ಸ್ಥಿತಿ, ಜೀವನೋಪಾಯ, ಮೂಲಸೌಕರ್ಯ, ಸಾಮಾಜಿಕ ಒಳಗೊಳ್ಳುವಿಕೆ ಹಾಗೂ ಪರಿಸರದ ಸುಸ್ಥಿರತೆ ಸೇರಿದಂತೆ ವಿವಿಧ ಮಾನವ ಅಭಿವೃದ್ಧಿ ಸೂಚ್ಯಂಕಗಳ ಆಧಾರದ ಮೇಲೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವುದು ಈ ವರದಿಗಳ ಪ್ರಮುಖ ಗುರಿಯಾಗಿರುತ್ತದೆ. ಅಧಿಕಾರಿಗಳು ದತ್ತಾಂಶ ಸಂಗ್ರಹಣೆ, ವಿಶ್ಲೇಷಣೆ, ಇಲಾಖಾವಾರು ಸಹಕಾರ ಮತ್ತು ಕಾಲಮಿತಿಯೊಳಗೆ ಮಾಹಿತಿಯನ್ನು ಒದಗಿಸಬೇಕು. ಜಿಲ್ಲೆಯ ಸಮಗ್ರ ಹಾಗೂ ಸಮತೋಲನೆಯುತ ಅಭಿವೃದ್ಧಿಗಾಗಿ ಇಲಾಖೆಗಳ ನಡುವೆ ಪರಸ್ಪರ ಸಮನ್ವಯ ಅಗತ್ಯ ಎಂದು ಅವರು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕ(ನಿವೃತ್ತ) ಶ್ರೀನಿವಾಸ್ ರಾವ್ ಅವರು ಮಾತನಾಡಿ, ಜಿಲ್ಲಾ ಮಾನವ ಅಭಿವೃದ್ಧಿ ವರದಿಗೆ ಅತ್ಯಂತ ಮಹ್ವತ್ವವಾದ ಮೌಲ್ಯವಿದೆ. ಇದು ದೀರ್ಘ, ಆರೋಗ್ಯಕರ ಮತ್ತು ಸೃಜನಾತ್ಮಕ ಜೀವನ ನಡೆಸಲು, ಶಿಕ್ಷಣ ಪಡೆಯಲು ಮತ್ತು ಯೋಗ್ಯ ಜೀವನ ಮಟ್ಟಕ್ಕೆ ಬೇಕಾದ ಸಂಪನ್ಮೂಲಗಳನ್ನು ಹೊಂದಲು ಅವಕಾಶ ನೀಡುತ್ತದೆ. ಹಾಗಾಗಿ ಅಧಿಕಾರಿಗಳು ತಾವು ತಯಾರಿಸುವ ವರದಿಯಿಂದ ಜಿಲ್ಲೆಯ ಅಭಿವೃದ್ಧಿ ಅವಲಂಬಿತವಾಗಿರುತ್ತದೆ. ವಸ್ತುಸ್ಥಿತಿ ವರದಿ ತಯಾರಿಕೆಗೆ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.
ಇನ್ನೋರ್ವ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ನಿರಂಜನ್ ಅವರು ಮಾತನಾಡಿ, ಮಾನವ ಅಭಿವೃದ್ಧಿ ಸೂಚ್ಯಂಕ ತಯಾರಿಕೆಗೆ ಜನರ ಜೀವನ ಮಟ್ಟ, ಶಿಕ್ಷಣ, ಆರೋಗ್ಯ, ಆದಾಯ ಸೇರಿದಂತೆ ಇತರೆ ಅಂಕಿ ಅಂಶಗಳನ್ನು ಪರಿಗಣಿಸಲಾಗುತ್ತದೆ. ನಿಖರವಾದ ಮಾಹಿತಿ ಮತ್ತು ಅಂಕಿ ಅಂಶಗಳನ್ನು ನೀಡಿದರೆ ಉತ್ತಮ ವರದಿಯಾಗುತ್ತದೆ ಎಂದು ಅವರು ಹೇಳಿದರು.
ಇದೇ ವೇಳೆ ರಾಷ್ಟ್ರೀಯ ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಜಿಪಂ ಯೋಜನಾಧಿಕಾರಿ ಪ್ರಮೋದ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.























