
ಮೂಡುಬಿದಿರೆ: ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ್ ಆಳ್ವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಿಸಿದೆ.
ಎ. ೪ರಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿ ರುವ ೫ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಈ ಗೌರವ ಪ್ರದಾನ ಮಾಡಲಾಗುತ್ತದೆ.
ಎಂ. ಮೋಹನ್ ಆಳ್ವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷರಾಗಿದ್ದು, ಕರಾವಳಿ ಕರ್ನಾಟಕದ ಗ್ರಾಮೀಣ ಪ್ರದೇಶಗಳಿಗೆ ಗುಣಮಟ್ಟದ ಶಿಕ್ಷಣ ತಲುಪಿಸಿದ ಗಣ್ಯರಲ್ಲಿ ಒಬ್ಬರಾಗಿದ್ದಾರೆ. ಮೂಡುಬಿದಿರೆ ಕೇಂದ್ರವಾಗಿ ಕಾರ್ಯ ನಿರ್ವಹಿಸುವ ಆಳ್ವಾಸ್ ಸಂಸ್ಥೆಗಳ ಮೂಲಕ ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ ನೂರಾರು ಕೋರ್ಸ್ಗಳನ್ನು ಆರಂಭಿಸಿ ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿದ್ದಾರೆ. ಇವರ ನೇತೃತ್ವದಲ್ಲಿ ಶಿಕ್ಷಣದ ಜೊತೆಗೆ ಕಲೆ, ಸಂಸ್ಕೃತಿ, ಕ್ರೀಡೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಆಳ್ವಾಸ್ ನುಡಿಸಿರಿ ಹಾಗೂ ವಿರಾಸತ್ ಅಂತಹ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಭಾರತೀಯ ಪರಂಪರೆಯನ್ನು ಉತ್ತೇಜಿಸುವಲ್ಲಿ ಇವರ ಪಾತ್ರ ದೊಡ್ಡದಿದೆ.
ಈ ಹಿಂದೆಯೂ ಇವರ ಸಾಧನೆಗಳನ್ನು ಗುರುತಿಸಿ ೨೦೧೦ರಲ್ಲಿ ಮಂಗಳೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿತ್ತು. ಇತ್ತೀಚೆಗೆ ವಾರಾಣಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಭಾರತ ಸರ್ಕಾರದ ಆಯುಷ್ ಸಚಿವಾಲಯದ ಅಧೀನದಲ್ಲಿರುವ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠವು ಇವರಿಗೆ ’ಫೆಲೋ ಆಫ್ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠ’ ಗೌರವ ನೀಡಿ ಪುರಸ್ಕರಿಸಿತ್ತು. ಈ ದೀರ್ಘಕಾಲದ ಸೇವೆ ಯನ್ನು ಪರಿಗಣಿಸಿ ಬೆಂಗಳೂರು ನಗರ ವಿಶ್ವವಿದ್ಯಾಲಯವು ಇದೀಗ ಡಾಕ್ಟರೇಟ್ ನೀಡುತ್ತಿದೆ.
ಕರ್ನಾಟಕದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಗೌರವ ಪ್ರದಾನ ಮಾಡಲಿದ್ದು, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಮಹಾನಿರ್ದೇಶಕ ಬಿನಯಕುಮಾರ್ ದಾಸ್, ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಸಚಿವ ರಮೇಶ್ ಬಿ. ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.





















