Home ಜಿಲ್ಲೆ ಮೈಸೂರು ಮಕ್ಕಳಿಗೆ ವಿಜ್ಞಾನ, ಸಂಸ್ಕೃತಿಯ ಶಿಕ್ಷಣ ದೊರಕಬೇಕು: ಕೆ.ಬಿ.ಚಂದ್ರಶೇಖರ್

ಮಕ್ಕಳಿಗೆ ವಿಜ್ಞಾನ, ಸಂಸ್ಕೃತಿಯ ಶಿಕ್ಷಣ ದೊರಕಬೇಕು: ಕೆ.ಬಿ.ಚಂದ್ರಶೇಖರ್

ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಫೆ.27:
ವಿಜ್ಞಾನ ಮತ್ತು ಸಂಸ್ಕೃತಿಯ ಸಮ್ಮಿಲನದ ಶಿಕ್ಷಣ ನಮ್ಮ ಮಕ್ಕಳಿಗೆ ದೊರಕಬೇಕು. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸುವುದರ ಜೊತೆಗೆ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ವಿಕಸನಗೊಳಿಸುವ ಕೆಲಸವನ್ನು ಶಿಕ್ಷಣ ಸಂಸ್ಥೆಗಳು ಮಾಡಬೇಕು ಎಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಕರೆ ನೀಡಿದರು.


ಅವರು ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ವಿಜ್ಞಾನ ವಸ್ತು ಪ್ರದರ್ಶನ, ಸಂಸ್ಕೃತಿ ಸಂಭ್ರಮ ಹಾಗೂ ವಿವಿಧ ವೈಜ್ಞಾನಿಕ ಮಾದರಿಗಳ ಪ್ರದರ್ಶನ ಕಾರ್ಯುಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಜ್ಞಾನ ಎಂದರೆ ಕೇವಲ ಪುಸ್ತಕದ ಅಧ್ಯಯನ ಅಲ್ಲ. ಅದು ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣ. ಪ್ರಾಚೀನ ಕಾಲದಿಂದಲೂ ನಮ್ಮ ಋಷಿ ಮುನಿಗಳು ವೇದ ಮತ್ತು ವಿಜ್ಞಾನದ ಆವಿಷ್ಕಾರಗಳನ್ನು ಸಮ್ಮಿಲನಗೊಳಿಸಿ ನಮ್ಮ ಬದುಕು ಕಟ್ಟಿಕೊಟ್ಟಿದ್ದಾರೆ. ಆಧುನಿಕ ಕಾಲಘಟ್ಟದಲ್ಲಿ ವಿಜ್ಞಾನದ ಆವಿಷ್ಕಾರಗಳು ನಮ್ಮ ಬದುಕಿನ ಭಾಗವಾಗಿವೆ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಬೇಕು. ಬಿಜಿಎಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ.ಜೆ.ಎನ್.ರಾಮಕೃಷ್ಣೇಗೌಡರು ವಿಜ್ಞಾನ ಮೇಳಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿ ದೆಸೆಯಲ್ಲಿಯೇ ಮಕ್ಕಳಿಗೆ ವೈಜ್ಞಾನಿಕ ಆವಿಷ್ಕಾರಗಳ ಮನಸ್ಥಿತಿಯನ್ನು ರೂಪಿಸಿದ್ದಾರೆ. ತಮ್ಮದೇ ಪರಿಕಲ್ಪನೆಯಲ್ಲಿ ವೈಜ್ಞಾನಿಕ ಆವಿಷ್ಕಾರಗಳನ್ನು ನಿರ್ಮಿಸಿ ಶಾಲೆಯ ಮಕ್ಕಳು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಿರುವುದು ಶ್ಲಾಘನೀಯ ಎಂದು ಕೆ.ಬಿ.ಚಂದ್ರಶೇಖರ್ ತಿಳಿಸಿದರು.


ವಿಜ್ಞಾನ ಮೇಳವನ್ನು ಉದ್ಘಾಟಿಸಿದ ಸಂಸ್ಥೆಯ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಂಡು ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಎಂ.ಕೆ.ಹರಿಚರಣತಿಲಕ್, ಕೆ.ಆರ್.ನೀಲಕಂಠ, ಪತ್ರಕರ್ತ ಹೆಚ್.ಬಿ.ಮಂಜುನಾಥ್, ವಕೀಲರಾದ ರಾಜೇಗೌಡ, ಚಟ್ಟಂಗೆರೆ ನಾಗೇಶ್ ಶಿಕ್ಷಕರಾದ ಪ್ರಸಾದೇಗೌಡ,ರಾಮಚಂದ್ರ ಸೇರಿದಂತೆ ಹಲವರು ಅತಿಥಿಗಳಾಗಿದ್ದರು.