ಮುಜರಾಯಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧ

ಬೆಂಗಳೂರು, ಆ.೧೭- ರಾಜ್ಯಾದ್ಯಂತ ಮುಜರಾಯಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದ್ದು, ಇಂದಿನಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಲೋಟ, ತಟ್ಟೆಯಲ್ಲಿ ಪ್ರಸಾದ ನೀಡುವಂತಿಲ್ಲ ಎಂದು ಆದೇಶಿಸಲಾಗಿದೆ.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಯಾಗಲಿದ್ದು, ನಿಯಮ ಉಲ್ಲಂಘಿಸಿರುವರ ವಿರುದ್ಧ ದಂಡ ವಿಧಿಸುವಂತೆ ಸಂಬಂಧಪಟ್ಟ ದೇವಾಲಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ದೇವಾಲಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳು ಬಳಸುತ್ತಿರುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ತಿಳಿಸಲಾಗಿದೆ.

ಈ ಕುರಿತುಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದು, ದೇವಸ್ಥಾನದ ಒಳಾಂಗಣದಲ್ಲಿ ಪ್ಲಾಸ್ಟಿಕ್ ಬಳಸುವುದನ್ನು ನಿಷೇಧಿಸಲಾಗಿದೆ. ದೇವಸ್ಥಾನದ ಹೊರಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ನಿರ್ಧಾರ ಮಾಡುತ್ತವೆ. ಈ ನಿರ್ಧಾರವನ್ನು ಪರಿಸರದ ಸ್ವಚ್ಛತೆಯನ್ನು ಗಮನದಲ್ಲಿಟ್ಟುಕೊಂಡು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.