ಸಂವೇದನೆ ಕಳಕೊಂಡ ಕಾಂಗ್ರೆಸ್ ಸರ್ಕಾರಸಿ.ಟಿ.ರವಿ ಟೀಕೆ

ಬೆಳಗಾವಿ ಅ.೩ ರಾಜ್ಯದ ಕಾಂಗ್ರೆಸ್ ಸರಕಾರ ಸಂವೇದನೆ ಕಳೆದುಕೊಂಡಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿಯ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಟೀಕಿಸಿದ್ದಾರೆ.
ಸುದ್ದಿಗಾರರ ಜೊತೆ ಇಂದು ಮಾತನಾಡಿದ ಅವರು, ಬೆಳಗಾವಿಯಲ್ಲಿ ಸರಕಾರ, ಸಚಿವರಿಗೆ ಜನರ ಸಂಕಷ್ಟಕ್ಕಿಂತ ಚುನಾವಣೆಯ ಪ್ರತಿಷ್ಠೆಯೇ ದೊಡ್ಡದಾಗಿದೆ. ಸಹಕಾರಿ ಕ್ಷೇತ್ರದ ಚುನಾವಣೆಯಲ್ಲಿ ಮುಳುಗಿದ್ದಾರೆಯೇ ಹೊರತು ಜನರ ಸಂಕಷ್ಟ ಕೇಳುವ ಸಂವೇದನೆ ಅವರಿಗೆ ಇರಲಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಲಕ್ಷಾಂತರ ಹೆಕ್ಟೇರ್‍ಗಳಲ್ಲಿ ಬೆಳೆ ಹಾನಿ ಸಂಭವಿಸಿದೆ. ಮನೆ, ಜಾನುವಾರು ಕಳಕೊಂಡಿದ್ದಾರೆ. ಅನೇಕರು ಜೀವ ಕಳಕೊಂಡು ಸಂಕಷ್ಟದಲ್ಲಿದ್ದಾರೆ ಎಂದು ವಿವರಿಸಿದರು. ಈಗಲಾದರೂ ಸಂವೇದನೆ ತೋರಿಸಿ ಎಂದು ಆಗ್ರಹಿಸಿದರು. ರೈತರ ಸಂಕಷ್ಟದ ನಡುವೆ ಅವರಿಗೆ ನಾನು ಮುಖ್ಯಮಂತ್ರಿ, ನಾನು ಮುಖ್ಯಮಂತ್ರಿ ಎಂಬುದೇ ಮುಖ್ಯವಾಗಿದೆ. ಯಾರು ಮುಖ್ಯಮಂತ್ರಿ ಎಂಬುದು ಮುಖ್ಯವಲ್ಲ; ಜನರು ನಿಮಗೆ ಅಧಿಕಾರ ಕೊಟ್ಟಿದ್ದಾರೆ. ನೀವು ರೈತರ, ಜನರ ಸಂಕಷ್ಟಕ್ಕೆ ಸ್ಪಂದಿಸಿ ಎಂದು ಒತ್ತಾಯಿಸಿದರು.
ಇದು ನಾನು ಮುಖ್ಯಮಂತ್ರಿ, ನಾನು ಮುಖ್ಯಮಂತ್ರಿ ಎನ್ನುವ ಕಾಲವೇ ಎಂದು ಕೇಳಿದರು. ನಿಮಗೆ ಏನಾಗಿದೆ? ಇನ್ನು ಎರಡೂವರೆ ವರ್ಷ ನಾನೇ ಸಿಎಂ ಎನ್ನುತ್ತಾರೆ. ೫ ವರ್ಷ ನಿಮ್ಮ ಪಕ್ಷಕ್ಕೆ ಅಧಿಕಾರ ಕೊಟ್ಟಿದ್ದಾರೆ. ಭ್ರಷ್ಟಾಚಾರ ಮಾಡಲು ನಿಮಗೆ ಅಧಿಕಾರ ಕೊಟ್ಟಿದ್ದಾರಾ ಎಂದು ಪ್ರಶ್ನೆ ಮಾಡಿದರು. ಗುತ್ತಿಗೆದಾರರ ಪತ್ರ ಓದಿ ನಿಮಗೆ ನಾಚಿಕೆ ಆಗಲಿಲ್ಲವೇ. ಜನ ನಮ್ಮ ಬಗ್ಗೆ ಏನು ಅಂದುಕೊಳ್ತಾರೆ ಎಂದು ಅನಿಸಲಿಲ್ಲವೇ ಎಂದು ಕೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮಗೇ ಈ ಪತ್ರ ಬರೆದಿದ್ದಾರೆ ಎಂದು ತಿಳಿಸಿದರು.