೧೬ರಂದು ಮಂಗಳೂರಲ್ಲಿ ಸಹಕಾರ ಸಪ್ತಾಹ

ಮಂಗಳೂರು : ಸಹಕಾರ ತತ್ವ ಮತ್ತು ಆಚರಣೆಯಲ್ಲಿ ಅಪಾರ ವಿಶ್ವಾಸ ಇರಿಸಿಕೊಂಡಿದ್ದ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಜನ್ಮದಿನದ ಪ್ರಯುಕ್ತ ಪ್ರತಿವರ್ಷ ನ.೧೪ರಿಂದ ೨೦ರವರೆಗೆ ದೇಶಾದ್ಯಂತ ‘ಅಖಿಲ ಭಾರತ ಸಹಕಾರ ಸಪ್ತಾಹ’ ಆಚರಿಸಲಾಗುತ್ತಿದೆ. ಇದರ ಭಾಗವಾಗಿ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನ.೧೬ರಂದು ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರೂ ಆಗಿರುವ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ‘ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು’ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಇದೇ ರೀತಿ ರಾಜ್ಯ ಮಟ್ಟದಲ್ಲಿ ವಿವಿಧ ಜಿಲ್ಲೆಗಳಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ರಾಜ್ಯ ಮಟ್ಟದ ಕಾರ್ಯಕ್ರಮ
ಮಂಗಳೂರಿನಲ್ಲಿ ‘ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ’ ವಿಷಯದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗುವುದು. ಸಮಾರಂಭವನ್ನು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಸಹಕಾರ ಮಾಣಿಕ್ಯ ಪ್ರಶಸ್ತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಪ್ರದಾನ ಮಾಡಲಿದ್ದಾರೆ. ಉತ್ತಮ ಸಹಕಾರ ಸಂಘಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಪ್ರಶಸ್ತಿ ವಿತರಿಸಲಿದ್ದಾರೆ. ಉತ್ತಮ ಸ್ವ-ಸಹಾಯ ಸಂಘಗಳಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ, ಶಾಸಕ ಜಿ.ಟಿ. ದೇವೇಗೌಡ ಪುರಸ್ಕಾರ ನೀಡಲಿದ್ದಾರೆ. ವಸ್ತು ಪ್ರದರ್ಶನ ಮಳಿಗೆಗಳನ್ನು ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಉದ್ಘಾಟಿಸುತ್ತಾರೆ. ಸಂಸದ ಬ್ರಿಜೇಶ್ ಚೌಟ ಸಹಕಾರ ಸಪ್ತಾಹದ ಧ್ವಜಾರೋಹಣ ಮಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ವಹಿಸಲಿದ್ದಾರೆ ಎಂದರು.
ವಿವಿಧ ಪ್ರಶಸ್ತಿ, ಪುರಸ್ಕಾರ ಪ್ರದಾನ
ಸಹಕಾರ ಮಾಣಿಕ್ಯ ಪ್ರಶಸ್ತಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ದೇಶದಿಂದ ೨೦೨೪ರಿಂದ ‘ಸಹಕಾರ ಮಾಣಿಕ್ಯ ಪ್ರಶಸ್ತಿ’ ನೀಡಲು ನಿರ್ಧರಿಸಲಾಗಿದ್ದು, ಈ ಬಾರಿಯೂ ಸರ್ವಾಂಗೀಣ ಪ್ರಗತಿ ಸಾಧಿಸಿ ಆಯ್ಕೆಗೊಂಡ ಸಹಕಾರಿ ಸಂಘಗಳಿಗೆ ಪ್ರಶಸ್ತಿ ಜತೆಗೆ ೫ ಗ್ರಾಂ ಚಿನ್ನದ ಪದಕ, ?೧೦ ಸಾವಿರ ನಗದು ಹಾಗೂ ಪಾರಿತೋಷಕ ನೀಡಿ ಗೌರವಿಸಲಾಗುವುದು.