
ಸಂಜೆವಾಣಿ ನ್ಯೂಸ್
ಮೈಸೂರು: ಜು.22:- ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ವಿವಿಧ ಮಹನೀಯರ ಜಯಂತಿಗಳ ಆಚರಣೆ ಮಾಡಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಜಯಂತಿಗಳಾದ ನುಲಿಯ ಚಂದಯ್ಯ ಜಯಂತಿ, ಹಾಗೂ ಶ್ರೀ ಕೃಷ್ಣ ಜಯಂತಿಗಳ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆ.16 ರಂದು ಶ್ರೀಕೃಷ್ಣ ಜಯಂತಿಯನ್ನು ಕಲಾಮಂದಿರದ ಕಿರು ಮಂದಿರದಲ್ಲಿ ಆಚರಣೆ ಮಾಡಲಾಗುವುದು. ವೇದಿಕೆ ಮೇಲೆ ಗೀತಾ ಗಾಯನ ಏರ್ಪಡಿಸಲಾಗುವುದು. ಸಮುದಾಯದ ಮುಖಂಡರ ಸಲಹೆಯಂತೆ ಡಾ.ಶೆಲ್ವ ಪಿಳ್ಳೆ ಅಯ್ಯಂಗಾರ್ ಅವರನ್ನು ಶ್ರೀ ಕೃಷ್ಣ ಅವರ ಬಗ್ಗೆ ವಿಶೇಷ ಉಪನ್ಯಾಸ ನೀಡಲು ಆಹ್ವಾನಿಸಲಾಗುವುದು ಎಂದರು.
ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದೇ ಆಗಿದೆ. ನುಲಿಯ ಚಂದಯ್ಯ ಹಾಗೂ ಶ್ರೀಕೃಷ್ಣÀರ ತತ್ವ ಆದರ್ಶ ಗುಣಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸರ್ಕಾರಿ ಶಾಲಾ ಮಕ್ಕಳಿಗೆ ಶ್ರೀಕೃಷ್ಣನ ವೇಷ ಭೂಷಣ ಸ್ಪರ್ಧೆ ಏರ್ಪಡಿಸಬೇಕು. ಸರ್ಕಾರಿ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಅವರಿಗೆ ಬಹುಮಾನ ವಿತರಣೆ ಮಾಡಬೇಕು. ಜಯಂತಿಗಳು ನಡೆಯುವ ಸ್ಥಳದ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ, ಹಾಗೂ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು. ಸಮುದಾಯದ ಮುಖಂಡರು ತಮ್ಮ ತಮ್ಮ ಸಮುದಾಯದ ಬಡವರಿಗೆ ಸಹಾಯ ಮಾಡಬೇಕು. ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಸಹಾಯ ಮಾಡಬೇಕು. ಜಯಂತಿಗಳನ್ನು ಆಚರಣೆ ಮಾಡುವುದು ಅವರ ಆಚಾರ ವಿಚಾರದಾರೆಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಜಯಂತಿಗಳನ್ನು ಆಚರಣೆ ಮಾಡಿದಕ್ಕೆ ಒಂದು ಅರ್ಥ ಬರುತ್ತದೆ ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ಸುದರ್ಶನ್ ಮಾತನಾಡಿ, ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಮೆರವಣಿಗೆಗೆ ಕಲಾ ತಂಡಗಳನ್ನು ನೀಡಲಾಗುವುದು. ಕಲಾಮಂದಿರದಲ್ಲಿ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ತಿಳಿಸಿದರು.
ಸಮುದಾಯದ ಮುಖಂಡರು ಮಾತನಾಡಿ, ನುಲಿಯ ಚಂದಯ್ಯ ಜಯಂತಿ ಆಚರಣೆ ಬೇರೆ ದಿನಾಂಕವನ್ನು ತಿಳಿಸಲಾಗುವುದು
ತಮ್ಮ ತಮ್ಮ ಜಯಂತಿಗಳ ಆಚರಣೆಯ ದಿವ್ಯ ಸಾನಿಧ್ಯಕ್ಕೆ ತಮ್ಮ ಸಮುದಾಯದ ಸ್ವಾಮೀಜಿಗಳ ಹೆಸರನ್ನು ಆಯ್ಕೆ ಮಾಡಿ ಒಂದೆರಡು ದಿನಗಳಲ್ಲಿ ನೀಡಲಾಗುವುದು. ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡಲಾಗುವುದು ಎಂದು ಸಮುದಾಯದ ಮುಖಂಡರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಜಯಂತಿಗಳ ಆಚರಣೆಯ ಸಂಬಂಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.