
ಸಂಜೆವಾಣಿ ವಾರ್ತೆ:
ಕೊಟ್ಟೂರು: ಸೆಪ್ಟೆಂಬರ್17: ಕೊಟ್ಟೂರು ಪಟ್ಟಣದಲ್ಲಿ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ಗುರುವಾರ ಅದ್ಧೂರಿಯಾಗಿ ನಡೆಯಿತು. ವಿವಿಧ ಬಡಾವಣೆಗಳು ಹಾಗೂ ಸಂಘ–ಸಂಸ್ಥೆಗಳ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳನ್ನು ಭಕ್ತರು ಮೆರವಣಿಗೆಯ ಮೂಲಕ ಕೊಂಡೊಯ್ದು ಭಕ್ತಿ, ಸಂಭ್ರಮದೊಂದಿಗೆ ಪಟ್ಟಣ ಪಂಚಾಯತಿ ನಿಗದಿ ಪಡಿಸಿದ ಸ್ಥಳದಲ್ಲಿ ವಿಸರ್ಜನೆ ಮಾಡಿದರು .
ಗಣೇಶ ಮೂರ್ತಿಗಳ ಮೆರವಣಿಗೆ ಸಾಗಿದ ಪ್ರಮುಖ ರಸ್ತೆಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಿನದಾಗಿತ್ತು. ಡೊಳ್ಳು, ತಮಟೆ ಹಾಗೂ ವಿವಿಧ ವಾದ್ಯಗಳ ಸದ್ದು ಮೆರವಣಿಗೆಗೆ ಮತ್ತಷ್ಟು ಮೆರುಗು ನೀಡಿತು. ಯುವಕರು ಹಾಗೂ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದು, ಮಹಿಳೆಯರು ಮತ್ತು ಹಿರಿಯರೂ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಮೆರವಣಿಗೆಯುದ್ದಕ್ಕೂ ‘ಗಣಪತಿ ಬಪ್ಪಾ ಮೋರಿಯಾ’ ಸೇರಿದಂತೆ ವಿವಿಧ ಘೋಷಣೆಗಳು ಮೊಳಗಿದವು ಕೆಲವೆಡೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿತ್ತು.ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇನ್ಸ್ಪೆಕ್ಟರ್ ದುರುಗಪ್ಪ ನೇತೃತ್ವದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರು. ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ, ಮೆರವಣಿಗೆಯ ಸಂಚಾರ ವ್ಯವಸ್ಥೆಯನ್ನು ನಿಯಂತ್ರಿಸಲಾಯಿತು.
ಭಕ್ತರ ಸಂಭ್ರಮ:
ಮೂರು ದಿನಗಳ ಕಾಲ ಭಕ್ತಿ–ಶ್ರದ್ಧೆಯಿಂದ ಪೂಜಿಸಲ್ಪಟ್ಟ ವಿಘ್ನೇಶ್ವರನಿಗೆ ಅಂತಿಮ ಪೂಜೆ ಸಲ್ಲಿಸಿದ ಭಕ್ತರು ಪ್ರಾರ್ಥಿಸಿ ಭಾವಪೂರ್ಣವಾಗಿ ಬೀಳ್ಕೊಟ್ಟರು. ವಿಸರ್ಜನಾ ಮೆರವಣಿಗೆಯು ಪಟ್ಟಣದಾದ್ಯಂತ ಹಬ್ಬದ ವಾತಾವರಣ ಮೂಡಿಸಿತು.ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳು, ಯುವಕರು, ಮಹಿಳೆಯರು, ಮಕ್ಕಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಗಣೇಶ ವಿಸರ್ಜನಾ ಕಾರ್ಯಕ್ರಮವು ಶಾಂತಿಯುತವಾಗಿ ಸಂಪನ್ನಗೊಂಡಿತು.































