
ಪುತ್ತೂರು: ಮಳೆಗಾಲ ಆರಂಭದೊಂದಿಗೆ ಜನತೆಯನ್ನು ಕಾಡುವ ಡೆಂಗ್ಯು ಪ್ರಕರಣ ಪತ್ತೆಯಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಕಟ್ಟೆಚ್ಚರದಲ್ಲಿರುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದಾದ್ಯಂತ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತ ರಕ್ತ ತಪಾಸಣಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಪಟ್ಟಣ ಹಾಗೂ ಗ್ರಾಮೀಣ ಭಾಗದ ಜನರು ಜ್ವರ ಕಂಡುಬಂದಲ್ಲಿ ಅದನ್ನು ನಿರ್ಲಕ್ಷ್ಯ ಮಾಡದೆ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಜನರ ಆರೋಗ್ಯದ ಹಿತ ದೃಷ್ಟಿಯಿಂದ ಸರ್ಕಾರ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಕ್ತ ತಪಾಸಣಾ ವ್ಯವಸ್ಥೆಯನ್ನು ಮಾಡಿದ್ದು ಇದನ್ನು ಬಳಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಆರೋಗ್ಯ ಇಲಾಖೆಗೆ ಸಂಬಂಧಪಟ್ಟ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವುದು ಮತ್ತು ಡೆಂಗ್ಯು ಲಕ್ಷಣಗಳ ಬಗ್ಗೆ ಜನರಿಗೆ ತಿಳಿಸುವುದು ಮತ್ತು ಜ್ವರ ಕಂಡು ಬಂದಲ್ಲಿ ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳುವಂತೆ ನಿರ್ದೇಶನ ನೀಡಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಸಿದ್ದತೆಗಳನ್ನು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಎಚ್ಚರವಿರಲಿ..
ನಿಮ್ಮ ಮನೆಯ ಸುತ್ತ ಮುತ್ತ ಶುಚಿತ್ವ ಕಾಪಾಡಿಕೊಳ್ಳಬೇಕು. ಮನೆ ಸುತ್ತಮುತ್ತ ನೀರು ನಿಂತುಕೊಳ್ಳದಂತೆ ನೋಡಿಕೊಳ್ಳಬೇಕು. ಎಳನೀರ ಚಿಪ್ಪಿ, ತೆಂಗಿನ ಕಾಯಿ ಚಿಪ್ಪಿ, ಬಾಟಲಿ, ಹಳೆಯ ಪಾತ್ರೆಗಳು, ಟಯರ್ಗಳು ಮನೆ ಸುತ್ತ ಇದ್ದಲ್ಲಿ ಅದರಲ್ಲಿ ನೀರು ಶೇಖರಣೆಯಾಗದಂತೆ ಎಚ್ಚರವಹಿಸಬೇಕು. ಡೆಂಗ್ಯು ಅಪಾಯಕಾರಿಯಾಗಿದ್ದು ಅದರ ಬಗ್ಗೆ ಜಾಗೃತಿ ಮತ್ತು ಎಚ್ಚರಿಕೆ ಅಗತ್ಯವಾಗಿದೆ. ನಮ್ಮ ಪರಿಸರದ ಸುತ್ತ ಮುತ್ತ ನಾವೇ ಸ್ವಚ್ಚತೆಯನ್ನು ಕಾಪಾಡುವುದರ ಮೂಲಕ ಸೊಳ್ಳೆಗಳ ಉತ್ಪತ್ತಿಯಾಗದಂತೆ ಎಚ್ಚರವಹಿಸಬೇಕು ಎಂದು ಶಾಸಕರು ಮನವಿ ಮಾಡಿದ್ದಾರೆ.
























