ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಬದಲಾವಣೆ

ಮೈಸೂರು, ಅ.೫- ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗಲಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.ಜಾತಿ ಸಮೀಕ್ಷೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಯಲ್ಲಿ ಎಷ್ಟು ಗೊಂದಲ ಇದೆ ಎಂಬುದನ್ನು ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೋಡಿದ್ರೆ ಗೊತ್ತಾಗುತ್ತೆ. ೬೦ ಪ್ರಶ್ನೆ ಜನರ ಮುಂದಿಟ್ಟಿದ್ದಾರೆ.

ಈ ಸಮೀಕ್ಷೆಯಿಂದ ಗೊಂದಲಗಳೇ ಹೆಚ್ಚು. ರಾಜ್ಯ ಸರ್ಕಾರ ಪೂರ್ವ ತಯಾರಿ ಇಲ್ಲದೆ ಆತುರದ ನಿರ್ಧಾರ ತೆಗೆದುಕೊಂಡಿದೆ. ವಿಶೇಷ ಚೇತರನ್ನು ಸೇರಿಸಿಕೊಂಡಿರುವುದಕ್ಕೆ ಟೀಕೆಗಳು ವ್ಯಕ್ತವಾಗುತ್ತಿದೆ. ನವೆಂಬರ್ ಕ್ರಾಂತಿ ಎಂದು ಕಾಂಗ್ರೆಸ್‌ನಲ್ಲಿ ಚರ್ಚೆ ನಡೆಯುತ್ತಿದೆ. ನವೆಂಬರ್ ಕ್ರಾಂತಿಗೂ ಜಾತಿ ಗಣತಿ ಕ್ರಾಂತಿಗೂ ಸಂಬಂಧ ಇರುವಂತೆ ಚರ್ಚೆ ನಡೆಯುತ್ತಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಸಿಗಬೇಕು. ಇದು ನಮ್ಮ ಪಕ್ಷದ ನಿಲುವು. ದೇಶಗಳಲ್ಲಿ ಜಾತಿ ಗಣತಿ ಮಾಡುತ್ತೇವೆ ಎಂದು ಪ್ರಧಾನಮಂತ್ರಿಗಳು ಘೋಷಣೆ ಮಾಡಿದ್ದಾರೆ.

ಈ ನಡುವೆ ರಾಜ್ಯದಲ್ಲಿ ಈ ರೀತಿ ಗೊಂದಲ ಸೃಷ್ಟಿ ಮಾಡುವ ಅವಶ್ಯಕತೆ ಇರಲಿಲ್ಲ. ಸಿದ್ದರಾಮಯ್ಯ ಬಹಳ ಆತುರದಲ್ಲಿದ್ದಾರೆ.ಮೈಸೂರಿನಲ್ಲಿ ಅವರ ಶಕ್ತಿ ಪ್ರದರ್ಶನ ನಡೆಸಿದ್ರು. ಸಿದ್ದರಾಮಯ್ಯ ರ್ಯಾಂಪ್ ವಾಕ್ ಮಾಡ್ತಾ ಇದ್ರು. ಆಗ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಇಬ್ಬರೂ ಅಡ್ರೆಸ್‌ಗೆ ಇರಲಿಲ್ಲ.

ಕಾಂಗ್ರೆಸ್ ಶಾಸಕರೇ ನವೆಂಬರ್ ಕ್ರಾಂತಿ ಎಂದು ಹೇಳುತ್ತಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಬೇಡಿ, ಅದನ್ನ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ವೇಣುಗೋಪಾಲ್ ಹೇಳ್ತಾರೆ. ಆದ್ರೆ ಹೈಕಮಾಂಡ್ ಎಲ್ಲೂ ನಾಯಕತ್ವ ಬದಲಾವಣೆ ಇಲ್ಲಾ ಎಂದು ಹೇಳುತ್ತಿಲ್ಲ. ಆದ್ದರಿಂದ ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗುತ್ತೆ. ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ ಎಂದು ಸ್ಫೋಟಕ ಭವಿಷ್ಯ ನುಡಿದರು.