
ಸಂಜೆವಾಣಿ ನ್ಯೂಸ್
ಮೈಸೂರು: ಸೆ.01:- ನಗರ ಸ್ಥಳೀಯ ಸಂಸ್ಥೆಗಳು ನೀರು, ರಸ್ತೆ, ಒಳಚರಂಡಿ, ಬೀದಿ ದೀಪಗಳ ವ್ಯವಸ್ಥೆ ಮಾಡಬೇಕು. ಈ ಸೌಲಭ್ಯಗಳನ್ನು ಕಲ್ಪಿಸಲು ಸಂಪನ್ಮೂಲಗಳ ಕ್ರೂಢೀಕರಣ ಮಾಡಬೇಕು ಎಂದು ಪೌರಾಡಳಿತ ಸಚಿವರಾದ ಹೆಚ್ ಸಿ ಬಾಲಕೃಷ್ಣ ಅವರು ತಿಳಿಸಿದರು.
ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮೈಸೂರು ಚಾಮರಾಜನಗರ ಹಾಗೂ ಕೊಡಗು, ಜಿಲ್ಲೆಗಳ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳನ್ನು ನೀಡುವುದು ನಮ್ಮ ಇಲಾಖೆಯ ಜವಾಬ್ದಾರಿಯಾಗಿದೆ. ಆಡಳಿತವನ್ನು ನಡೆಸಲು ಸಂಪನ್ಮೂಲ ಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪನ್ಮೂಲ ನೀಡುತ್ತವೆ. ಅಲ್ಲದೆ ಸ್ಥಳೀಯವಾಗಿ ಇರುವ ಆಸ್ತಿಗಳು ಹಾಗೂ ಸ್ಥಳೀಯ ಸಂಸ್ಥೆಗಳಿಂದ ನೀಡುವ ಸೌಲಭ್ಯಗಳ ಟ್ಯಾಕ್ಸ್ ಗಳನ್ನು ನಿಗಧಿತ ಅವಧಿಯಲ್ಲಿ ವಸೂಲಿ ಮಾಡಬೇಕು. ಸ್ವಚ್ಚತೆ, ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆ ಉತ್ತಮವಾಗಿ ಇರಬೇಕು ಎಂದು ಸೂಚನೆ ನೀಡಿದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇಂಜಿನಿಯರ್ ಹುದ್ದೆಗಳು ಖಾಲಿ ಇರುವ ಕಡೆಗೆ ಪಿ ಡಬ್ಲ್ಯೂ ಡಿ ಇಲಾಖೆಯಿಂದ ಹೆಚ್ಚುವರಿ ಹೊಣೆ ನೀಡಿ ನಿಯೋಜನೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮಂಡಿಸುವ ಬಜೆಟ್ ಕಾಟಾಚಾರಕ್ಕೆ ಆಗಬಾರದು. ತೆರಿಗೆ ವಸೂಲಾತಿ ವ್ಯವಸ್ಥಿತವಾಗಿ ಮಾಡಿ, ತೆರಿಗೆ ವಸೂಲಾತಿಗೆ ಪೂರಕವಾಗಿ ಬಜೆಟ್ ಮಂಡನೆ ಆಗಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುಧಾನ ಶೇಕಡಾ 30 ರಷ್ಟು ಬರುತ್ತದೆ. ನಗರ ಸ್ಥಳೀಯ ಸಂಸ್ಥೆಗಳ ಮೇಲೆ ಇರುವ ಕೋರ್ಟ್ ಪ್ರಕರಣಗಳ ಕುರಿತು ಪೌರಾಡಳಿತ ಇಲಾಖೆಯ ಕಾನೂನು ವಿಭಾಗ ಸಮರ್ಥವಾಗಿ ವಾದ ಮಂಡಿಸಬೇಕು. ಸ್ಥಳೀಯ ಸಂಸ್ಥೆಗಳು ಆಸ್ತಿಗಳ ಒತ್ತುವರಿ ತೆರವು ಮಾಡಲು ಅಭಿಯಾನ ಕಾರ್ಯವನ್ನು ಹಮ್ಮಿಕೊಳ್ಳುವುದು. ಒತ್ತುವರಿ ತೆರವಿನಲ್ಲಿ ಯಾವುದೇ ರಾಜಿ ಇಲ್ಲ ಎಂದರು.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಮಾಡಿಕೊಂಡು ಬಯೋ ಗ್ಯಾಸ್ ಉತ್ಪಾದನೆ ಮಾಡಿಕೊಳ್ಳಲು ಹಲವು ಕಂಪನಿಗಳು ಮುಂದೆ ಬಂದಿವೆ. ಈ ಕಂಪನಿಗಳ ಜೊತೆ ಸಭೆ ನಡೆಸಿ ಒಪ್ಪಂದ ಮಾಡಿಕೊಳ್ಳಲಾಗುವುದು. ಖಾಸಗಿ ರಸ್ತೆಗಳನ್ನು ಸರ್ಕಾರಿ ರಸ್ತೆಗಳಾಗಿ ಮಾಡುವ ಕಾಯ್ದೆ ಜಾರಿಗೆ ತರಲಾಗಿದೆ. ಯಾವುದೇ ಅನಧಿಕೃತ ಬಡಾವಣೆಗಳು ನಿರ್ಮಾಣ ಆಗಿದ್ದರೆ ಅವನ್ನು ನಿರ್ಮೂಲನೆ ಮಾಡಲಾಗುವುದು. ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿದೆ ಇದ್ದರೆ ಇಂಜಿನಿಯರ್ ಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಗುತ್ತಿಗೆದಾರರು ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಳ್ಳದೆ ಇದ್ದರೆ ಹಾಗೂ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದೆ ಹೋದರೆ ಮೂರು ಬಾರಿ ನೋಟಿಸ್ ನೀಡಿ ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಎಂದು ಸೂಚನೆ ನೀಡಿದರು.
ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆಯ ಸಚಿವರಾದ ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಚಾಮರಾಜ ನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶವ ಸಂಸ್ಕಾರ ಮಾಡಲು ಬರ್ನಿಂಗ್ ಯೂನಿಟ್ ಗಳನ್ನು ಸ್ಥಾಪಿಸಬೇಕು. ಸ್ಥಳೀಯ ಸಂಸ್ಥೆಗಳ ಜಾಗವನ್ನು ಕೆಲವು ಕಡೆ ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದು, ಹಲವು ಪ್ರಕರಣಗಳು ಕೋರ್ಟ್ ನಲ್ಲಿ ಇವೆ. ಈ ಬಗ್ಗೆ ಇಲಾಖೆ ಕ್ರಮವಹಿಸಬೇಕು ಎಂದು ತಿಳಿಸಿದರು.
ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಪೆÇನ್ನಣ್ಣ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ ಅಮೃತ್ 2 ಯೋಜನೆಯಡಿ ವಿರಾಜಪೇಟೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಇನ್ನೂ ಮುಗಿದಿಲ್ಲ. ಮನೆ ಮನೆಗೆ ನಲ್ಲಿ ಸಂಪರ್ಕ ಮಾಡಿಸಿಲ್ಲ. ಪುರಸಭೆಯ ಕಟ್ಟಡ ನಿರ್ಮಾಣ ಬಾಕಿ ಇದೆ. ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ತಿಳಿಸಿದರು.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ ಟಿ ದೇವೇಗೌಡ ಅವರು ಮಾತನಾಡಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇಂಜಿನಿಯರ್ ಗಳ ಕೊರತೆ ಇದೆ. ಮೈಸೂರಿನ ವ್ಯಾಪ್ತಿಯಲ್ಲಿ 1000 ಖಾಸಗಿ ಬಡಾವಣೆಗಳನ್ನು ಅಭಿವೃದ್ಧಿ ಮಾಡದೆ ನೀಡಿದ್ದಾರೆ. ಈ ಖಾಸಗಿ ಬಡಾವಣೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ನೀಡಲು ಸಾಧ್ಯವಾಗುತ್ತಿಲ್ಲ. ಖಾಸಗಿ ಬಡಾವಣೆಗಳಿಗೆ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.
ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ ಡಿ ಹರೀಶ್ ಗೌಡ ಅವರು ಮಾತನಾಡಿ ಲಕ್ಷ್ಮಣತೀರ್ಥ ನದಿಗೆ ಹುಣಸೂರು ನಗರದ ಒಳಚರಂಡಿ ನೀರು ಸೇರುತ್ತಿದ್ದು, ನದಿ ಕಲುಷಿತವಾಗುತ್ತಿದೆ. ಈ ಬಗ್ಗೆ ನಗರಾಭಿವೃದ್ಧಿ ಸಚಿವರ ಗಮನಕ್ಕೂ ತರಲಾಗಿದೆ. ನೀರು ಸೇರದಂತೆ ತಡೆಯಲು ಕಾಮಗಾರಿಗಾಗಿ 72 ಕೋಟಿ ಎಸ್ಟಿಮೇಟ್ ಮಾಡಿ ಕಳುಹಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದ ಅವರು ಹುಣಸೂರು ನಗರಸಭೆಯಲ್ಲಿ ಸಿಬ್ಬಂದಿಗಳ ಕೊರತೆ ಇದ್ದು ಸಿಬ್ಬಂದಿಗಳ ನೇಮಕ ಮಾಡಬೇಕು ನಗರಸಭೆ ಆಸ್ತಿಗಳ ಒತ್ತುವರಿ ಆಗಿವೆ. ಇವುಗಳ ಒತ್ತುವರಿ ತೆರವು ಆಗಬೇಕು. ಇದರಿಂದ ನಗರಸಭೆಗೆ ಆದಾಯ ಬರುತ್ತದೆ ಎಂದು ಮನವಿ ಮಾಡಿದರು.
ಕೆ ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ ರವಿಶಂಕರ್ ಅವರು ಮಾತನಾಡಿ ಕೆ ಆರ್ ಪುರಸಭೆ ವ್ಯಾಪ್ತಿಯಲ್ಲಿ ಯು ಜಿ ಡಿ ಕಾಮಗಾರಿ ಸಮರ್ಪಕವಾಗಿ ಆಗುತ್ತಿಲ್ಲ. ಹಲವು ಕಡೆ ಬಾಕಿ ಇದೆ. ಪೈಪ್ ಲೈನ್ ಕಾಮಗಾರಿಗೆ ರಸ್ತೆಗಳನ್ನು ಅಗೆದಿದ್ದು ವಾಹನಗಳು ಓಡಾಡಲು ತೊಂದರೆ ಆಗುತ್ತಿದೆ. ಪುರಸಭೆ ವ್ಯಾಪ್ತಿಯಲ್ಲಿ 3 ವೆಟ್ ವೆಲ್ ಗಳು ತುಂಬಿ ಹರಿಯುತ್ತವೆ ಆದ್ದರಿಂದ ಹೊಸ ವೆಟ್ ವೆಲ್ ಗಳನ್ನು ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದರು.
ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾದ ಪಿ ಎಸ್ ರವೀಂದ್ರ ಅವರು ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನಗಳನ್ನು ಸಕಾಲದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ಮುಂದಿನ ವರ್ಷಕ್ಕೆ ಕೊಂಡೊಯ್ದರೆ ಎಸ್ ಆರ್ ರೇಟ್ ಹೆಚ್ಚಾಗುತ್ತದೆ. ನಗರ ಸ್ಥಳೀಯ ಸಂಸ್ಥೆಗಳು ಸಂಪನ್ಮೂಲ ಕ್ರೋಢೀಕರಣ ಮಾಡಿ ಈ ಮೊತ್ತದಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು. ಟ್ಯಾಕ್ಸ್ ಕಲೆಕ್ಷನ್ ವ್ಯವಸ್ಥಿತವಾಗಿ ಆಗಬೇಕು. ಅಗತ್ಯವಿರುವೆಡೆ ಕೊಳವೆ ಬಾವಿಗಳನ್ನು ಕೊರೆಸಬೇಕು.
ಸಭೆಯಲ್ಲಿ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೆಂಕಟೇಶ್, ಕೆ ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ ರವಿಶಂಕರ್, ವಿಧಾನಸಭಾ ಪರಿಷತ್ ನ ಸದಸ್ಯರಾದ ಮಂಜೇಗೌಡ, ಡಿ ತಿಮ್ಮಯ್ಯ, ಕೆ ಶಿವಕುಮಾರ್, ವಿವೇಕಾನಂದ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಬಿ ಬಿ ಕಾವೇರಿ ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

































