Home ಜಿಲ್ಲೆ ಮೈಸೂರು 20ರಂದು ಹೇಮರಡ್ಡಿ ಮಲ್ಲಮ್ಮ ಜಯಂತಿ

20ರಂದು ಹೇಮರಡ್ಡಿ ಮಲ್ಲಮ್ಮ ಜಯಂತಿ

ಸಂಜೆವಾಣಿ ನ್ಯೂಸ್
ಮೈಸೂರು: ಮೇ.05:-
ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ವಿವಿಧ ಮಹನೀಯರ ಜಯಂತಿಗಳ ಆಚರಣೆ ಮಾಡಲಾಗುತ್ತಿದೆ. ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದರು.


ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿಯ ಆಚರಣೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಮೇ 20ರಂದು ಬೆಳಗ್ಗೆ 11.30ಕ್ಕೆ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಗೀತಾ ಗಾಯನ ಏರ್ಪಡಿಸಲಾಗುವುದು. ಸಮುದಾಯದ ಮುಖಂಡರ ಸಲಹೆಯಂತೆ ಸೂಚಿಸುವ ವ್ಯಕ್ತಿಯನ್ನು ದಿವ್ಯ ಸಾನಿಧ್ಯ ಹಾಗೂ ವಿಶೇಷ ಉಪನ್ಯಾಸ ನೀಡಲು ಆಹ್ವಾನಿಸಲಾಗುವುದು ಎಂದರು.


ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ. ಮಹನೀಯರ ತತ್ವ ಆದರ್ಶ, ಗುಣಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ವೇದಿಕೆಯ ಮೇಲೆ ಗಣ್ಯರಿಗೆ ಹೂ ಗುಚ್ಚ ನೀಡಿ ಸ್ವಾಗತ ಮಾಡುವ ಬದಲು ಆಯಾ ಜಯಂತಿಗಳಲ್ಲಿ ಆಯ ಮಹನೀಯರ ಜೀವನ ಚರಿತ್ರೆ ಕುರಿತ ಪುಸ್ತಕಗಳನ್ನು ನೀಡಿ ಸ್ವಾಗತ ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಜಯಂತಿಗಳು ನಡೆಯುವ ಸ್ಥಳದ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ, ಹಾಗೂ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು. ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸುದರ್ಶನ್ ಮಾತನಾಡಿ, ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಕಲಾಮಂದಿರದಲ್ಲಿ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ತಿಳಿಸಿದರು.


ಸಮುದಾಯದ ಮುಖಂಡರು ಮಾತನಾಡಿ, ಜಯಂತಿಯ ಆಚರಣೆಯ ದಿವ್ಯ ಸಾನಿಧ್ಯಕ್ಕೆ ತಮ್ಮ ಸಮುದಾಯದ ಸ್ವಾಮೀಜಿಗಳ ಹೆಸರನ್ನು ಆಯ್ಕೆ ಮಾಡಿ ಒಂದೆರಡು ದಿನಗಳಲ್ಲಿ ನೀಡಲಾಗುವುದು. ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡಲಾಗುವುದು ಎಂದು ಸಮುದಾಯದ ಮುಖಂಡರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.