ಜು.1ರಂದು ನಿಖಿಲ್ ಕುಮಾರಸ್ವಾಮಿಗೆ ಅದ್ದೂರಿ ಸ್ವಾಗತ

ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಜೂ.20:
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜುಲೈ 01 ನೇ ಮಂಗಳವಾರ ಕೆ.ಆರ್.ಪೇಟೆ ಪಟ್ಟಣಕ್ಕೆ ಆಗಮಿಸಲಿದ್ದು ಪಕ್ಷದ ಯುವ ನಾಯಕನನ್ನು ಅದ್ದೂರಿಯಾಗಿ ಸ್ವಾಗತಿಸಲು ತಾಲೂಕು ಜೆಡಿಎಸ್ ಕಾರ್ಯಕರ್ತರ ಸಭೆ ನಿರ್ಧರಿಸಿತು.

ಪಕ್ಷದ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಆಗಮನದ ಹಿನ್ನೆಲೆಯಲ್ಲಿ ಪಟ್ಟಣದ ಬಸವೇಶ್ವರ ನಗರದಲ್ಲಿರುವ ಶಾಸಕ ಹೆಚ್.ಟಿ.ಮಂಜು ಗೃಹ ಕಛೇರಿಯಲ್ಲಿ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಹೆಚ್.ಟಿ.ಮಂಜು ಜೆಡಿಎಸ್ ರೈತರ ಪಕ್ಷ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಅವರ ಪುತ್ರ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಸದಾ ದೇಶದ ಅನ್ನಧಾತರ ಸಮಸ್ಯೆಗಳ ಪರಿಹಾರಕ್ಕೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಪಕ್ಷವನ್ನು ನಂಬಿರುವ ನಾಡಿನ ರೈತರು ಮತ್ತು ಯುವ ಸಮುದಾಯವನ್ನು ಉಳಿಸಬೇಕಾದರೆ ಪಕ್ಷ ತಳಮಟ್ಟದಲ್ಲಿ ಮತ್ತಷ್ಟು ಶಕ್ತಿಯುತವಾಗಬೇಕು. ಪಕ್ಷದ ಸಂಘಟನೆಗಾಗಿ ನಿಖಿಲ್ ಸುಧೀರ್ಘ 58 ದಿನಗಳ ಕಾಲ ನಿರಂತರವಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ನಿಖಿಲ್ ಪ್ರಬುದ್ದ ರಾಜಕಾರಣಿಯಾಗಿ ಹೊರಹೊಮ್ಮಿದ್ದು ರಾಜ್ಯದ ಜನ ಅವರ ಮೇಲೆ ಭರವಸೆ ಹೊಂದಿದ್ದಾರೆ. ಕೆ.ಆರ್.ಪೇಟೆ ವಿದಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗಟ್ಟಿಯಾಗಿದ್ದು ನಿಖಿಲ್ ಕಾರ್ಯಕ್ರಮಕ್ಕೆ ಹಣ ಕೊಟ್ಟು ಜನರನ್ನು ಕರೆತರುವುದು ಬೇಡ. ಬದಲಾಗಿ ಪ್ರತಿಯೊಬ್ಬ ಕಾರ್ಯಕರ್ತನೂ ಸಂಪೂರ್ಣ ಜವಾಬ್ದಾರಿ ಹೊತ್ತು ತಮ್ಮ ತಮ್ಮ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆತರುವ ಮೂಲಕ ನಿಖಿಲ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲೆಡೆ ಕಾಂಗ್ರೆಸ್ ಜಯಭೇರಿ ಭಾರಿಸಿದರೂ ಕೆ.ಆರ್.ಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದಿದೆ. ಇದಕ್ಕೆ ಇಲ್ಲಿನ ಕಾರ್ಯಕರ್ತರು ಪ್ರಮುಖ ಕಾರಣ. ನಾನು ಕ್ಷೇತ್ರದ ಶಾಸಕನಾಗಿದ್ದರೂ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತ, ನಾನು ಹೋರಾಟದ ನೆಲೆಗಟ್ಟಿನಿಂದ ಬಂದವನು. ವಿದ್ಯಾರ್ಥಿ ದೆಸೆಯಲ್ಲಿಯೇ ಡೈರಿ ನಿರ್ದೇಶಕನಾಗಿ ಆಯ್ಕೆಯಾಗಿ ರೈತ ಸಂಘದ ಮೂಲಕ ಹೋರಾಟಗಾರನಾಗಿ ರಾಜಕೀಯಕ್ಕೆ ಬಂದು ಇಂದು ಶಾಸಕನಾಗಿದ್ದೇನೆ. ಮನ್ ಮುಲ್ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ ಕ್ಷೇತ್ರದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಸೋತಿಲ್ಲ. ತಾಲೂಕಿನ ಕೆಲವರು ಕ್ಷೇತ್ರದಲ್ಲಿ ಜೆಡಿಎಸ್ ಮುಗಿದ ಕಥೆ ಎಂದು ಹೇಳಿಕೊಂಡು ತಿರುಗುತ್ತಿದ್ದರೂ ನಮ್ಮ ಪಕ್ಷ ಡೈರಿ ಮತ್ತು ಸಹಕಾರ ಸಂಘಗಳ ಚುನಾವಣೆಯಲ್ಲಿ ಗೆದ್ದು ತನ್ನ ಪ್ರಾಭಲ್ಯವನ್ನು ನಿರೂಪಿಸಿದೆ. ಕ್ಷೇತ್ರದ ಅಭಿವೃದ್ದಿಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂಧಿಸುತ್ತಿಲ್ಲ. ವಿರೋಧ ಪಕ್ಷದ ಶಾಸಕನಾಗಿದ್ದರೂ ನಾನು ಧೃತಿಗೆಡದೆ ಜನರ ಕೆಲಸ ಮಾಡುತ್ತಿದ್ದೇನೆ. ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೂ ಕೆಡಿಪಿ ಸಭೆಗಳನ್ನು ನಡೆಸಿ ಜನರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಶ್ರಮಿಸುತ್ತಿದ್ದೇನೆ. ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅವಶ್ಯಕತೆಯಿಲ್ಲ. 2028 ಕ್ಕೆ ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಗಳಾಗಲಿದ್ದು ನಾವೆಲ್ಲರೂ ಅದಕ್ಕಾಗಿ ಶ್ರಮಿಸೋಣ ಎಂದು ಶಾಸಕ ಹೆಚ್.ಟಿ.ಮಂಜು ಕರೆ ನೀಡಿದರು.

ಅಧ್ಯಕ್ಷರನ್ನು ಬದಲಿಸಿ:- ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಮುಖಂಡರಾದ ವಕೀಲ ಧನಂಜಯ, ತಾ.ಪಂ ಮಾಜಿ ಸದಸ್ಯ ಬೂಕನಕೆರೆ ಹುಲ್ಲೇಗೌಡ ಸೇರಿದಂತೆ ಹಲವರು ಪಕ್ಷ ಸಂಘಟನೆಯ ದೃಷ್ಠಿಯಿಂದ ತಾಲೂಕು ಜೆಡಿಎಸ್ ಅಧ್ಯಕ್ಷ ಎ.ಎನ್.ಜಾನಕೀರಾಂ ಅವರನ್ನು ಬದಲಿಸಿ ಮತ್ತೊಬ್ಬ ಸಕ್ರಿಯ ಅಧ್ಯಕ್ಷರನ್ನು ನೇಮಕ ಮಾಡುವಂತೆ ಆಗ್ರಹಿಸಿದರು. ಕ್ಷೇತ್ರದಲ್ಲಿ ಜೆಡಿಎಸ್ ವರ್ಚಸ್ಸು ಕುಂದಿಲ್ಲ. ಮಾಜಿ ಶಾಸಕ ಬಿ.ಪ್ರಕಾಶ್, ಮಾಜಿ ಸ್ಟೀಕರ್ ಕೃಷ್ಣ, ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಸೇರಿದಂತೆ ಹಲವು ನಾಯಕರು ಸಂಕಷ್ಠದ ಸನ್ನಿವೇಶದಲ್ಲಿ ಜೆಡಿಎಸ್ ಪಕ್ಷಕ್ಕೆ ದ್ರೋಹ ಮಾಡಿ ಪಕ್ಷ ತೊರೆದರೂ ಕ್ಷೇತ್ರದಲ್ಲಿ ಜೆಡಿಎಸ್ ಸಧೃಡವಾಗಿ ಬೆಳೆದಿದೆ. ಇದಕ್ಕೆ ಕಾರಣ ಕಾರ್ಯಕರ್ತರು. ಜೆಡಿಎಸ್ ಕಾರ್ಯಕರ್ತರ ಪಕ್ಷವೇ ಹೊರತು ನಾಯಕರ ಹಿಂಬಾಲಕರ ಪಕ್ಷವಲ್ಲ. ಪಕ್ಷದೊಳಗಿದ್ದು ಕೆಲವರು ಪಕ್ಷ ದ್ರೋಹ ಮಾಡುತ್ತಿದ್ದಾರೆ. ಒಬ್ಬ ಪಕ್ಷ ದ್ರೋಹಿ ಪಕ್ಷ ತೊರೆದರೆ ನೂರಾರು ನಿಷ್ಟಾವಂತ ಕಾರ್ಯರ್ತರು ಪಕ್ಷದಲ್ಲಿ ಹೊಸದಾಗಿ ಹುಟ್ಟಿಕೊಳ್ಳುತ್ತಿದ್ದಾರೆ. ಕಾರ್ಯಕರ್ತರು ಕ್ಷೇತ್ರದ ಶಾಸಕರ ಬೆನ್ನಿಗೆ ನಿಂತು ಪಕ್ಷವನ್ನು ಗಟ್ಟಿಗೊಳಿಸುವ ಕೆಲಸ ಮಾಡೋಣ. ಶಾಸಕರು ಎಲ್ಲರೊಂದಿಗೆ ಚರ್ಚಿಸಿ ತಾಲೂಕು ಜೆಡಿಎಸ್ ಘಟಕಕ್ಕೆ ಹೊಸ ಅಧ್ಯಕ್ಷರನ್ನು ತರಬೇಕು. ನೂತನ ಅಧ್ಯಕ್ಷರಾದವರು ಶಾಸಕರು ಮತ್ತು ಪಕ್ಷದ ಕಾರ್ಯಕರ್ತರ ನಡುವಿನ ಕೊಂಡಿಯಾಗಿ ಕೆಲಸ ಮಾಡುವಂತಿರಬೇಕೆಂದರು.

ಸಭೆಯಲ್ಲಿ ರಾಜ್ಯ ಸಹಕಾರ ಮಾರಾಟ ಮಂಡಳಿಯ ನಿರ್ದೇಶಕ ಎಸ್.ಎಲ್.ಮೋಹನ್, ಅಕ್ಕಿಹೆಬ್ಬಾಳು ರಘು, ತಾ.ಪಂ ಮಾಜಿ ಸದಸ್ಯರಾದ ಮಲ್ಲೇನಹಳ್ಳಿ ಮೋಹನ್, ವಿ.ಎಂ.ಮಹದೇವೇಗೌಡ, ತೋಂಟಪ್ಪಶೆಟ್ಟಿ, ಬಿ.ಎಂ.ಕಿರಣ್, ಎಂ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್.ಕೆ.ಅಶೋಕ್,ಎಪಿಎಂಸಿ ಮಾಜಿ ಅಧ್ಯಕ್ಷ ಐನೋರಹಳ್ಳಿ ಮಲ್ಲೇಶ್, ತಾಲೂಕು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರೇಖಾ ಸೇರಿದಂತೆ ಹಲವರು ಮಾತನಾಡಿದರು.

ಆಯ್ಕೆ:- ಇದೇ ಸಂಧರ್ಭದಲ್ಲಿ ತಾಲೂಕು ಜೆಡಿಎಸ್ ರೈತಮೋರ್ಚಾ ಘಟಕದ ಅಧ್ಯಕ್ಷರಾಗಿ ತಾ.ಪಂ ಮಾಜಿ ಸದಸ್ಯ ಬೂಕನಕೆರೆ ಹುಲ್ಲೇಗೌಡ ಮತ್ತು ಕಾರ್ಯಾದ್ಯಕ್ಷರಾಗಿ ಬ್ಯಾಲದಕೆರೆ ನಂಜಪ್ಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.