
ಬೆಂಗಳೂರು, ಫೆ. ೧೮: ಬೆಳ್ಳಳ್ಳಿ ಕ್ವಾರಿಯಲ್ಲಿ ಕಸದ ವಿಲೇವಾರಿ ವಿರುದ್ಧ ಸ್ಥಳೀಯರು ವ್ಯಕ್ತಪಡಿಸಿರುವ ಆಕ್ರೋಶದ ಹಿನ್ನೆಲೆ ಪರಿಸ್ಥಿತಿಯನ್ನು ಶೀಘ್ರದಲ್ಲೇ ಸರಿಪಡಿಸಲಾಗುವುದು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸ್ಥಳೀಯ ನಿವಾಸಿಗಳ ಜೊತೆ ಮಾತುಕತೆ ನಡೆಸಿ ಮುಂದಿನ ೨-೩ ದಿನಗಳಲ್ಲಿ ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗುವುದು ಎಂದು ಭರವಸೆ ನೀಡಿದರು. ಈಗಾಗಲೇ ಘನತ್ಯಾಜ್ಯ ವಿಭಾಗದ ಅಧಿಕಾರಿಗಳು ಹಾಗೂ ಎಂಜಿನಿಯರ್ಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಮನವೊಲಿಸಲು ಪ್ರಯತ್ನಿಸಿದ್ದಾರೆ ಎಂದರು.
ಸ್ಥಳೀಯ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಣ ಬಿಡುಗಡೆ ಮಾಡುವಂತೆ ನಿವಾಸಿಗಳು ಒತ್ತಾಯಿಸಿದ್ದಾರೆ. ಈ ಬೇಡಿಕೆಯನ್ನು ಪರಿಗಣಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಹಣ ಬಿಡುಗಡೆಗೆ ಸಂಬಂಧಿಸಿದಂತೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದರು.
ಕಸದ ವಿಲೇವಾರಿ ಸಮಸ್ಯೆಯಿಂದ ಉಂಟಾಗಿರುವ ಅಸಮಾಧಾನವನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು, ಆದಷ್ಟು ಬೇಗ ಪರಿಸ್ಥಿತಿಯನ್ನು ಸಾಮಾನ್ಯಗೊಳಿಸುವ ನಿಟ್ಟಿನಲ್ಲಿ ಕ್ರಮವಹಿಸಲಿದ್ದಾರೆ ಎಂದು ಮಹೇಶ್ವರ್ ರಾವ್ ಸ್ಪಷ್ಟಪಡಿಸಿದರು.































