Home ಜಿಲ್ಲೆ ದಾವಣಗೆರೆ ೨ ಕ್ಷೇತ್ರ ಕೈಜಾರುವ ಭೀತಿ, ನಿದ್ರೆ ಬಾರದ ಸ್ಥಿತಿಯಲ್ಲಿ ಸಿಎಂ- ವಿಜಯೇಂದ್ರ

೨ ಕ್ಷೇತ್ರ ಕೈಜಾರುವ ಭೀತಿ, ನಿದ್ರೆ ಬಾರದ ಸ್ಥಿತಿಯಲ್ಲಿ ಸಿಎಂ- ವಿಜಯೇಂದ್ರ

ದಾವಣಗೆರೆ,ಏ.೫- ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳು ಕಾಂಗ್ರೆಸ್ ಪಕ್ಷದ ಕೈಜಾರಿ ಹೋಗುತ್ತಿದ್ದು, ಮುಖ್ಯಮಂತ್ರಿಗಳಿಗೆ ನಿದ್ರೆ ಬರುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ.


ಎರಡೂ ಕಡೆಗಳಲ್ಲಿ ಬಿಜೆಪಿ ಗೆದ್ದೇ ಗೆಲ್ಲುವ ವಾತಾವರಣ ನಿರ್ಮಾಣವಾಗಿದೆ. ಯಾವ ಕ್ಷೇತ್ರದಲ್ಲಿ ಹೆಚ್ಚು ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕೆಂಬ ಗೊಂದಲದಲ್ಲಿ ಮುಖ್ಯಮಂತ್ರಿಗಳು ಇದ್ದಾರೆ. ಇವತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ‘ಹಿಂದುಳಿದವರ ನಡೆ ಬಿಜೆಪಿಯ ಕಡೆ’ ನಡೆಯುತ್ತಿದೆ. ಸರ್ವ ಸಮಾಜದ ಜನರು ನಮ್ಮ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪ ಅವರನ್ನು ಗೆಲ್ಲಿಸಲು ಸಂಕಲ್ಪ ತೊಟ್ಟಿದ್ದಾರೆ ಎಂದು ತಿಳಿಸಿದರು. ಈ ಸಮಾವೇಶ ಮತ್ತು ನಮ್ಮ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿರುವ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ ಮತ್ತು ಪದಾಧಿಕಾರಿಗಳಿಗೆ ಅಭಿನಂದನೆಗಳು ಎಂದು ತಿಳಿಸಿದರು.


ಭ್ರಷ್ಟಾಚಾರದ ಕುರಿತು ಮಾತನಾಡುವ ನೈತಿಕತೆ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿಗಳಿಗೆ ಇಲ್ಲ ಎಂದು ಅವರು ಆಕ್ಷೇಪಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಲೂಟಿ ಮಾಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮತದಾರರಿಗೆ ದುಡ್ಡು ಹಂಚುತ್ತಿದ್ದಾರೆ. ಶಾಮನೂರು ಅವರ ನೋಟು, ಬಿಜೆಪಿಗೆ ವೋಟು ಎಂದು ನಮ್ಮ ಕಾರ್ಯಕರ್ತರು ಹೇಳುತ್ತಿದ್ದಾರೆ ಎಂದು ನುಡಿದರು. ಜನರು ಎರಡೂ ಕ್ಷೇತ್ರಗಳಲ್ಲಿ ಕಮಲದ ಹೂವನ್ನು ಅರಳಿಸಬೇಕೆಂಬ ಸಂಕಲ್ಪ ಮಾಡಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಯಕರ್ತರು ಇದೇವೇಳೆ ‘ಶಾಮನೂರು ಅವರ ನೋಟು, ಬಿಜೆಪಿಗೆ ವೋಟು’ ಎಂಬ ಘೋಷಣೆಗಳನ್ನೂ ಕೂಗಿದರು.


ಭ್ರಷ್ಟಾಚಾರದ ಹಣದಿಂದ ಈ ಕ್ಷೇತ್ರದ ಜನರ ಮತವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ನುಡಿದ ಅವರು, ಮತದಾರರು ಈಗಾಗಲೇ ಬಿಜೆಪಿ ಗೆಲ್ಲಿಸುವ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ಹಿಂದುಳಿದ ವರ್ಗಗಳ ವಿವಿಧ ನಿಗಮಗಳಿಗೆ ೫೫೦ ಕೋಟಿ ರೂಪಾಯಿ ನೀಡಿದ್ದರು.

ಸಿದ್ದರಾಮಯ್ಯನವರ ಸರಕಾರ ಕೇವಲ ೨೦೦- ೨೫೦ ಕೋಟಿಯನ್ನಷ್ಟೇ ಕೊಟ್ಟಿದೆ ಎಂದು ಗಮನ ಸೆಳೆದರು. ಹಿಂದುಳಿದ ವರ್ಗಗಳನ್ನು ಮತಬ್ಯಾಂಕಾಗಿ ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ. ಇದನ್ನು ಅರ್ಥ ಮಾಡಿಕೊಂಡು ಪ್ರಾಮಾಣಿಕ ವ್ಯಕ್ತಿ ಶ್ರೀನಿವಾಸದಾಸ ಕರಿಯಪ್ಪ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.


ಇವತ್ತು ಎಚ್.ಡಿ.ಕುಮಾರಸ್ವಾಮಿಯವರೂ ಬಂದಿದ್ದಾರೆ. ಜೆಡಿಎಸ್‌ನ ಎಲ್ಲ ಕಾರ್ಯಕರ್ತರೂ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. ಜೆಡಿಎಸ್ ಕೂಡ ನಮ್ಮ ಅಭ್ಯರ್ಥಿಗಳಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.