
ಅಫಜಲಪುರ,ಏ.29-ಕೌಟುಂಬಿಕ ಕಲಹದ ಕಾರಣ ಪತಿ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿ ನಂತರ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಮದರಾ (ಕೆ) ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮೀಪುತ್ರ ಎಂಬಾತ ತನ್ನ ಪತ್ನಿ ಅಂಜಲಿ (23) ಯನ್ನು ಮನೆಯಲ್ಲೇ ಕುಡುಗೋಲಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಹೆಂಡತಿಯನ್ನು ಕೊಂದ ನಂತರ, ತನ್ನ ಪುಟ್ಟ ಮಗುವನ್ನು ಎತ್ತಿಕೊಂಡು ಮದರಾ (ಕೆ) ಗ್ರಾಮದ ಸಮೀಪದ ಬಾವಿಗೆ ಜಿಗಿದಿದ್ದಾನೆ. ಲಕ್ಷ್ಮೀಪುತ್ರ ಮಗುವಿನೊಂದಿಗೆ ಬಾವಿಗೆ ಹಾರುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸಮಯಪ್ರಜ್ಞೆ ಮೆರೆದ ಗ್ರಾಮಸ್ಥರು ಕೂಡಲೇ ಬಾವಿಗೆ ಜಿಗಿದು ಮಗುವನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಲಕ್ಷ್ಮೀಪುತ್ರ ಬಾವಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಈ ಘಟನೆ ನಡೆದ ತಕ್ಷಣ ರೇವೂರು ಪೆÇಲೀಸರು ಮತ್ತು ಸೋಕೋ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಜಲಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಬಾವಿಯಿಂದ ಲಕ್ಷ್ಮೀಪುತ್ರನ ಶವವನ್ನು ಹೊರತೆಗೆಯಲಾಗಿದೆ. ಈ ಕುರಿತು ರೇವೂರು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಮತ್ತು ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.






















