Home ಜಿಲ್ಲೆ ಬೆಂಗಳೂರು ಶಾಸಕ ಮಂಜುನಾಥ್‌ಗೆ ಸಚಿವ ನೀಡಲು ಒತ್ತಾಯ

ಶಾಸಕ ಮಂಜುನಾಥ್‌ಗೆ ಸಚಿವ ನೀಡಲು ಒತ್ತಾಯ

ಮುಳಬಾಗಿಲು,ಜೂ,೮-ಕೋಲಾರ ಜಿಲ್ಲೆಯಲ್ಲಿ ಆರು ಕ್ಷೇತ್ರಗಳ ಪೈಕಿ ೪ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿದ್ದು ಎರಡನೇ ಹಂತದ ಸಚಿವ ಸಂಪುಟಕ್ಕೆ ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೊತ್ತೂರು ಜಿ.ಮಂಜುನಾಥ್‌ರನ್ನು ಸೇರ್ಪಡೆ ಮಾಡಿಕೊಳ್ಳಬೇಕೆಂದು ರಾಜ್ಯ ಕಾಂಗ್ರೆಸ್ ಸೇವಾದಳ ಮುಖಂಡ ಚಾಮರೆಡ್ಡಿಹಳ್ಳಿ ಸಿ.ಎಂ.ವೆಂಕಟರಾಮೇಗೌಡ ಕಾಂಗ್ರೆಸ್ ಹೈಕಮಾಂಡ್‌ನ್ನು ಒತ್ತಾಯಿಸಿದ್ದಾರೆ.


ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ಕೊತ್ತೂರು ಜಿ.ಮಂಜುನಾಥ್ ಶಾಸಕರಾಗಿದ್ದರು, ಈಗ ಕೋಲಾರ ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲೆಯಲ್ಲಿ ಪ್ರಭಾವಿ ನಾಯಕರು ಆಗಿರುವುದರಿಂದ ಅವರಿಗೆ ಸಚಿವ ಸ್ಥಾನ ನೀಡಿ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಿದರೆ ಜಿಲ್ಲೆಯ ಅಭಿವೃದ್ಧಿ ಜೊತೆಗೆ ಪಕ್ಷ ಸಂಘಟನೆಗೆ ಹೆಚ್ಚು ಅನುಕೂಲವಾಗುತ್ತದೆ ಎಂದರಲ್ಲದೆ ಇದನ್ನು ಮನಗಂಡು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಮತ್ತು ಪಕ್ಷದ ಹೈಕಮಾಂಡ್ ಸೇರಿದಂತೆ ಕೊತ್ತೂರು ಮಂಜುನಾಥ್‌ರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಮನವಿ ಮಾಡಿದರು.


ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಇವರಿಬ್ಬರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಬೇಕು, ಕೋಲಾರ ಜಿಲ್ಲೆಗೆ ಎರಡು ಸಚಿವ ಸ್ಥಾನ ನೀಡಿದರೆ ಜಿಲ್ಲೆಯ ಅಭಿವೃದ್ಧಿಗೆ ಮತ್ತು ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ಕೊಟ್ಟಂತಾಗುತ್ತದೆ ಎಂದು ಹೇಳಿದರು.


ಭಾರತ ದೇಶದಲ್ಲಿ ಅಲೆಮಾರಿ ಸಮುದಾಯದ ಏಕೈಕ ಶಾಸಕರಾಗಿರುವ ಕೊತ್ತೂರು ಜಿ.ಮಂಜುನಾಥ್‌ರಿಗೆ ಸಚಿವ ಸ್ಥಾನ ನೀಡಿದರೆ ಸಾಮಾಜಿಕ ಸ್ಥಾನಮಾನ ನೀಡಿದಂತಾಗುತ್ತದೆ ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ಅಭಿಪ್ರಾಯಪಟ್ಟರು.


ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಈಗಾಗಲೇ ಅವರ ತಂದೆ ಕೆಎಚ್ ಮುನಿಯಪ್ಪರಿಗೆ ಮೊದಲನೇ ಹಂತದಲ್ಲೇ ಕಾಂಗ್ರೆಸ್ ಹೈಕಮಾಂಡ್ ಸಚಿವ ಸ್ಥಾನ ನೀಡಿದ್ದಾರೆ ಹೀಗಿರುವಾಗ ಮಗಳಿಗೂ ಸಹ ಸಚಿವ ಸ್ಥಾನ ನೀಡುವುದು ಸಮಂಜಸವಲ್ಲ ಎಂದು ಉತ್ತರಿಸಿದರು.


ಜಿಲ್ಲಾ ಕಾಂಗ್ರೆಸ್ ಸೇವಾದಳದ ಮಾಜಿ ಅಧ್ಯಕ್ಷ ಹಾಗೂ ಟಿಎಪಿಸಿಎಂಎಸ್ ನಿರ್ದೇಶಕ ಕಗ್ಗಿನಹಳ್ಳಿ ಶ್ರೀನಿವಾಸ್, ಕಾಂಗ್ರೆಸ್ ಮೀನುಗಾರಿಕೆ ವಿಭಾಗದ ಜಿಲ್ಲಾಧ್ಯಕ್ಷ ಪಾಲೂರಹಳ್ಳಿ ರಂಗನಾಥ್ ಇದ್ದರು.