
ಕೋಲ್ಕತಾ.ಜು೮: ಪಶ್ಚಿಮ ಬಂಗಾಳದ ಬರುಯಿಪುರದಲ್ಲಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ೧೨ ವರ್ಷದ ಬಾಲಕಿಯ ಮೇಲಿನ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮುಖ್ಯ ಆರೋಪಿ ಪ್ರಭಾಶ್ ಮೊಂಡಲ್ ಪೊಲೀಸ್ ಎನ್ಕೌಂಟರ್ನಲ್ಲಿ ಹತನಾಗಿದ್ದಾನೆ. ಮಹಜರು ಪ್ರಕ್ರಿಯೆಗಾಗಿ ಸ್ಥಳಕ್ಕೆ ಕರೆದೊಯ್ದಾಗ, ಪೊಲೀಸರ ಗನ್ ಕಸಿದು ದಾಳಿಗೆ ಯತ್ನಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಬರುಯಿಪುರ ಪೊಲೀಸ್ ಠಾಣೆಯ ತನಿಖಾಧಿಕಾರಿಗಳ ತಂಡವು ಮುಂಜಾನೆ ಸುಮಾರು ೧೨:೪೫ ರ ಸುಮಾರಿಗೆ ಆರೋಪಿ ಪ್ರಭಾಶ್ ಮೊಂಡಲ್ನನ್ನು ಮೃತದೇಹ ಪತ್ತೆಯಾಗಿದ್ದ ಸುರ್ಜ್ಯಾಪುರ ಪ್ರದೇಶಕ್ಕೆ ಸ್ಥಳ ಮಹಜರು ನಡೆಸಲು ಕರೆದೊಯ್ದಿತ್ತು. ಈ ವೇಳೆ ತನಿಖಾ ಪ್ರಕ್ರಿಯೆ ಆರಂಭವಾಗುವ ಮುನ್ನವೇ ಚಾಣಾಕ್ಷತನದಿಂದ ವರ್ತಿಸಿದ ಆರೋಪಿ ಮೊಂಡಲ್, ಪೊಲೀಸ್ ಅಧಿಕಾರಿಯೊಬ್ಬರ ಪಿಸ್ತೂಲ್ ಕಸಿದುಕೊಂಡು ಪೊಲೀಸರ ಮೇಲೆಯೇ ಒಂದು ಸುತ್ತು ಗುಂಡು ಹಾರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.
ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ಆತ್ಮರಕ್ಷಣೆಗಾಗಿ ಪ್ರತಿ ದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ ಗಾಯಗೊಂಡ ಆರೋಪಿಯನ್ನು ತಕ್ಷಣವೇ ಬರುಯಿಪುರ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಜುಲೈ ೪ ರಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯ ಮೃತದೇಹವು ಮರುದಿನ ಸುರ್ಜ್ಯಾಪುರ ಹಾತ್ ಪ್ರದೇಶದಲ್ಲಿ ಚೀಲವೊಂದರಲ್ಲಿ ಪತ್ತೆಯಾಗಿತ್ತು. ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಭೀಕರವಾಗಿ ಕೊಲೆ ಮಾಡಿರುವುದು ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಬರುಯಿಪುರ-ಜೋಯನಗರ ರಸ್ತೆ ತಡೆ ನಡೆಸಿ, ಟೈರ್ಗಳಿಗೆ ಬೆಂಕಿ ಹಚ್ಚಿ, ಪೊಲೀಸ್ ವಾಹನಗಳನ್ನು ಜಖಂಗೊಳಿಸಿ ಆಕ್ರೋಶ ಹೊರಹಾಕಿದ್ದರು.
ಬಾಲಕಿಯ ಶವ ಪತ್ತೆಯಾದ ಕೆಲವೇ ಗಂಟೆಗಳಲ್ಲಿ ಉದ್ರಿಕ್ತ ಸಾರ್ವಜನಿಕರ ಗುಂಪೊಂದು, ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂಬ ಅನುಮಾನದ ಮೇಲೆ ವ್ಯಕ್ತಿಯೊಬ್ಬನನ್ನು ಥಳಿಸಿ ಕೊಂದ ಘಟನೆಯೂ ವರದಿಯಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದು, ಪ್ರಕರಣದ ಆಳವಾದ ತನಿಖೆಗಾಗಿ ೬ ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ.






























