
ಆಳಂದ:ಪ್ರಜಾಪ್ರಭುತ್ವದ ಬುನಾದಿಯಾಗಿರುವ ಮತದಾರರ ಪಟ್ಟಿಯನ್ನು ಶುದ್ಧ, ನಿಖರ ಹಾಗೂ ವಿಶ್ವಾಸಾರ್ಹವಾಗಿಡುವ ಉದ್ದೇಶದಿಂದ ಭಾರತ ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ನಿಂಬರ್ಗಾ ಗ್ರಾಮದಲ್ಲಿ ಬಿಜೆಪಿ ಮುಖಂಡ ಹμರ್Á ಗುತ್ತೇದಾರ ಅವರ ನೇತೃತ್ವದಲ್ಲಿ ಎಸ್ಐಆರ್ ಜಾಗೃತಿ ಅಭಿಯಾನ ನಡೆಯಿತು.
ಗ್ರಾಮದ ವಿವಿಧ ಬೀದಿಗಳಲ್ಲಿ ಕಾರ್ಯಕರ್ತರೊಂದಿಗೆ ಸಂಚರಿಸಿದ ಹμರ್Á ಗುತ್ತೇದಾರ ಅವರು ಮನೆ-ಮನೆಗೆ ಭೇಟಿ ನೀಡಿ ಮತದಾರರಿಗೆ ಎಸ್ಐಆರ್ ಪ್ರಕ್ರಿಯೆಯ ಮಹತ್ವವನ್ನು ವಿವರಿಸಿದರು. ಹೊಸ ಮತದಾರರ ನೋಂದಣಿ, ಮೃತರಾದ ಅಥವಾ ಸ್ಥಳಾಂತರಗೊಂಡವರ ಹೆಸರುಗಳ ಪರಿಷ್ಕರಣೆ, ವಿಳಾಸ ಬದಲಾವಣೆ, ಹೆಸರು ಅಥವಾ ಇತರ ವಿವರಗಳ ತಿದ್ದುಪಡಿ ಸೇರಿದಂತೆ ಮತದಾರರ ಪಟ್ಟಿಯನ್ನು ನವೀಕರಿಸಿಕೊಳ್ಳುವ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪ್ರಜಾಪ್ರಭುತ್ವದಲ್ಲಿ ಪ್ರತಿಯೊಂದು ಮತಕ್ಕೂ ಅಪಾರ ಮೌಲ್ಯವಿದೆ. ಆದ್ದರಿಂದ ಯಾವುದೇ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು. ಅದೇ ವೇಳೆ ಅನರ್ಹ ವ್ಯಕ್ತಿಗಳ ಹೆಸರು ಪಟ್ಟಿಯಲ್ಲಿ ಸೇರದಂತೆ ಎಲ್ಲರೂ ಜಾಗರೂಕರಾಗಬೇಕು. ಚುನಾವಣಾ ಆಯೋಗದ ಎಸ್ಐಆರ್ ಪ್ರಕ್ರಿಯೆಗೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ” ಎಂದು ಹೇಳಿದರು.
ಮತದಾರರ ಪಟ್ಟಿಯ ಪರಿಶೀಲನೆ ಮಾಡುವಾಗ ಕುಟುಂಬದ ಪ್ರತಿಯೊಬ್ಬ ಸದಸ್ಯರ ಹೆಸರು ಸರಿಯಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಯಾವುದೇ ಲೋಪದೋಷ ಕಂಡುಬಂದರೆ ನಿಗದಿತ ನಮೂನೆಗಳ ಮೂಲಕ ತಕ್ಷಣವೇ ತಿದ್ದುಪಡಿಗೆ ಅರ್ಜಿ ಸಲ್ಲಿಸಬೇಕು. ಯುವ ಮತದಾರರು ಮೊದಲ ಬಾರಿಗೆ ಮತದಾರರ ಪಟ್ಟಿಗೆ ಸೇರ್ಪಡೆಯಾಗುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಜಾಗೃತಿ ಅಭಿಯಾನದ ವೇಳೆ ಬಿಜೆಪಿ ಕಾರ್ಯಕರ್ತರು ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿ ಪತ್ರಿಕೆಗಳನ್ನು ವಿತರಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸುವ ವಿಧಾನ, ಅಗತ್ಯ ದಾಖಲೆಗಳು ಹಾಗೂ ಅರ್ಜಿ ಸಲ್ಲಿಸುವ ಕ್ರಮದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಗ್ರಾಮಸ್ಥರು ಕೇಳಿದ ಪ್ರಶ್ನೆಗಳಿಗೆ ಕಾರ್ಯಕರ್ತರು ಹಾಗೂ ಮುಖಂಡರು ಸಮಗ್ರವಾಗಿ ಉತ್ತರಿಸಿದರು.
ಗ್ರಾಮದ ಹಿರಿಯರು, ಮಹಿಳೆಯರು ಹಾಗೂ ಯುವಕರು ಅಭಿಯಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಮತದಾರರ ಪಟ್ಟಿಯ ಪರಿಷ್ಕರಣೆಯ ಮಹತ್ವವನ್ನು ತಿಳಿದುಕೊಂಡರು. ಶುದ್ಧ ಮತದಾರರ ಪಟ್ಟಿಯೇ ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆಗೆ ಮೂಲಾಧಾರವಾಗಿದ್ದು, ಪ್ರತಿಯೊಬ್ಬ ಅರ್ಹ ಮತದಾರರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಲಾಯಿತು. ನಂತರ ನಿಂಬರ್ಗಾ ಗ್ರಾಮಸ್ಥರು ಹರ್ಷಾ ಎಸ್ ಗುತ್ತೇದಾರ ಅವರಿಗೆ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಶಕ್ತಿ ಕೇಂದ್ರದ ಪ್ರಮುಖರು, ಯುವ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ಎಸ್ಐಆರ್ ಜಾಗೃತಿ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದರು.































