
ಕಲಬುರಗಿ, ಜು.10: ಜೆಸ್ಕಾಂ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಜಾಗೃತದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ವಿದ್ಯುತ್ ದುರಪಯೋಗ, ಸೋರಿಕೆ ಮತ್ತು ಕಳ್ಳತನದ ಪ್ರಕರಣಗಳನ್ನು ಪತ್ತೆಹಚ್ಚಿ, 2026-27ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಒಟ್ಟು 4.32 ಕೋಟಿ ರೂ. ದಂಡ ವಿಧಿಸಲಾಗಿದೆ ಎಂದು ಜೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಜೆಸ್ಕಾಂ ಜಾಗೃತದಳದ ಪೆÇಲೀಸ್ ಅಧಿಕಾರಿಗಳು ಹಾಗೂ ಕಾರ್ಯನಿರ್ವಾಹಕ ಅಭಿಯಂತರರು (ವಿ) ನೇತೃತ್ವದಲ್ಲಿ ಕಲಬುರಗಿ, ಯಾದಗಿರಿ, ಬೀದರ್, ಬಳ್ಳಾರಿ, ರಾಯಚೂರು, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ತಾಂತ್ರಿಕ ಸಿಬ್ಬಂದಿಯ ಸಹಯೋಗದೊಂದಿಗೆ ದಿಢೀರ್ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಒಟ್ಟು 2,406 ಸಂಜ್ಞೇಯ ಪ್ರಕರಣಗಳು ಹಾಗೂ 197 ಅಸಂಜ್ಞೇಯ ಪ್ರಕರಣಗಳು ದಾಖಲಾಗಿದ್ದು, ಒಟ್ಟಾರೆ 4.32 ಕೋಟಿ ರೂ. ದಂಡ ವಿಧಿಸಲಾಗಿದೆ.
ವಿದ್ಯುತ್ ಕಳ್ಳತನ ಹಾಗೂ ದುರಪಯೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯಲಿದ್ದು, ಗ್ರಾಹಕರು ವಿದ್ಯುತ್ ಅನ್ನು ಕಾನೂನುಬದ್ಧವಾಗಿ ಬಳಸುವ ಮೂಲಕ ಸಂಸ್ಥೆಯೊಂದಿಗೆ ಸಹಕರಿಸಬೇಕು ಎಂದು ಜೆಸ್ಕಾಂ ಮನವಿ ಮಾಡಿದೆ.





























