
ಮಧುಗಿರಿ, ಜು. ೨೮- ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಹರ್ಷ ಆಫೀಸರ್ಸ್ ಅಕಾಡೆಮಿ ಸಂಸ್ಥಾಪಕ ಕುರುಬರಹಳ್ಳಿ ಹರ್ಷ ಹೇಳಿದರು.
ತಾಲ್ಲೂಕಿನ ಬಡವನಹಳ್ಳಿಯಲ್ಲಿ ಏರ್ಪಡಿಸಿದ್ದ ಎಸ್ಎಲ್ಆರ್ಎಸ್ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಮಧುಗಿರಿ ಭಜರಂಗಿ ಬಾಯ್ಸ್ ತಂಡಕ್ಕೆ ಬಹುಮಾನ ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಕ್ರೀಡೆ ವಿದ್ಯಾರ್ಥಿ ಜೀವನದಲ್ಲಿ ಒಂದು ಅಂಗವಾಗಿದೆ. ಕ್ರೀಡೆಯಿಂದ ಆರೋಗ್ಯ ವೃದ್ಧಿಯಾಗುತ್ತದೆ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ನಾವೆಲ್ಲರೂ ಒಂದೇ ಎಂಬ ಮನೋಭಾವ ಪ್ರತಿಯೊಬ್ಬರಲ್ಲಿ ಮೂಡುತ್ತದೆ. ಕ್ರೀಡೆಯಲ್ಲಿ ಸೋಲನ್ನು ಮೆಟ್ಟಿಲಾಗಿ ಮಾಡಿಕೊಂಡಾಗ ಗೆಲುವು ಸಾಧ್ಯ. ಮಧುಗಿರಿ ಕ್ಷೇತ್ರದಲ್ಲಿ ಕ್ರೀಡೆಗೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್. ರಾಜಣ್ಣ ಮತ್ತು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ರಾಜೀವ್ ಗಾಂಧಿ ಕ್ರೀಡಾಂಗಣವನ್ನು ಸುಮಾರು ೧೦ ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುತ್ತಿದ್ದಾರೆ. ಇದರಿಂದ ಯುವಕರು ಕ್ರೀಡೆಗಳಲ್ಲಿ ಭಾಗವಹಿಸಲು ಅನುಕೂಲವಾಗುತ್ತದೆ. ಅಲ್ಲದೆ ಕೆಲವು ತಿಂಗಳಗಳ ಹಿಂದೆ ಕೆ.ಎನ್. ರಾಜಣ್ಣ ಮತ್ತು ರಾಜೇಂದ್ರ ಅವರ ನೇತೃತ್ವದಲ್ಲಿ ನಡೆದ ಉದ್ಯೋಗ ಮೇಳದಿಂದ ಸುಮಾರು ೬೦೦ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಸಿಕ್ಕಿದ್ದರಿಂದ ಯುವಕರು ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಾಗಿದೆ ಎಂದರು.


































