ಜನರ ಜೀವನಮಟ್ಟ ಸುಧಾರಣೆಗೆ ಕ್ರಮ ಅಗತ್ಯ-ಪಾಟೀಲ

ಕೋಲಾರ,ನ,೧೮- ಜನರ ಪಾಲ್ಗೊಳ್ಳುವಿಕೆಯಿಂದ ಮಾತ್ರ ಅಭಿವೃದ್ಧಿ ಯೋಜನೆಗಳು ಯಶಸ್ವಿಯಾಗುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನರ ಬೇಡಿಕೆಗಳಿಗುಣವಾಗಿ ಜನರ ಶ್ರೇಯೋಭಿವೃದ್ಧಿಯ ಕ್ರಿಯಾಯೋಜನೆಗಳನ್ನು ರೂಪಿಸಿ ಜನರ ಜೀವನಮಟ್ಟ ಸುಧಾರಣೆಗೆ ಕ್ರಮ ವಹಿಸಬೇಕೆಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ ತಿಳಿಸಿದರು.


ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ನಡೆದ ೨೦೨೫-೨೭ನೇ ಸಾಲಿನ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನಾ ಸಭೆಯಲ್ಲಿ ಅವರು ಮಾತನಾಡಿ,ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಾಗ ಜನರ ಬೇಡಿಕೆಗಳಿಗೆ ಆದ್ಯತೆ ನೀಡಿ, ಅವರ ಬೇಡಿಕೆಗಳನ್ನು ಯೋಜನೆಗಳಲ್ಲಿ ಅಳವಡಿಸಬೇಕು. ರಾಜ್ಯದ ಕಟ್ಟ ಕಡೆಯ ವ್ಯಕ್ತಿಗೂ ಅಭಿವೃದ್ಧಿಯ ಫಲ ದೊರಕಬೇಕು. ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಅಭಿವೃದ್ಧಿ ಸಮಿತಿಗಳ ಸಭೆಗಳನ್ನು ಆಯೋಜಿಸಿ ೨೦೨೬-೨೭ನೇ ಸಾಲಿನ ಕ್ರಿಯಾಯೋಜನೆಗಳನ್ನು ಸಿದ್ದಪಡಿಸಬೇಕು ಎಂದರು.


ರೈತರ ಜಮೀನುಗಳಿಗೆ ಎತ್ತಿನಗಾಡಿ ರಸ್ತೆಯ ಬೇಡಿಕೆಗಳಿಗೆ ಆದ್ಯತೆ ನೀಡಿ ಯೋಜನೆಗಳಲ್ಲಿ ಅಳವಡಿಸಬೇಕು. ಮಹಾತ್ಮ ಗಾಂಧಿಯವರ ಗ್ರಾಮಸ್ವರಾಜ್ಯ ಪರಿಕಲ್ಪನೆಯನ್ನು ಸಕಾರಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ, ಯಾವುದಾದರೊಂದು ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಬೇಕೆಂದರು.
ಗ್ರಾಮ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಹಳ್ಳಿ-ಹಳ್ಳಿಗಳಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಬೇಕು. ಶ್ರಮದಾನ ಮಾಡುವ ಮೂಲಕ ಸ್ವಚ್ಛತೆ ಮತ್ತು ಶುಚಿತ್ವದ ಕುರಿತು ಜನರನ್ನು ಪ್ರೇರೇಪಿಸಬೇಕು ಎಂದರು.


ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಅಭಿವೃದ್ದಿ ಸಮಿತಿ ಸಭೆಗಳನ್ನು ನಡೆಸಿ, ಈ ಮಾಹೆಯ ಅಂತ್ಯದೊಳಗೆ ಸಮಿತಿಗೆ ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು. ಅಲ್ಲದೆ ಗ್ರಾಮಸಭೆಗಳನ್ನು ನಡೆಸಿ ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಕೃಷಿ, ತೋಟಗಾರಿಕೆ ಇಲಾಖೆಗಳಲ್ಲಿನ ಯೋಜನೆಯನ್ನು ತಳಹಂತದ ಫಲಾನುಭವಿತಗಳಿಗೂ ತಲುಪಲು ಅಧಿಕಾರಿಗಳು ಶ್ರಮಿಸಬೇಕೆಂದರು


ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಮಾತನಾಡಿ, ಜಿಲ್ಲೆಯಲ್ಲಿ ಸ್ಮಶಾನ ಭೂಮಿ ಅವಶ್ಯವಿದ್ದೆಡೆ ಜಮೀನು ಒದಗಿಸಲಾಗುತ್ತಿದೆ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟು ಅಂಗನವಾಡಿಗಳು ಬಾಡಿಗೆ ಕಟ್ಟಡಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಇವುಗಳಿಗೆ ಸ್ವಂತ ಕಟ್ಟಡಗಳ ಅವಶ್ಯಕತೆಯಿದೆ ಎಂದರು


ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಟಿ. ಕೆ. ರಮೇಶ್ ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿ ಸ್ವಚ್ಛತಾ ಅಭಿಯಾನ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗುತ್ತಿದೆ. ಸ್ವಚ್ಛತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.


ಸಭೆಯಲ್ಲಿ ರಮೇಶ್, ವೇಮಗಲ್ ಕುರಗಲ್ ಪಟ್ಟಣ ಪಂಚಾಯತ್ ಅಧ್ಯಕ್ಷೆ ಅನುಷಾ ಮುನಿರಾಜು, ಕೆಜಿಎಫ್ ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷೆ ಸುನಂದಮ್ಮ, ನಗರಸಭೆ ಮಾಜಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ ಸಿಕ್ಕಳಿಗಾರ್ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.