
ಬೀದರ:ಫೆ.೨೧: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಪ್ರಯುಕ್ತ ನಡೆದ ಮೆರವಣಿಗೆಯ ಮೇಲೆ ಮಸೀದಿ ಮೇಲ್ಭಾಗದಿಂದ ಕೆಲ ಯುವಕರು ಕಲ್ಲು ಹಾಗೂ ಚಪ್ಪಲಿ ಎಸೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ಮುಖಂಡ ಈಶ್ವರಸಿಂಗ ಠಾಕೂರ ಅವರು, ಶಾಂತಿಯುತವಾಗಿ ಸಾಗುತ್ತಿದ್ದ ಮೆರವಣಿಗೆಯ ಮೇಲೆ ನಡೆದ ದಾಳಿ ಖಂಡನೀಯ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಶಾಂತಿಯುತವಾಗಿ ನಡೆಯುವ ಮೆರವಣಿಗೆಗಳ ಮೇಲೆ ಕಲ್ಲೆಸೆತ ಪ್ರಕರಣಗಳು ಮುಂದುವರಿಯುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇಂತಹ ಕಿಡಿಗೇಡಿಗಳನ್ನು ಶಿಕ್ಷಿಸುವ ಮೂಲಕ ಇಂತಹ ಮನೋಭಾವಕ್ಕೆ ಅಂತ್ಯ ಕಾಣಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ಅವರು ಹೇಳಿದ್ದಾರೆ. ಈ ಘಟನೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಆತಂಕ ಮೂಡಿಸಿದೆ ಎಂದು ಕೂಡ ತಿಳಿಸಿದ್ದಾರೆ.
ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ದುಷ್ಕೃತ್ಯ ಎಸಗಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಈಶ್ವರಸಿಂಗ ಠಾಕೂರ ಒತ್ತಾಯಿಸಿದ್ದಾರೆ.




























