ಸಕಲ ಸರ್ಕಾರಿ ಗೌರವಗಳೊಂದಿಗೆ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ

ಬೀದರ, ಜ.18: ಮಾಜಿ ಸಚಿವರಾಗಿ, ಶಾಸಕರಾಗಿ ವಿಧಾನ ಪರಿಷತ್ ಸದಸ್ಯರಾಗಿ, ಸಭಾನಾಯಕರಾದ ಲೋಕನಾಯಕ ಭೀಮಣ್ಣ ಖಂಡ್ರೆ ಅವರು ನಿಧನರಾಗಿದ್ದು, ಅವರ ಅಂತ್ಯ ಸಂಸ್ಕಾರ ಸರ್ಕಾರಿ ಸಕಲ ಗೌರವಗಳೊಂದಿಗೆ ಹಾಗೂ ವೀರಶೈವ ಸಂಪ್ರದಾಯದಂತೆ ಭಾಲ್ಕಿಯ ಚಿಕಲ್‍ಚಂದ ರಸ್ತೆಯಲ್ಲಿನ ಶಾಂತಿಧಾಮದಲ್ಲಿ ಭೀಮಣ್ಣ ಖಂಡ್ರೆ ಅವರ ಶ್ರೀಮತಿ ಲಿಂಗೈಕ್ಯ ಲಕ್ಷೀಬಾಯಿ ಅವರ ಸಮಾಧಿಯ ಪಕ್ಕದಲ್ಲಿ ಅಪಾರ ಜನಸ್ತೋಮದೊಂದಿಗೆ ಶನಿವಾರ ಸಂಜೆ ಜರುಗಿತು.
ಭೀಮಣ್ಣ ಖಂಡ್ರೆ ಅವರಿಗೆ 103 ವರ್ಷವಾಗಿದ್ದು, ವಯೋಸಹಜ ಅನಾರೋಗ್ಯದಿಂದ ಜನವರಿ.16 ರಂದು ನಿಧನ ಹೊಂದಿದ್ದರು. 1 ಬಾರಿ ಸಚಿವರಾಗಿ, 4 ಬಾರಿ ಶಾಸಕರಾಗಿ, 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸುದೀರ್ಘ ರಾಜಕೀಯ ಸೇವೆ ಸಲ್ಲಿಸಿದ್ದರು.
ಶನಿವಾರ ಬೆಳಿಗ್ಗೆ ಪಾರ್ಥಿವ ಶರೀರಕ್ಕೆ ಸ್ವಗೃಹದಲ್ಲಿ ಕುಟುಂಬಸ್ಥರ ವಿವಿಧ ಪೂಜೆ ಪುನಸ್ಕಾರಗಳೆಂದಿಗೆ ವಿಧಿ ವಿಧಾನಗಳು ನಡೆದು, ಮಧ್ಯಾಹ್ನ ಸ್ವಗೃಹದಲ್ಲಿ ಸಾರ್ವಜನಿಕರ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇಡಲಾಗಿತ್ತು. ಸಾವಿರಾರು ಜನರು ಆಗಮಿಸಿ ಸರತಿ ಸಾಲಿನಲ್ಲಿ ಅಂತಿಮ ದರ್ಶನ ಪಡೆದರು.
ಮಧ್ಯಾಹ್ನ 3.30 ರಿಂದ ಭಾಲ್ಕಿಯ ಸ್ವಗೃಹದಿಂದ ಮೆರವಣಿಗೆ ಮೂಲಕ ಚಿಕಲ್‍ಚಂದ ರಸ್ತೆಯಲ್ಲಿನ ಶಾಂತಿಧಾಮಕ್ಕೆ ತಲುಪಿತು. ಸಂಜೆ ಅಂತಿಮ ವಿಧಿ ವಿಧಾನಗಳು ನಡೆದವು.
ಅಂತಿಮ ಸಂಸ್ಕಾರದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಚಿವ ಸಂಪುಟದ ಸದಸ್ಯರು, ಶಾಸಕರು, ಮಾಜಿ ಸಚಿವರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು ಸೇರಿದಂತೆ ಹಲವು ಗಣ್ಯರು ಸಾರ್ವಜನಿಕರು ಭಾಗವಹಿಸಿ ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನ ಪಡೆದರು. ಉಪಸ್ಥಿತರಿದ್ದರು.
ಇದೇ ವೇಳೆ ಶ್ರೀಮದ್ ರಂಭಾಪುರಿ ಜಗದ್ಗುರುಗಳು, ಕಾಶಿ ಜಗದ್ಗುರುಗಳು, ಇಳಕಲ್ ಸ್ವಾಮೀಜಿಗಳು, ಜಯಮೃತ್ಯುಂಜಯ ಸ್ವಾಮೀಜಿಗಳು, ಡಾ. ಬಸವಲಿಂಗ ಪಟ್ಟದೇವರು ಸೇರಿದಂತೆ ಜಿಲ್ಲೆ ಹಾಗೂ ನಾಡಿನ ಸಮಸ್ತ ಮಠಾಧೀಶರು ಅಂತಿಮ ಯಾತ್ರೆಯಲ್ಲಿ ಭಾಗವಹಿಸಿ ಆಶೀರ್ವಾದ ಹಾಗೂ ಗೌರವ ಸಲ್ಲಿಸಿದರು.
ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ರಾಷ್ಟ್ರಧ್ವಜವನ್ನು ಪಾರ್ಥಿವ ಶರೀರಕ್ಕೆ ಹೊದಿಸಿ ಪೆÇಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಗೌರವ ಸಲ್ಲಿಸಲಾಯಿತು. ನಂತರ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿ ಅಂತಿಮವಾಗಿ ಶೋಕ ವ್ಯಕ್ತಪಡಿಸಲಾಯಿತು.
ರಾಷ್ಟ್ರಧ್ವಜವನ್ನು ಅವರ ಪುತ್ರರಾದ ಈಶ್ವರ ಬಿ.ಖಂಡ್ರೆ ಅವರಿಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಸ್ತಾಂತರಿಸಿದರು. ನಂತರ ಸಾಂಪ್ರದಾಯಿಕ ಪೂಜೆ, ವಿಧಿ, ವಿಧಾನಗಳೊಂದಿಗೆ ಪಾರ್ಥಿವ ಶರೀರವನ್ನು ಶಾಂತಿಧಾಮದಲ್ಲಿ ಇಡಲಾಯಿತು.
ಭೀಮಣ್ಣ ಖಂಡ್ರೆ ಅವರ ಪುತ್ರರಾದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹಾಗೂ ಬೀದರ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಅಮರ ಬಿ.ಖಂಡ್ರೆ, ಮೊಮ್ಮಕ್ಕಳಾದ ಬೀದರ ಸಂಸದರಾದ ಸಾಗರ ಈಶ್ವರ ಖಂಡ್ರೆ, ಗುರುಪ್ರಸಾದ ಖಂಡ್ರೆ, ಸೊಸೆಯಾದ ಗೀತಾ ಈಶ್ವರ ಖಂಡ್ರೆ ಸೇರಿದಂತೆ ಭೀಮಣ್ಣ ಖಂಡ್ರೆ ಅವರ ಸಮಸ್ತ ಕುಟುಂಬಸ್ಥರು ಅಂತಿಮ ವಿಧಿ ವಿಧಾನದಲ್ಲಿ ಭಾಗವಹಿಸಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.