ಸಿಎಂ ಮನೆಗೆ ಮುತ್ತಿಗೆ ಯತ್ನ ಬಿಜೆಪಿ ನಾಯಕರು ವಶಕ್ಕೆ

ನಗರದ ಪರಪ್ಪನ ಅಗ್ರಹಾರ ಜೈಲಿನ ಪ್ರಕರಣ ಕುರಿತಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ರವರು ರಾಜೀನಾಮೆ ನೀಡುವಂತೆ ಒತ್ತಾಯಿಸಿ ನಗರದ ಬಿಜೆಪಿ ಶಾಸಕರುಗಳು ಪ್ರತಿಭಟನೆ ನಡೆಸಿದರು. ವಿಧಾನ ಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪರಿಷತ್‌ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರುಗಳಾದ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕೆ. ಗೋಪಾಲಯ್ಯ, ಪರಿಷತ್ ಸದಸ್ಯ ಸಿ.ಟಿ. ರವಿ, ಶಾಸಕ ಸಿ.ಕೆ. ರಾಮಮೂರ್ತಿ, ಮತ್ತಿತರರು ಭಾಗವಹಿಸಿದ್ದರು.

ಬೆಂಗಳೂರು, ನ. ೧೦- ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜ್ಯಾತಿಥ್ಯ ನೀಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ರವರ ರಾಜೀನಾಮೆಗೆ ಆಗ್ರಹಿಸಿ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.


ಜೈಲುಗಳಲ್ಲಿ ಖೈದಿಗಳಿಗೆ ರಾಜ್ಯಾತಿಥ್ಯ ಸಿಗುತ್ತಿದೆ. ಇದಕ್ಕೆ ಹೊಣೆ ಹೊತ್ತು ಮುಖ್ಯಮಂತ್ರಿಗಳು, ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕರುಗಳಾದ ಆರ್. ಅಶೋಕ್, ಚಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿಯ ಶಾಸಕರು, ಕಾರ್ಯಕರ್ತರು ಇಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಮುಂದಾದಾಗ ಅವರನ್ನು ತಡೆದ ಪೊಲೀಸರು ಎಲ್ಲ ನಾಯಕರನ್ನು ವಶಕ್ಕೆ ಪಡೆದು, ಪೊಲೀಸ್ ವ್ಯಾನ್ ಹತ್ತಿಸಿಕೊಂಡು ಮುಖ್ಯಮಂತ್ರಿಗಳ ಮನೆ ಮುತ್ತಿಗೆ ಪ್ರಯತ್ನವನ್ನು ವಫಲಗೊಳಿಸಿದರು.


ಜೈಲಿನಲ್ಲಿ ಖೈದಿಗಳಿಗೆ ರಾಜ್ಯಾತಿಥ್ಯ ನೀಡುತ್ತಿರುವುದನ್ನು ಖಂಡಿಸಿ ಬಿಜೆಪಿ ನಾಯಕರುಗಳು ಘೋಷಣೆಗಳನ್ನು ಕೂಗಿದರು.


ಜೈಲು ನೈಟ್ ಕ್ಲಬ್ ಆಗಿದೆ:ಬಿವೈವಿ


ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರದ, ಪರಪ್ಪನ ಅಗ್ರಹಾರ ಜೈಲು ಒಂದ ರೀತಿ ನೈಟ್ ಕ್ಲಬ್ ಆಗಿದೆ.

ಭಯೋತ್ಪಾದಕರು, ಐಎಸ್‌ಐ ಏಜೆಂಟರು ಮುಸ್ಲಿಂ ಮೂಲಭೂತವಾದಿಗಳು ಎಲ್ಲರಿಗೂ ಪರಪ್ಪನ ಅಗ್ರಹಾರ ಜೈಲು ಮನರಂಜನಾ ಕ್ಲಬ್ ಆಗಿದೆ. ಇಂತಹ ದೇಶ ದ್ರೋಹಿಗಳಿಗೆ ಟಿವಿ, ಮೊಬೈಲ್ ಫೋನ್, ಗುಂಡು ತುಂಡುಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ದೂರಿದರು. ಜೈಲಿನಲ್ಲಿ ಖೈದಿಗಳಿಗೆ ರಾಜ್ಯಾತಿಥ್ಯ ನೀಡುತ್ತಿರುವುದು ಗೊತ್ತಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಸರ್ಕಾರದ ಕುಮ್ಮಕ್ಕಿನಲ್ಲಿಂದಲೇ ದೇಶ ದ್ರೋಹಿಗಳಿಗೆ ಜೈಲಿನಲ್ಲಿ ಐಷರಾಮಿ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ದೂರಿದರು.


ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿಲ್ಲದೆ ಜೈಲಿನಲ್ಲಿ ಈ ವ್ಯವಸ್ಥೆ ಆಗಲು ಸಾಧ್ಯವಿಲ್ಲ. ಉಗ್ರರಿಗೆ ಇಸ್ಲಾಂ ಮೂಲಭೂತವಾದಿಗಳಿಗ ಈ ರೀತಿ ರಾಜ್ಯಾತಿಥ್ಯ ಕಲ್ಪಸಿರುವುದು ದೇಶ ದ್ರೋಹದ ಕೆಲಸ. ಇದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ರವರೇ ಹೊಣೆಗಾರರು ಇವರಿಬ್ಬರೂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.


ಇದೇ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರತಿಪಕ್ಖ ನಾಯಕ ಆರ್. ಅಶೋಕ್, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮಶ್ವರ್ ರವರು ಹಾಟ್‌ಲೈನ್ ಮೂಲಕ ಈ ಜೈಲಿನಿಂದ ಪಾಕಿಸ್ತಾನ ಆಫಘಾನಿಸ್ತಾನಕ್ಕೆ ಕರೆಗಳು ಹೋಗುತ್ತಿವೆ. ಎರಡು ವರ್ಗಳಿಂದ ಇವರು ಕತ್ತೆ ಕಾಯುತ್ತಿದ್ದರಾ, ಪೊಲೀಸ್ ಠಾಣೆಗಳನ್ನು ಕಾಂಗ್ರೆಸ್ ಕಚೇರಿಗಳನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದರು.


ಜೈಲಿನಲ್ಲಿ ನಟ ದರ್ಶನ್ ಸಿಗರೇಟ್ ಸೇದಿದ್ದಕ್ಕೆ ಅವರ ಬೇಲನ್ನು ಸುಪ್ರೀಂಕೋರ್ಟ್‌ಗೆ ಹೋಗಿ ರದ್ದು ಮಾಡಿದರು. ಹಾಗಂತ ನಟ ದರ್ಶನ್ ಸಿಗರೇಟ್ ಸೇದಿದ್ದು ಸರಿ ಎಂದು ಹೇಳುತ್ತಿಲ್ಲ ಅದು ತಪ್ಪು. ಅದೇ ರೀತಿ ಕ್ರಮ ಈಗ ಏಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದರು.


ಜೈಲಿನಲ್ಲಿ ಗಾಂಜಾ, ಬಿರಿಯಾನಿ ಮೊಬೈಲ್ ಎಲ್ಲವೂ ಸಿಗುತ್ತಿದ. ಜೈಲಿಗೆ ಹೋದರೆ ರಾಜ್ಯಾತೀಥ್ಯ ಫ್ರೀ ಇದು ಕಾಂಗ್ರೆಸ್‌ನ ಬಿಟ್ಟಿ ಗ್ಯಾರಂಟಿ ಎಂದು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ಶವಯಾತ್ರೆ ನಡೆದಿದೆ. ಶವವನ್ನು ಮುಂದೆ ಯಾರು ಹೊರಬೇಕು, ಹಿಂದೆ ಯಾರು ಹೊರಬೇಕು ಏಂಬ ವಿಚಾರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ಕಚ್ಚಾಟ ನಡೆದಿದೆ. ಇವರ ಕಚ್ಚಾಟದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ ಎಂದು ವಾಗ್ದಾಳಿ ನಡೆಸಿದರು


ವಿಧಾನಪರಿತ್‌ನ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಮಾತನಾಡಿ, ಭಯೋತ್ಪಾದಕರಿಗೆ ಜೈಲಿನಲ್ಲಿ ಎಲ್ಲ ಸೌಲಭ್ಯ ನೀಡಲು ರಾಜ್ಯ ಸರ್ಕಾರ ಬಂದಂತಿದೆ ಎಂದು ಹರಿಹಾಯ್ದು, ಈ ಸರ್ಕಾರ ಯಾರ ಪರವಾಗಿದೆ ಎಂಬುದು ಗೊತ್ತಾಗಬೇಕು. ಜೈಲಿನಲ್ಲಿ ಬಿರಿಯಾನಿ ಪಾರ್ಟಿ ಇದೆ ಇದೇನಾ ಜೈಲು ವ್ಯವಸ್ಥೆ ಎಂದು ಹರಿಹಾಯ್ದರು.


ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿ, ಈಗ ರೆಸಾರ್ಟ್‌ಗೆ ಹೋಗುವ ಅಗತ್ಯವಿಲ್ಲ ಜೈಲಿನಲ್ಲೇ ಎಲ್ಲ ಸವಲತ್ತುಗಳು ಸಿಗುತ್ತಿವೆ. ಈ ಸರ್ಕಾರಕ್ಕೆ ನಾಚಿಕೆ ಆಗಬೇಕು. ಜೈಲು ರಾಜ್ಯಾತೀಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಬೇಕು ಈ ಪ್ರಕರಣವನ್ನು ಎನ್‌ಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.