ಬೆಂಗಳೂರು, ಸೆ.೪-ಕೆ. ಸಿ ವ್ಯಾಲಿ ೨ ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ ೩೦ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು.
ನಂತರದ ಮಾತನಾಡಿದ ಅವರು ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. ೨೫೦ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ ಎಂದರು.
ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲ್ಲೂಕಿನ ೩೦ ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ. ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ ಎಂದರು.
ಯೋಜನೆ ಬಗ್ಗೆ ಕೆಲವರು ಅಪಪ್ರಚಾರ ಮಾಡಿದರೂ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುವುದು ಈಗಾಗಲೇ ಸಾಬೀತಾಗಿದೆ. ಬೆಳೆಗಳಿಗೆ, ದನಕರುಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ನಿರೂಪಿತವಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಕೆ.ಸಿ.ವ್ಯಾಲಿ ಎರಡನೇ ಹಂತ ಡಿಸೆಂಬರ್ ಅಂತ್ಯದ ಒಳಗೆ ಪೂರ್ಣಗೊಳ್ಳಲಿದ್ದು, ಇದರಿಂದ ೨೭೨ ಕೆರೆಗಳನ್ನು ತುಂಬಿಸಲು ಸಾಧ್ಯವಿದೆ ಎಂದು ಹೇಳಿದರು.
ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ನದಿಗಳಲಿಲ್ಲದೆ ಇರುವುದರಿಂದ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದ್ದು, ೪೪೬ ಕೋಟಿಗಳ ವೆಚ್ಚದಲ್ಲಿ ಇದನ್ನು ಕೈಗೊಳ್ಳಲಾಗಿದೆ ಎಂದರು.


























