
ಕಲಬುರಗಿ,ಡಿ.18-ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೆ.ಕೆ.ಅರ್.ಡಿ.ಬಿ. ಮಂಡಳಿ ಅನುದಾನದಲ್ಲಿ ನಿರ್ಮಿಸಲಾಗುವ “ಪ್ರಜಾ ಸೌಧ” ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಲು ಜನವರಿ ಮಾಹೆಯಲ್ಲಿ ಯಡ್ರಾಮಿ ಪಟ್ಟಣಕ್ಕೆ ಮುಖ್ಯಮಂತ್ರಿಗಳು ಆಗಮಿಸುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಯಡ್ರಾಮಿ ಪಟ್ಟಣಕ್ಕೆ ಭೇಟಿ ನೀಡಿ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲಿಸಿದರು.
ಕಲಬುರಗಿ ಉಪ ವಿಭಾಗದ ಸಹಾಯಕ ಆಯುಕ್ತೆ ಸಾಹಿತ್ಯ, ಯಡ್ರಾಮಿ ತಹಶಿಲ್ದಾರ ಯಲ್ಲಪ್ಪ ಸುಬೇದಾರ ಸೇರಿದಂತೆ ತಾಲೂಕಾ ಅಧಿಕಾರಿಗಳೊಂದಿಗೆ ಯಡ್ರಾಮಿ ಪಟ್ಟಣದಲ್ಲಿ ಸರ್ಕಾರಿ ಪ್ರೌಢ ಶಾಲೆ ಆವರಣ ಸ್ಥಳ ಪರಿಶೀಲಿಸಿದ ಅವರು, ಯಾವುದೇ ಲೋಪವಿಲ್ಲದಂತೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿಸಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಸೂಚಿಸಿದರಲ್ಲದೆ ಹೆಲಿಕಾಪ್ಟರ್ ಲ್ಯಾಂಡ್ ಆಗುವ ಹೆಲಿಪ್ಯಾಡ್ ಸ್ಥಳ ಸಹ ಪರಿಶೀಲಿಸಿದರು.
ತದನಂತರ ಯಡ್ರಾಮಿ ಪಟ್ಟಣದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿದರು. ಅಂಬೇಡ್ಕರ್ ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತಾಲೂಕಾ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜನರ ಸಮಸ್ಯೆಗಳನ್ನು ಪ್ರಥಮಾದ್ಯತೆ ಮೇಲೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದಲ್ಲದೆ ಪಟ್ಟಣದಲ್ಲಿ ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳ ಗುಣಮಟ್ಟ ಸಹ ಪರಿಶೀಲಿಸಿದರು.
ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ಜವಳಗಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಕೆಲ ಹೊತ್ತು ಚಿಣ್ಣರೊಂದಿಗೆ ಸಮಯ ಕಳೆದರು. ಆಲೂರು ಗ್ರಾಮದ ಕಾಟನ್ ಮಾರುಕಟ್ಟೆಗೆ ಭೇಟಿ ನೀಡಿ ಹತ್ತಿ ಬೆಳೆಗಾರರ ಅನುಭವಿಸುತ್ತಿರುವ ಸಮಸ್ಯೆಗಳಿಗೆ ಕಿವಿಯಾದರು. ಅರಳಗುಂಡಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ನೀಡಲಾಗುತ್ತಿರುವ ವೈದ್ಯಕೀಯ ಚಿಕಿತ್ಸೆ ಕುರಿತು ರೋಗಿಗಳಿಂದಲೆ ಮಾಹಿತಿ ಪಡೆದರು.
























