
ಕೋಲಾರ,ಏ,೭- ವಿದ್ಯಾರ್ಥಿಗಳಲ್ಲಿ ಗ್ರಾಮೀಣ ಭಾಗದ ಸಮಸ್ಯೆಗಳು, ಇಲ್ಲಿನ ಸಂಸ್ಕೃತಿ,ಇಲ್ಲಿರುವ ಸೌಲಭ್ಯಗಳ ಅರಿವು ಪಡೆಯಲು, ಹಳ್ಳಿಗರಿಗೆ ಸ್ವಚ್ಚತೆಯ ಅರಿವು ಮೂಡಿಸಲು ಮತ್ತು ಸೇವಾ ಮನೋಭಾವನೆಯನ್ನು ಗಟ್ಟಿಗೊಳಿಸಲು ಎನ್ಎಸ್ಎಸ್ ಶಿಬಿರಗಳು ಸಹಕಾರಿ ಎಂದು ಸೂಲೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಸುರೇಶ್ ತಿಳಿಸಿದರು.
ಸೂಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ನಗರದ ಸರ್ಕಾರಿ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಎನ್ಎಸ್ಎಸ್ ಶಿಬಿರದ ಅಡಿಯಲ್ಲಿ ಹಮ್ಮಿಕೊಂಡಿರುವ ಸ್ವಚ್ಛತಾ ಕಾರ್ಯಗಳನ್ನು ವೀಕ್ಷಿಸಿದ ನಂತರ ಅವರು ಮಾತನಾಡಿದರು.
ಹೆಸರೇ ಸೂಚಿಸುವಂತೆ ರಾಷ್ಟ್ರೀಯ ಸೇವಾ ಯೋಜನೆ ಇದಾಗಿದ್ದು, ಗ್ರಾಮೀಣ ಭಾಗದಲ್ಲಿ ಶ್ರಮದಾನದ ಮೂಲಕ ಸ್ವಚ್ಚತೆ ಕಾರ್ಯ ನಡೆಸುವ ಮೂಲಕ ಗ್ರಾಮೀಣ ಭಾಗದ ಜನರಲ್ಲಿ ಸ್ವಚ್ಚತೆಯ ಮಹತ್ವ ಸಾರುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
ಶಿಬಿರದ ಮೂಲಕ ಗ್ರಾಮೀಣ ಭಾಗದ ಜನತೆಗೆ ಅಕ್ಷರ ಕಲಿಕೆ ಮಹತ್ವ, ಆರೋಗ್ಯ ಸಮಸ್ಯೆಗಳು, ಅದಕ್ಕೆ ಪರಿಹಾರ, ಕಾನೂನಿನ ಅರಿವು, ಸರ್ಕಾರದಿಂದ ಸಿಗುವ ಸೌಲಭ್ಯಗಳು ಮತ್ತಿತರ ಅರಿವು ನೀಡುವ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಸಲಹೆ ನೀಡಿದರು.
ಸೂಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲೆಗಳು, ನಾಗಲಾಪುರ ಮಠ ಸುತ್ತಮುತ್ತ, ಹಾಲಿನ ಡೇರಿ, ನಗರದ ಪ್ರಮುಖ ರಸ್ತೆಗಳು, ದೇವಸ್ಥಾನಗಳ ಸುತ್ತಮುತ್ತ ಸ್ವಚ್ಛತಾ ಕಾರ್ಯವನ್ನು ವಿದ್ಯಾರ್ಥಿನಿಯರು ಮಾಡಿದ್ದಾರೆ.
೧೦೦ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಸೂಲೂರು ಪ್ರೌಢಶಾಲೆಯಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿನಿಯರು ಬೆಳಗ್ಗೆ ಶ್ರಮದಾನ ಮಾಡಿ ಮಧ್ಯಾಹ್ನ ಉಪನ್ಯಾಸ ಹಾಗೂ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಾಮಾಜಿಕ ಅರಿವು ಮೂಡಿಸುವ ಬೀದಿ ನಾಟಕಗಳನ್ನು ಆಡುವ ಮುಖಾಂತರ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿಯೂ ಎನ್ಎಸ್ಎಸ್ ಕಾರ್ಯಕ್ರಮಗಳನ್ನು ಹೆಚ್ಚಾಗಿ ಹಳ್ಳಿಗಳಲ್ಲಿ ಆಯೋಜನೆ ಮಾಡಬೇಕು ಎಂದು ಹೇಳಿದರು.
ಸೂಲೂರು ಗ್ರಾಮ ಪಂಚಾಯತಿ ಸಹಯೋಗದಲ್ಲಿ ಕೋಲಾರ ನಗರದ ಮಹಿಳಾ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶಿಬಿರವನ್ನು ಹಮ್ಮಿಕೊಂಡಿದ್ದು, ಕಳೆದ ಒಂದು ವಾರದಿಂದ ವಿದ್ಯಾರ್ಥಿನಿಯರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ.
೧೦೦ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಏಪ್ರಿಲ್ ೨ ರಂದು ಸೂಲೂರು ಗ್ರಾಮಕ್ಕೆ ಬಂದಿದ್ದು, ಸೂಲೂರು ಸುತ್ತಮುತ್ತ ಗ್ರಾಮಗಳಾದ ನಾಗಲಾಪುರ, ಪೆಂಶೆಟ್ಟಿಹಳ್ಳಿ ಸೇರಿದಂತೆ ಮುಂತಾದ ಗ್ರಾಮಗಳಲ್ಲಿ ದೇವಸ್ಥಾನ, ಕಲ್ಯಾಣಿ, ಪ್ರಮುಖ ಬೀದಿಗಳು ಸೇರಿದಂತೆ ಗ್ರಾಮದ ಹಲವು ಭಾಗಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.
ಈ ಸಂದರ್ಭದಲ್ಲಿ ಎನ್ಎಸ್ಎಸ್ ಕೋಆರ್ಡಿನೇಟರ್ಗಳಾದ ಅನುಷಾ, ನಿಖಿಲ್, ಸೂಲೂರು ಪಿಡಿಒ ಬಾಲಾಜಿ, ಗ್ರಾಮಸ್ಥರಾದ ಮಂಜುನಾಥ್, ಶಂಕರಪ್ಪ, ದೇವರಾಜು, ಬಿ.ನಾಗರಾಜು, ಮಹೇಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.





















