ಡಿಸಿಎಂ ಪವಾರ್ ದುರ್ಮರಣ

ಪುಣೆ, ಜ.೨೮: ಬಾರಾಮತಿ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಸಾವನ್ನಪ್ಪಿದ್ದಾರೆ. ಘಟನೆ ಕುರಿತು ಮಹಾರಾಷ್ಟ್ರ ಸರ್ಕಾರ ತನಿಖೆಗೆ ಆದೇಶಿಸಿದೆ.


ವಿಎಸ್‌ಆರ್ ನಿರ್ವಹಿಸುವ ಲಿಯರ್ಜೆಟ್ ೪೫ ವಿಮಾನ (ನೋಂದಣಿ ವಿಟಿ-ಎಸ್‌ಎಸ್ಕೆ) ಪುಣೆಯ ಬಾರಾಮತಿ ಪ್ರದೇಶದಲ್ಲಿ ಇಳಿಯುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಪ್ರಾಥಮಿಕ ಮಾಹಿತಿಯ ಪ್ರಕಾರ, ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವ ಸಮಯದಲ್ಲಿ ವಿಮಾನವು ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿದೆ.
ಅಪಘಾತ ಸಂಭವಿಸಿದಾಗ ಲಿಯರ್ಜೆಟ್ ೪೫ ವಿಮಾನದಲ್ಲಿ ಅಜಿತ್ ಪವಾರ್ ಸೇರಿದಂತೆ ಐವರು ಪ್ರಯಾಣಿಕರು ಮತ್ತು ಇನ್ನೂ ಇಬ್ಬರು ಸಿಬ್ಬಂದಿ (ಒಬ್ಬ ಪಿಎಸ್‌ಒ ಮತ್ತು ಒಬ್ಬ ಪರಿಚಾರಕ) ಮತ್ತು ಇಬ್ಬರು ಸಿಬ್ಬಂದಿ (ಪೈಲಟ್ ಇನ್-ಕಮಾಂಡ್ ಮತ್ತು ಮೊದಲ ಅಧಿಕಾರಿ) ಇದ್ದರು ಅಧಿಕಾರಿಗಳು ತಿಳಿಸಿದ್ದಾರೆ.


ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಬ್ಬರೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಸಂಪರ್ಕಿಸಿ ವಿಮಾನ ಅಪಘಾತದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.
ಅಜಿತ್ ಪವಾರ್ ಅವರು ಹಿರಿಯ ರಾಜಕಾರಣಿ ಮತ್ತು ಎನ್ ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರ ಸೋದರಳಿಯ ಮತ್ತು ಲೋಕಸಭಾ ಸಂಸದೆ ಸುಪ್ರಿಯಾ ಸುಳೆ ಅವರ ಸೋದರಸಂಬಂಧಿ ಆಗಿದ್ದರು.


ಅಜಿತ್ ಪವಾರ್ ಅವರು ಸತತವಾಗಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಅವರು ವಿವಿಧ ಸರ್ಕಾರಗಳಲ್ಲಿ ಆರು ಅವಧಿಗೆ ಈ ಸ್ಥಾನದಲ್ಲಿ ಸೇವೆ ಸಲ್ಲಿಸಿದರು. ಪೃಥ್ವಿರಾಜ್ ಚವಾಣ್, ದೇವೇಂದ್ರ ಫಡ್ನವೀಸ್, ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ಅವರ ಸಂಪುಟದಲ್ಲಿ ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದರು.


ಅವರು ಸುನೇತ್ರಾ ಪವಾರ್ ಅವರನ್ನು ವಿವಾಹವಾಗಿದ್ದರು. ಅವರಿಗೆ ಜಯ್ ಮತ್ತು ಪಾರ್ಥ್ ಪವಾರ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ.


ಬಾರಾಮತಿಗೆ ಅಮಿತ್ ಶಾ ಭೇಟಿ:


ವಿಮಾನ ಅಪಘಾತ ಸುದ್ದಿ ತಿಳಿದ ಕೂಡಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಾರಾಮತಿಗೆ ತೆರಳಿದ್ದಾರೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಸಾವನ್ನಪ್ಪಿದ ಭೀಕರ ವಿಮಾನ ಅಪಘಾತದಿಂದ ದಿಗ್ಭ್ರಮೆ ಗೊಂಡ ಕೇಂದ್ರ ಗೃಹ ಸಚಿವರು ಇಂದು ಬಾರಾಮತಿಗೆ ತೆರಳಿದರು.


ಅಜಿತ್ ಪವಾರ್ ಅವರ ಪತ್ನಿ ಮತ್ತು ರಾಜ್ಯಸಭಾ ಸದಸ್ಯೆ ಸುನೇತ್ರಾ ಪವಾರ್, ಅವರ ಪುತ್ರ ಪಾರ್ಥ್ ಪವಾರ್ ಮತ್ತು ಎನ್ ಸಿಪಿ (ಎಸ್ ಪಿ) ಸಂಸದೆ ಸುಪ್ರಿಯಾ ಸುಳೆ ಶೀಘ್ರದಲ್ಲೇ ಮುಂಬೈಗೆ ತೆರಳಲಿದ್ದಾರೆ.


ಏತನ್ಮಧ್ಯೆ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಹ ಬಾರಾಮತಿಗೆ ಆಗಮಿಸಲಿದ್ದಾರೆ. ವಿಮಾನ ಅಪಘಾತದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.


ರನ್ ವೇಗೆ ೧೦೦ ಅಡಿ ಮುನ್ನ ಬಿದ್ದ ವಿಮಾನ:


ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಕರೆದೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾಗುವ ಕೆಲವೇ ನಿಮಿಷಗಳ ಮೊದಲು, ರನ್ ವೇ ಕಡೆಗೆ ಹಾರುತ್ತಿದ್ದು, ಅದನ್ನು ಸಮೀಪಿಸುವ ಮೊದಲು ೧೦೦ ಅಡಿ ಕೆಳಗೆ ಬಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.


ಪ್ರಧಾನಿ ಸೇರಿ ಹಲವು ಗಣ್ಯರು ಸಂತಾಪ:


ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ದುರಂತ ಸಾವಿನ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ, “ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಿಂದ ದುಃಖಿತನಾಗಿದ್ದೇನೆ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಂತಾಪಗಳು. ಈ ತೀವ್ರ ದುಃಖದ ಕ್ಷಣದಲ್ಲಿ ದುಃಖತಪ್ತ ಕುಟುಂಬಗಳಿಗೆ ಶಕ್ತಿ ಮತ್ತು ಧೈರ್ಯಕ್ಕಾಗಿ ಪ್ರಾರ್ಥಿಸುತ್ತೇನೆ.” ಎಂದು ಹೇಳಿದ್ದಾರೆ.


ಇದೇ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಆಘಾತ ಮತ್ತು ನೋವಾಗಿದೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದುದ್ದಕ್ಕೂ ಅವರು ಮಹಾರಾಷ್ಟ್ರದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಬದ್ಧರಾಗಿದ್ದರು. ಅವರು ಜನರ ಬಗ್ಗೆ ಸಹಾನುಭೂತಿ ಮತ್ತು ಸಾರ್ವಜನಿಕ ಸೇವೆಗೆ ಅವರ ಅಚಲ ಸಮರ್ಪಣೆಗೆ ಹೆಸರುವಾಸಿಯಾಗಿದ್ದರು. ಅವರ ಕುಟುಂಬ, ಹಿತೈಷಿಗಳು ಮತ್ತು ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.” ಎಂದು ಹೇಳಿದ್ದಾರೆ.

ಮೋದಿ ಸೇರಿ ಗಣ್ಯರ ಸಂತಾಪ


ವಿಮಾನ ದುರಂತದಲ್ಲಿ ದುರ್ಮರಣಕ್ಕೀಡಾದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಮೋದಿ ಬಾರಾಮತಿಯಲ್ಲಿ ಸಂಭವಿಸಿರುವ ಭೀಕರ ವಿಮಾನ ಅಪಘಾತದಿಂದ ದುಃಖಿತನಾಗಿದ್ದೇನೆ.ಅಪಘಾತದಲ್ಲಿ ಪ್ರೀತಿ ಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ನಾನು ಇದ್ದೇನೆ. ಈ ದುಃಖವನ್ನು ಭರಿಸಲು ಕುಟುಂಬ ಸದಸ್ಯರಿಗೆ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಅಜಿತ್ ಪವಾರ್ ಅವರು ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಜನನಾಯಕರಾಗಿ ಬೇರುಮಟ್ಟದಿಂದ ಸಂಪರ್ಕ ಹೊಂದಿದ್ದರು. ರಾಜ್ಯದ ಜನರಿಗೆ ಸೇವೆ ಸಲ್ಲಿಸಲು ಮುಂಚೂಣಿಯಲ್ಲಿದ್ದರು. ಬಡವರು, ದೀನದಲಿತರ ಸಬಲೀಕರಣದ ಬಗ್ಗೆ ಅವರ ಉತ್ಸಾಹ ಗಮನಾರ್ಹವಾಗಿತ್ತು. ಅವರ ಅಕಾಲಿಕ ನಿಧನ ತುಂಬಾ ಆಘಾತಕಾರಿ ಮತ್ತು ದುಃಖಕರವಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.


ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಎಕ್ಸ್ ಖಾತೆಯಲ್ಲಿ ಅಜಿತ್ ಪವಾರ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಳೆದ ಮೂರುವರೆ ದಶಕಗಳಲ್ಲಿ ಅಜಿತ್ ಪವಾರ್ ಮಹಾರಾಷ್ಟ್ರದ ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದರು. ಅವರ ನಿಧನದಿಂದ ಎನ್‌ಡಿಎ ಮೈತ್ರಿಕೂಟ ಮತ್ತು ತಮಗೆ ವ್ಯಕ್ತಿತ್ವವಾಗಿ ನಷ್ಟವಾಗಿದೆ ಎಂದು ಹೇಳಿದ್ದಾರೆ.


ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಜಿತ್ ಪವಾರ್ ನಿಧನಕ್ಕೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ಪವಾರ್ ಅವರು ತಮ್ಮ ಸುದೀರ್ಘ ಸಾರ್ವಜನಿಕ ಜೀವನದುದ್ದಕ್ಕೂ ಮಹಾರಾಷ್ಟ್ರ ಅಭಿವೃದ್ಧಿಗೆ ಬದ್ಧರಾಗಿದ್ದರು ಎಂದಿದ್ದಾರೆ.

ಅಜಿತ್ ಪವರ್ ನಿಧನಕ್ಕೆ ಗಣ್ಯರ ಸಂತಾಪ


ಮಹಾರಾಷ್ಟ್ರದ ಪುಣೆಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ


ಈ ಸಂಬಂಧ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನ ಅಪಘಾತದ ದುರಂತದಲ್ಲಿ ನಿಧನದ ಸುದ್ದಿ ಕೇಳಿ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನವು ಸಾರ್ವಜನಿಕ ಜೀವನಕ್ಕೆ ಅಪಾರ ನಷ್ಟವಾಗಿದೆ. ಅವರ ಕುಟುಂಬ, ಸಹೋದ್ಯೋಗಿಗಳು ಮತ್ತು ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಮತ್ತು ಅವರ ಪ್ರೀತಿಪಾತ್ರರು ಈ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಪಡೆಯಲಿ ಎಂದು ಹೇಳಿದ್ದಾರೆ.


ಕೇಂದ್ರ ಸಚಿವ ಎಚ್. ಡಿ. ಕುಮಾರ ಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಪಕ್ಷಾತೀತವಾಗಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅಜಿತ್ ಎಲ್ಲಿಗೆ ಹೊರಟಿದ್ದರು ?


ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷರೂ ಆಗಿರುವ ಅಜಿತ್ ಹಾಗೂ ಅವರ ಸಿಬ್ಬಂದಿ ಇದ್ದ ವಿಮಾನ ಮುಂಬೈನಿಂದ ಬೆಳಗ್ಗೆ ೮ರ ಸುಮಾರಿಗೆ ಪ್ರಯಾಣ ಆರಂಭಿಸಿತ್ತು. ಅದಾದ ಒಂದು ಗಂಟೆಯಲ್ಲೇ ದುರ್ಘಟನೆ ಸಂಭವಿಸಿದೆ.


ಮಹಾರಾಷ್ಟ್ರದಲ್ಲಿ ನಿಗದಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅಜಿತ್ ಅವರು ಬಾರಾಮತಿಗೆ ಹೊರಟಿದ್ದರು. ನಾಲ್ಕು ಕಡೆ ಸಾರ್ವಜನಿಕ ಸಮಾವೇಶ ನಿಗದಿಯಾಗಿತ್ತು ಎಂದು ಮೂಲಗಳು ತಿಳಿಸಿವೆ.