
ವಿಜಯಪುರ,ಮೇ.25: ವಿದ್ಯಾರ್ಥಿಗಳು ಜೀವನದಲ್ಲಿ ಗುರಿ, ಶಿಸ್ತು, ಸತತ ಪ್ರಯತ್ನ, ಸಮಯ ಪಾಲನೆ ಅಳವಡಿಸಿಕೊಂಡಾಗ ಮಾತ್ರ ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಶನಿವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸ್ಪರ್ಧಾತ್ಮಕ ಯುಗದಲ್ಲಿ ಸಮಯ ವ್ಯರ್ಥ ಮಾಡದೇ ವಿದ್ಯಾರ್ಥಿಗಳು ನಿರಂತರ ಅಧ್ಯಯನ ಮಾಡಬೇಕು. ಕಷ್ಟಪಟ್ಟು ಅಧ್ಯಯನ ಮಾಡುವುದಕ್ಕಿಂತ ಇಷ್ಟಪಟ್ಟು ಅಧ್ಯಯನ ಮಾಡಬೇಕು ಎಂದರು.
ಶಿಕ್ಷಕ ಸಚಿನ ಅವಟಿ ಮಾತನಾಡಿ, ತೊಟ್ಟಿಲು ತೂಗುವ ಕೈಗೆ ಶಿಕ್ಷಣ ನೀಡಿದಲ್ಲಿ ಇಡೀ ದೇಶವನ್ನು ತೂಗುತ್ತದೆ. ಅದಕ್ಕಾಗಿ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಸ್ವಾತಂತ್ರ್ಯ ನೀಡುವುದು ಅವಶ್ಯಕ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಂಕರ ಹುಣಶ್ಯಾಳ ಮಾತನಾಡಿ, ಮಕ್ಕಳಲ್ಲಿ ಸೃಜನಶೀಲತೆ, ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಲು ಇಂತಹ ಶಿಬಿರಗಳ ಅವಶ್ಯಕತೆವಿದೆ. ವಿದ್ಯಾರ್ಥಿಗಳಿಗೆ ಸಮಯಪಾಲನೆ ಮತ್ತು ಶಿಸ್ತು ಬಹಳ ಮುಖ್ಯ ಎಂದರು.
ಕಾರ್ಯದರ್ಶಿ ಸುನಂದಾ ಹುಣಶ್ಯಾಳ, ಶಿಕ್ಷಕರಾದ ನವೀನ ಬಂಡೆನ್ನವರ, ಜಯಶ್ರೀ ಬಂಗಾರಿ, ವೀರೇಶ ಹುಣಶ್ಯಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.