
ತ್ರಿಶೂರ್ (ಕೇರಳ), ಜೂ. ೧೮- ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾದ ತಕ್ಷಣವೇ ದೇಶದಲ್ಲಿ ಇಂಧನ ಬೆಲೆಯನ್ನು ಕಡಿತಗೊಳಿಸಲು ಸಾಧ್ಯವಿಲ್ಲ ಎಂದು ಪೆಟ್ರೋಲಿಯಂ ಸಚಿವಾಲಯದ ರಾಜ್ಯ ಖಾತೆ ಸಚಿವ ಸುರೇಶ್ ಗೋಪಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಅಗ್ಗದ ಕಚ್ಚಾ ತೈಲವು ಹೊರ್ಮುಜ್ ಜಲಸಂಧಿಯ ಮೂಲಕ ಭಾರತಕ್ಕೆ ರವಾನೆಯಾಗಬೇಕಿದೆ. ಜಲಮಾರ್ಗದಲ್ಲಿ ಹಡಗುಗಳ ಸಂಚಾರ ದಟ್ಟಣೆ ಹೆಚ್ಚಿರುತ್ತದೆ. ಆದ್ದರಿಂದ ಈ ತೈಲ ಭಾರತಕ್ಕೆ ಬರಲು ಸಮಯ ತೆಗೆದುಕೊಳ್ಳುತ್ತದೆ’ ಎಂದು ತಿಳಿಸಿದ್ದಾರೆ.
ಈಚೆಗೆ ಇಂಧನ ಬೆಲೆ ಪ್ರತಿ ಲೀಟಗೆರ್ಗೆ ೩.೯೪ ರೂಪಾಯಷ್ಟು ಹೆಚ್ಚಳದಿಂದಾಗಿ ಪರಿಣಾಮ ಬೀರಿದೆ. ಆದರೆ, ಜಾಗತಿಕವಾಗಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದೆ ಎಂಬ ಒಂದೇ ಕಾರಣಕ್ಕೆ ದರ ಪರಿಷ್ಕರಣೆ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ತೈಲ ಕಂಪನಿಗಳು ದೊಡ್ಡ ಮಟ್ಟದಲ್ಲಿ ತೊಂದರೆಗೆ ಸಿಲುಕಿದ್ದವು. ತೈಲ ಕಂಪನಿಗಳ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ೧೨ ಸಾವಿರ ಕೋಟಿ ರೂಪಾಯಿಯಷ್ಟು ನಷ್ಟವನ್ನು ಭರಿಸಿದೆ ಎಂದು ಹೇಳಿದ್ದಾರೆ.
ಇಂಧನ ಬೆಲೆ ಹೆಚ್ಚಾಗಿದ್ದಾಗ ಯಾವುದೇ ರಾಜ್ಯ ಸರ್ಕಾರ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಮೂಲಕ ತನ್ನ ಆದಾಯವನ್ನು ಬಿಟ್ಟುಕೊಡಲಿಲ್ಲ. ಕೇಂದ್ರ ಸರ್ಕಾರವೂ ನಡೆಯಬೇಕು ಮತ್ತು ತೈಲ ಕಂಪನಿಗಳೂ ಉಳಿಯಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.


























