
ಕೋಲಾರ,ನ.೧೯- ಕೋಲಾರ ತಾಲ್ಲೂಕಿನ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಬಡವರು, ನಿರ್ಗತಿಕರಿಗೆ ಮಂಜೂರಾಗಿರುವ ಮನೆಗಳನ್ನು ಸರ್ಕಾರಿ ನೌಕರರು ತಮ್ಮ ಪ್ರಭಾವವನ್ನು ಬೀರಿ ಮನೆಗಳನ್ನು ನಿರ್ಮಾಣ ಮಾಡಿಕೊಂಡಿರುತ್ತಾರೆ. ಈ ವಿಚಾರದಲ್ಲಿ ನಮ್ಮ ಕೋಲಾರ ರೈತ ಸಂಘವು ಸುಮಾರು ಬಾರಿ ಹೋರಾಟ ಮಾಡಿರುವುದಲ್ಲದೆ ಕಾನೂನು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ. ಹಾಗಾಗಿ ಕೂಡಲೇ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ನಮ್ಮ ಕೋಲಾರ ರೈತ ಸಂಘವು ಕೋಲಾರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ನಮ್ಮ ಕೋಲಾರ ರೈತ ಸಂಘದ ಕೋಲಾರ ಜಿಲ್ಲಾಧ್ಯಕ್ಷ ಕೋಟಿಗಾನಹಳ್ಳಿ ಗಣೇಶಗೌಡ, ನರೇಗಾ ಯೋಜನೆಯಡಿಯಲ್ಲಿ ಜೆಸಿಬಿ ಯಂತ್ರಗಳನ್ನು ಬಳಸಿಕೊಂಡು ಹಾಗೂ ಕಾಮಗಾರಿ ಮಾಡದೆ ಅಕ್ರಮವಾಗಿ ಬಿಲ್ಲುಗಳನ್ನು ಮಾಡಿಕೊಂಡಿರುತ್ತಾರೆ. ಇನ್ನೂ ಕೆಲವು ಗ್ರಾಮಚಿಂಚಾಯಿತಿಗಳಲ್ಲಿ ಗ್ರಾಮಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿಗಳೇ ಬೇರೊಬ್ಬರ ಹೆಸರಿನಲ್ಲಿ ಕಾಮಗಾರಿಗಳನ್ನು ಮಾಡಿಕೊಂಡು ಲಕ್ಷಾಂತರ ರೂ.ಗಳನ್ನು ಕಬಳಿಸಿ ಸರ್ಕಾರಕ್ಕೆ ವಂಚನೆ ಮಾಡಿರುತ್ತಾರೆ.
ಇವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ ಅಕ್ರಮಗಳಿಗೆ ಕಾರಣರಾದವರನ್ನು ಕಾನೂನು ರೀತ್ಯಾ ಶಿಕ್ಷೆಗೊಳಪಡಿಸಬೇಕು ಇಲ್ಲದೇ ಹೋದರೆ ತಾಲ್ಲೂಕು ಪಂಚಾಯತ್ ಕಾರ್ಯಾಲಯದ ಎದುರು ತೀವ್ರ ಸ್ವರೂಪದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗೌರವಾಧ್ಯಕ್ಷ ಕೆಂಬೋಡಿ ಕೃಷ್ಣೇಗೌಡ, ಕೋಲಾರ ತಾಲ್ಲೂಕು ಅಧ್ಯಕ್ಷ ಶಿಳ್ಳಂಗೆರೆ ನಾಗೇಶ್, ಜಿಲ್ಲಾ ಉಪಾಧ್ಯಕ್ಷ ಯಲವಾರ ವಿಶ್ವನಾಥ, ಕೋಲಾರ ತಾಲ್ಲೂಕು ಗೌರವಾಧ್ಯಕ್ಷ ದೊಡ್ನಹಳ್ಳಿ ವೆಂಕಟರಾಮಪ್ಪ, ಮುಖಂಡರಾದ ಮಾರ್ಜೇನಹಳ್ಳಿ ನಾರಾಯಣಸ್ವಾಮಿ, ನಾರಾಯಣಪ್ಪ, ಗೋಪಾಲಪ್ಪ ಮತ್ತಿತರರು ಹಾಜರಿದ್ದರು.

























