ತುಮಕೂರು, ಆ. ೨- ರಾಜ್ಯದ ಕಾಂಗ್ರೆಸ್ ಸರ್ಕಾರ ಆಗಸ್ಟ್ ೧೫ ರೊಳಗೆ ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಒಳಮೀಸಲಾತಿ ಜಾರಿಗೊಳಿಸದಿದ್ದರೆ ಕಂಡು ಕಂಡಲ್ಲಿ ಸರ್ಕಾರದ ಸಚಿವರು, ಶಾಸಕರುಗಳಿಗೆ ಘೇರಾವ್ ಹಾಕುವುದರ ಜತೆಗೆ ಅಸಹಕಾರ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಮಾದಿಗ ಮುಖಂಡರಾದ ನಿವೃತ್ತ ಐಎಎಸ್ ಅಧಿಕಾರಿ ಅನಿಲ್ಕುಮಾರ್ ಹೇಳಿದರು.
ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನಗರದ ಟೌನ್ಹಾಲ್ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿದ ವೇಳೆ ಮಾತನಾಡಿದ ಅವರು, ಒಳಮೀಸಲಾತಿ ಜಾರಿಯ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯ ಸರ್ಕಾರಕ್ಕೆ ನೀಡಿ ರಾಷ್ಟ್ರದ ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ. ಆದರೆ ನಿಖರ ದತ್ತಾಂಶದ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಇದು ಮಾದಿಗ ವಿರೋಧಿ ಸರ್ಕಾರ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಅಂತಿಮವಾಗಿ ಇಡೀ ಮಾದಿಗ ಸಮುದಾಯಕ್ಕೆ ಉಳಿದಿರುವ ಏಕೈಕ ಮಾರ್ಗವೆಂದರೆ ಒಳಮೀಸಲಾತಿ ಜಾರಿ ಮಾಡಿ ಇಲ್ಲವೇ, ಕುರ್ಚಿ ಖಾಲಿ ಮಾಡಿ ಎಂಬುದಾಗಿದೆ ಎಂದರು.
ಚಿತ್ರದುರ್ಗದಲ್ಲಿ ನಡೆದ ಐಕ್ಯ ಸಮಾವೇಶ ಹಾಗೂ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿ ಮಾಡಿಯೇ ತೀರುತ್ತೇವೆ ಎಂದು ಹೇಳಿದ ಕಾಂಗ್ರೆಸ್ ಸರ್ಕಾರ ಸಂವಿಧಾನ ತಿದ್ದುಪಡಿಯ ನೆಪವೊಡ್ಡಿ ಕೆಲ ಸಮಯ ವ್ಯರ್ಥ ಮಾಡಿದರೆ, ಸುಪ್ರೀಂ ಕೋರ್ಟ್ ತೀರ್ಪಿನ ನಂತರವೂ ಅನಗತ್ಯ ವಿಳಂಬ ಮಾಡುತ್ತಿದೆ.
ನ್ಯಾ.ನಾಗಮೋಹನ್ದಾಸ್ ಆಯೋಗಕ್ಕೆ ಸರಿಯಾದ ಮಾಹಿತಿ ದೊರೆಯದಂತೆ ಒಳಮೀಸಲಾತಿ ವಿರೋಧಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನೋಡಿಕೊಳ್ಳುತಿದ್ದಾರೆ. ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ಡಾ. ಜಿ. ಪರಮೇಶ್ವರ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷದ ನಂತರವೂ ಈ ಕುರಿತು ಚಕಾರ ಎತ್ತುತ್ತಿಲ್ಲ. ಮಾದಿಗರ ಋಣ ನಿಮ್ಮ ಮೇಲಿದೆ ಎಂಬ ಎಚ್ಚರಿಕೆಯನ್ನು ನೀಡುತ್ತೇವೆ ಎಂದರು.
ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೈ.ಹೆಚ್. ಹುಚ್ಚಯ್ಯ ಮಾತನಾಡಿ, ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ವಿಳಂಬ ಮಾಡುತ್ತಿರುವುದು ಪರಿಶಿಷ್ಟ ಜಾತಿಯವರಲ್ಲಿ ಆತಂಕ ಸೃಷ್ಟಿಯಾಗಿದೆ. ಸಾವಿರಾರು ಯುವಜನರು ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ಒಳಮೀಸಲಾತಿ ಜಾರಿಯ ಒಂದೊಂದು ದಿನದ ವಿಳಂಬವೂ ಪರಿಶಿಷ್ಟ ಜಾತಿಯವರು ಆಯುಷು ಕಳೆದುಕೊಳ್ಳುವಂತಾಗಿದೆ. ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಮಂಡಳಿಯ ನೇಮಕಾತಿಗಳಿಗಾಗಿ ಸುಮಾರು ಎರಡು ಲಕ್ಷ ಜನ ಒಳಮೀಸಲಾತಿಗಾಗಿ ಕಾಯುವಂತಾಗಿದೆ. ಒಳಮೀಸಲಾತಿಗಾಗಿ ರಕ್ತ ಕೊಡಲು ಸಿದ್ದ, ರಕ್ತ ಹರಿಸಲು ಸಿದ್ದ ಎಂಬ ಎಚ್ಚರಿಕೆಯನ್ನು ಕೊಡಲು ಬಯಸುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ. ಜಿ. ಪರಮೇಶ್ವರ್ ಶಾಶ್ವತವಾಗಿ ಅಧಿಕಾರದಲ್ಲಿರಲು ಸಾಧ್ಯವಿಲ್ಲ. ಇರುವವರೆಗಾದರೂ ನಾಲ್ಕು ಜನರಿಗೆ ಉಪಯೋಗವಾಗುವಂತೆ ಬಾಳಿ, ಜನರು ನಿಮ್ಮನ್ನು ನೆನಸಿಕೊಳ್ಳುತ್ತಾರೆ. ಜನರ ಶಾಪಕ್ಕೆ ಗುರಿಯಾಗಬೇಡಿ ಎಂದು ಗೃಹ ಸಚಿವರಿಗೆ ಎಚ್ಚರಿಕೆ ನೀಡಿದರು.
ವೈದ್ಯರಾದ ಡಾ.ಲಕ್ಷ್ಮಿಕಾಂತ್ ಮಾತನಾಡಿ, ಒಳಮೀಸಲಾತಿ ಬಗ್ಗೆ ಕಾಂಗ್ರೆಸ್ ಪಕ್ಷದ ನಾಟಕ ಬಯಲಾಗಿದೆ. ಅಸ್ಪೃಶ್ಯರ ಬಳಿ ಒಂದು ರೀತಿ, ಸ್ಪರ್ಶರ ಬಳಿ ಮತ್ತೊಂದು ರೀತಿ ಮಾತನಾಡುವ ಮೂಲಕ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಿಮ್ಮ ಈ ಇಬ್ಬಂದಿತನ ಹೆಚ್ಚು ದಿನ ನಡೆಯುವುದಿಲ್ಲ. ಕೂಡಲೇ ಒಳಮೀಸಲಾತಿ ಜಾರಿಗೆ ತನ್ನಿ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಹೋರಾಟಗಾರರಾದ ರಾಜಸಿಂಹ, ಪಿ.ಎನ್.ರಾಮಯ್ಯ, ನರಸಿಂಹಮೂರ್ತಿ, ರಮೇಶ್, ದಾಡಿ ವೆಂಕಟೇಶ್, ಹೊಸಕೋಟೆ ನಟರಾಜು, ಬಿ.ಜಿ.ಸಾಗರ್, ಸೋರೆಕುಂಟೆ ಯೋಗೀಶ್, ಸಣ್ಣಭೂತಣ್ಣ, ಕೇಬಲ್ ರಘು, ಟಿ.ಡಿ.ಮೂರ್ತಿ, ವಕೀಲ ರಂಗಧಾಮಯ್ಯ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.


































