ಹುಬ್ಬಳ್ಳಿ ಗಲಭೆ:43 ಕ್ರಿಮಿನಲ್ ಪ್ರಕರಣ ವಾಪಸ್ ಪಡೆದ ಸರ್ಕಾರದ ಆದೇಶ ರದ್ದು

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ ಇಂದು ರದ್ದುಗೊಳಿಸಿದೆ.ಈ ಆದೇಶದಿಂದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿದ್ದ ಸರ್ಕಾರಕ್ಕೆ ಕಾನೂನು ಹೋರಾಟದಲ್ಲಿ ತೀವ್ರ ಹಿನ್ನಡೆಯಾಗಿದೆ.


ಸಂಘಟನಾ ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ 43 ಪ್ರಕರಣಗಳನ್ನು ಅಕ್ಟೋಬರ್ 10, 2024 ರಂದು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು.
ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ದ್ವಿಸದಸ್ಯ ಪೀಠ ಇಂದು ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ.


ನ್ಯಾ.ಎನ್.ವಿ.ಅಂಜಾರಿಯಾ ಅವರು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದು ಇಂದು ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಕೊನೆಯ ಬಾರಿ ತೀರ್ಪು ಪ್ರಕಟಿಸಿದರು. ಈ ವೇಳೆ, ನಿಮ್ಮೆಲ್ಲರಿಗೂ ತುಂಬಾ ಧನ್ಯವಾದಗಳು. ಇದು ನನ್ನ ಕೊನೆಯ ಬಾರಿ ಈ ಪೀಠದಲ್ಲಿ ಕುಳಿತಿದ್ದೇನೆ. ಎಲ್ಲಾ ವಕೀಲರಿಗೆ, ಎಲ್ಲಾ ಸಿಬ್ಬಂದಿಗೆ ಧನ್ಯವಾದ ಹೇಳುತ್ತೇನೆ. ಇದು ನನ್ನ ಕೊನೆಯ ಆದೇಶ ಎಂದು ತಿಳಿಸಿದರು.


ಪಿಐಎಲ್‌ ವಿಚಾರಣೆಯ ಸಂದರ್ಭದಲ್ಲೇ ಕೋರ್ಟ್‌, ಸಚಿವ ಸಂಪುಟದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪುವುದಿಲ್ಲ, ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ ಎಂದು ಹೇಳಿತ್ತು.

ಅರ್ಜಿದಾರರ ಪರ ವಕೀಲರು ಪ್ರಭಾವಿ ವ್ಯಕ್ತಿಗಳೂ ಸೇರಿದಂತೆ ಕೆಲವು ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳನ್ನು ಅಪರಾಧ ದಂಡ ಸಂಹಿತೆ ಸೆಕ್ಷನ್‌ 321ಕ್ಕೆ ವಿರುದ್ಧವಾಗಿ ಸರಕಾರ ಹಿಂಪಡೆದಿದೆ ಎಂದು ಹೇಳಿರುವುದು ಮೇಲ್ನೋಟಕ್ಕೆ ಸಮರ್ಥನೀಯವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

ಏಪ್ರಿಲ್ 16, 2022 ರಂದು ಯುವಕನೊಬ್ಬ ವಿವಾದಾತ್ಮಕ ಪೋಸ್ಟ್ ಒಂದನ್ನು ಹಾಕಿದ್ದ. ಈ ವಿಚಾರಕ್ಕೆ ಸಂಬಂಧಿಸಿ ಗಲಭೆ ನಡೆದು ಉದ್ರಿಕ್ತರು ಹಳೆ ಹುಬ್ಬಳ್ಳಿ ಠಾಣೆ ಎದುರು ಪೊಲೀಸರು ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಸಂಬಂಧ 11 ಎಫ್‌ಐಆರ್‌ ದಾಖಲಾಗಿ 155 ಮದಿ ಮೇಲೆ ಕೇಸ್‌ ದಾಖಲಾಗಿತ್ತು. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಪೊಲೀಸ್‌ ವಾಹನಗಳಿಗೆ ಹಾನಿಯಾಗಿದ್ದರೆ ಇಬ್ಬರು ಪೊಲೀಸ್‌ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದರು.

ಸೆಪ್ಟೆಂಬರ್‌ 2024 ಎಲ್ಲಾ ಜಿಲ್ಲೆಗಳ ಎಸ್ಪಿ, ಕಮೀಷನರ್ ಗಳಿಗೆ ಪತ್ರ ಬರೆದಿದ್ದ ಡಿಜಿ-ಐಜಿ ನಿಮ್ಮ ಜಿಲ್ಲೆಗಳಲ್ಲಿ ಕೇಸ್ ವಾಪಸ್ ಪಡೆಯುವ ಪ್ರಕರಣಗಳ ಬಗ್ಗೆ ಮಾಹಿತಿ ನೀಡುವಂತೆ ಕೋರಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣವನ್ನು ವಾಪಸ್‌ ಪಡೆಯುವ ನಿರ್ಧಾರ ಕೈಗೊಳ್ಳಲಾಗಿತ್ತು.