Home ಜಿಲ್ಲೆ ಕಲಬುರಗಿ ಜೇವರಗಿ: ಜೆಸ್ಕಾಂ,ಕೆಪಿಟಿಸಿಎಲ್ ಪ್ರಗತಿ ಪರಿಶೀಲನಾ ಸಭೆ

ಜೇವರಗಿ: ಜೆಸ್ಕಾಂ,ಕೆಪಿಟಿಸಿಎಲ್ ಪ್ರಗತಿ ಪರಿಶೀಲನಾ ಸಭೆ

ಕಲಬುರಗಿ,ಜು.24: ಜೇವರ್ಗಿಯ ತಾಲೂಕು ಆಡಳಿತ ಕಚೇರಿಯಲ್ಲಿ ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಹರವಾಳ ಅವರ ಅಧ್ಯಕ್ಷತೆಯಲ್ಲಿ ಜೆಸ್ಕಾಂ ಮತ್ತು ಕೆ.ಪಿ.ಟಿ.ಸಿ.ಎಲ್ ಅಧಿಕಾರಿಗಳ ಮುಖ್ಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು
ಜೆಸ್ಕಾಂ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಜೇವರ್ಗಿ ತಾಲೂಕಿನ ವಿವಿಧ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಯಿತು. ಈ ವೇಳೆ ಸಾರ್ವಜನಿಕರಿಗೆ ಅಪಾಯವನ್ನುಂಟುಮಾಡುವಂತಿದ್ದ ಹಾಗೂ ಶಿಥಿಲಾವಸ್ಥೆಯಲ್ಲಿದ್ದ ವಿದ್ಯುತ್ ಕಂಬಗಳನ್ನು ಗಮನಿಸಿ, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಅವುಗಳನ್ನು ತಕ್ಷಣವೇ ತೆರವುಗೊಳಿಸಿ ಹೊಸ ಕಂಬಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಲಾಯಿತು.ನಂತರ, ಜೇವರ್ಗಿ ತಾಲೂಕಿನ ಕೂಡಿ ದರ್ಗಾದಲ್ಲಿರುವ 33/11 ಕೆ.ವಿ ವಿದ್ಯುತ್ ಉಪಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ವಿದ್ಯುತ್ ಸರಬರಾಜು ವ್ಯವಸ್ಥೆ, ನಿಯಂತ್ರಣ ಕೊಠಡಿ ಹಾಗೂ ತಾಂತ್ರಿಕ ಕಾರ್ಯವೈಖರಿಯನ್ನು ಪ್ರತ್ಯಕ್ಷವಾಗಿ ವೀಕ್ಷಿಸಿ ಪರಿಶೀಲಿಸಲಾಯಿತು.
ಜೇವರ್ಗಿಯ ತಾಲೂಕು ಆಡಳಿತ ಕಚೇರಿಯಲ್ಲಿ ಜೆಸ್ಕಾಂ ಮತ್ತು ಕೆ.ಪಿ.ಟಿ.ಸಿ.ಎಲ್ ಅಧಿಕಾರಿಗಳ ಮುಖ್ಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಚಾಲ್ತಿಯಲ್ಲಿರುವ ಪ್ರತಿಯೊಂದು ಕಾಮಗಾರಿಯ ಪ್ರಗತಿಯನ್ನು ಪರಾಮರ್ಶಿಸಿ, ನಿಗದಿತ ಕಾಲಮಿತಿಯೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ಎಚ್ಚರಿಸಲಾಯಿತು. ಮುಖ್ಯಮಂತ್ರಿಗಳ ಆದೇಶದಂತೆ ಪ್ರತಿಯೊಬ್ಬ ಫಲಾನುಭವಿಯ ಮನೆಗೂ ಭೇಟಿ ನೀಡಿ ‘ಗೃಹ ಜ್ಯೋತಿ’ ಯೋಜನೆಯ ಪರಿಶೀಲನೆ ನಡೆಸಲು, ಸಾರ್ವಜನಿಕರಿಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಸಲು, ಬಾಕಿ ವಿದ್ಯುತ್ ಬಿಲ್ ಪಾವತಿಸದ ಸಂಪರ್ಕಗಳನ್ನು ಯಾವುದೇ ದಾಕ್ಷಿಣ್ಯವಿಲ್ಲದೆ ತಕ್ಷಣವೇ ವಿದ್ಯುತ್ ಕಡಿತಗೊಳಿಸಲು, ಅಕ್ರಮ ವಿದ್ಯುತ್ ಸಂಪರ್ಕಗಳಿಗೆ ತಡೆ ನೀಡಿ ಟ್ರಾನ್ಸ್‍ಫಾರ್ಮರ್‍ಗಳ ವೈಫಲ್ಯವನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಲಾಯಿತು. ಜೊತೆಗೆ, ಈಗಾಗಲೇ ಮಂಜೂರಾಗಿರುವ ಉಪಕೇಂದ್ರಗಳ ಹೊರತಾಗಿ, ವಿದ್ಯುತ್ ಬಳಕೆ ಹೆಚ್ಚಿರುವ ಪ್ರದೇಶಗಳಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಹೊಸ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಅಗತ್ಯ ಪ್ರಸ್ತಾಪನೆಗಳನ್ನು ಕೂಡಲೇ ಸಲ್ಲಿಸುವಂತೆ ಸೂಚಿಸಲಾಯಿತು. ಇದಲ್ಲದೆ, ಪ್ರತಿ ತಿಂಗಳು ಕಡ್ಡಾಯವಾಗಿ ಮುನ್ನೆಚ್ಚರಿಕಾ ನಿರ್ವಹಣೆ ನಡೆಸಲು, ರೈತರಿಗೆ ವಿದ್ಯುತ್ ಪೂರೈಸುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳದಂತೆ ಹಾಗೂ ಬಾಕಿ ಬಿಲ್ ವಸೂಲಿ ಮಾಡುವ ಮೂಲಕ ಸಂಸ್ಥೆಯ ಆದಾಯ ಹೆಚ್ಚಿಸಲು ಸಭೆಯಲ್ಲಿದ್ದ ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಯಿತು. ಎಲ್ಲಾ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗಕ್ಕೆ ತುರ್ತು ಕಾಮಗಾರಿಗಳಿಗಾಗಿ ಈಗಾಗಲೇ ಅಗತ್ಯ ಪ್ರಮಾಣದ ಟ್ರಾನ್ಸ್‍ಫಾರ್ಮರ್‍ಗಳನ್ನು ಹಂಚಿಕೆ ಮಾಡಲಾಗಿದ್ದು, ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಜೆಸ್ಕಾಂ ಅಧ್ಯಕ್ಷರು ನಿರ್ದೇಶಿಸಿದರು.