
ಬೀದರ್: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ ಹೇಳಿದರು.
ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಸಭಾಂಗಣದಲ್ಲಿ ಶನಿವಾರ ನಡೆದ ನಶೆ ಮುಕ್ತ ಭಾರತ ಹಾಗೂ ಪೋಕ್ಸೋ ಕಾಯ್ದೆ ಕುರಿತ ಕಾನೂನು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯುವಕರಲ್ಲಿ ಕಾನೂನು ಜಾಗೃತಿ ಮೂಡಿಸುವ ಹಾಗೂ ಪೋಕ್ಸೋ ಕಾಯ್ದೆ ಪರಿಣಾಮಕಾರಿ ಅನುಷ್ಠಾನದ ಮೂಲಕ ಮಕ್ಕಳ ಸುರಕ್ಷತೆಯನ್ನು ಖಾತರಿಪಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಉಪಾಧ್ಯ ಮಾತನಾಡಿ, ಪ್ರಾಧಿಕಾರವು ನಾಗರಿಕರಲ್ಲಿ ಹಕ್ಕು ಹಾಗೂ ಕರ್ತವ್ಯದ ಕುರಿತು ಅರಿವು ಮೂಡಿಸುತ್ತಿದೆ.
ಅವಶ್ಯಕತೆ ಇರುವವರಿಗೆ ಉಚಿತ ಕಾನೂನು ನೆರವು ಸಹ ನೀಡುತ್ತಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಮಾತನಾಡಿ, ವಿದ್ಯಾರ್ಥಿಗಳು ಮಾದಕ ದ್ರವ್ಯದಿಂದ ದೂರ ಇರಬೇಕು. ಸುರಕ್ಷಿತ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ತಿಳಿಸಿದರು.
ಕಾನೂನು ವೃತ್ತಿ ಪರರು, ಅಧಿಕಾರಿಗಳು, ಶಾಹೀನ್ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು. ಪ್ರಾಚಾರ್ಯ ಖಾಜಾ ಪಟೇಲ್ ಸ್ವಾಗತಿಸಿದರು.





























