
ಸಂಜೆವಾಣಿ ವಾರ್ತೆ,
ವಿಜಯಪುರ, ಮಾ. ೧೬: ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ ಉಳಿಯುತ್ತವೆ. ಹಾಗಾಗಿ ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಹೇಳಿದರು.
ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಕ್ಷಿದಾರರು ತಮ್ಮ ವ್ಯಾಜ್ಯಗಳಿಗೆ ಸಂಬAಧಿಸಿದAತೆ ಬಹಳ ವರ್ಷ ನ್ಯಾಯಾಲಯಕ್ಕೆ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ಭಾಗವಹಿಸಿ, ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಯಶಸ್ವಿಯಾಗಿ ನಡೆದಿದ್ದು, ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತಲ್ಲಿದ್ದ ಹಲವಾರು ಪ್ರಕರಣಗಳ ಪೈಕಿ ೧೩,೬೨೪ ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ ಎಂದರು.
ಈ ಪೈಕಿ ಆಸ್ತಿ ವಿಭಾಗ ಕೋರಿದ ದಾವೆಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಕೋರಿದ ಪ್ರಕರಣಗಳು, ಜೀವನಾಂಶ ಕೋರಿ ಸಲ್ಲಿಸಿದ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳು ಕಕ್ಷಿದಾರರು ಹಾಗೂ ನ್ಯಾಯವಾದಿಗಳ ಸಹಕಾರದಿಂದ ಇತ್ಯರ್ಥಗೊಂಡಿದ್ದು ವಿಶೇಷ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಮಾತನಾಡಿ, ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಸಾರ್ವಜನಿಕರು ಶೀಘ್ರ ನ್ಯಾಯ ಪಡೆದುಕೊಂಡು ಪರಸ್ಪರ ಸೌಹಾರ್ದತೆಯಿಂದ ಸಮಾಜದಲ್ಲಿ ಜೀವನ ಸಾಗಿಸಬೇಕೆಂದು ಸಲಹೆ ನೀಡಿದರು.
ವಿಜಯಪುರ ನಗರ ಸೇರಿದಂತೆ ಮತ್ತು ತಾಲೂಕು ಒಳಗೊಂಡು ಸುಮಾರು ೦೮ ಜೋಡಿಗಳನ್ನು ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ವೈವಾಹಿಕ ಜೀವನ ನಡೆಸಲು ಒಪ್ಪಿಸಲಾಯಿತು.
ಈ ರಾಷ್ಟ್ರೀಯ ಲೋಕ್ ಅದಾಲತನಲ್ಲಿ ೧೦೦೯ ಭೂ ಸ್ವಾಧೀನ ಪ್ರಕರಣಗಳ ಪೈಕಿ ೩೮೬ ಪ್ರಕರಣಗಳು ಇತ್ಯರ್ಥಗೊಳಿಸಲಾಯಿತು. ಇದಕ್ಕೆ ೪೨,೨೮,೨೧,೩೨೮ ರೂ. ಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗಳಿಸಲಾಗಿದ್ದು, ಅದರಲ್ಲಿ ಸರ್ಕಾರದವರು ೨೧,೦೦,೦೦೦೦೦ ರೂ. ಬಿಡುಗಡೆ ಮಾಡಿದ್ದು, ಅದರಲ್ಲಿ ಸಧ್ಯ ೪೨, ೮೪, ೭೮೪ ರೂ. ಗಳನ್ನು ಈಗಾಗಲೇ ಪಾವತಿಸಲಾಗಿದೆ ಎಂದರು.
ಜನತಾ ನ್ಯಾಯಾಲಯದ ಯಶಸ್ವಿಗೆ ಸಹಕರಿಸಿದ ವಕೀಲರು, ಕಕ್ಷಿದಾರರು, ಪೊಲೀಸ್ ಅಧಿಕಾರಿ-ಸಿಬ್ಬಂದಿ ಸೇರಿದಂತೆ ಸಾರ್ವಜನಿಕರ ಕಾರ್ಯಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಾಧೀಶ ಹರೀಶ ಎ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ




























