ಎಫ್‌ಐಆರ್ ರದ್ದು ಕೋರಿ ಕೆಎಸ್‌ಸಿಎ ಹೈಕೋರ್ಟ್‌ಗೆ ಮೊರೆ

ಬೆಂಗಳೂರು,ಜೂ.೬:ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕೆಂದು ಕೋರಿ ಕರ್ನಾಟಕರಾಜ್ಯ ಕ್ರಿಕೆಟ್ ಸಂಸ್ಥೆ ಹೈಕೋರ್ಟ್‌ಗೆ ಇಂದು ಅರ್ಜಿ ಸಲ್ಲಿಸಿದೆ.


ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್ ಹಾಗೂ ಇತರ ಪದಾಧಿಕಾರಿಗಳ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ನ್ನು ರದ್ದುಪಡಿಸಬೇಕೆಂದು ಕೋರಿ ಹಾಗೂ ತಕ್ಷಣ ಅರ್ಜಿಯ ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದೆ.


ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ಇವೆಂಟ್ ಮ್ಯಾನೇಜ್ಮೆಂಟ್ ಡಿಎನ್‌ಎ ಮತ್ತು ಕೆಎಸ್‌ಸಿಎ ವಿರುದ್ಧ ಪೊಲೀಸರು ನಿನ್ನೆ ಎಫ್‌ಐಆರ್ ದಾಖಲಿಸಿದ್ದರು.


ಕಾಲ್ತುಳಿತ ಪ್ರಕರಣ ಕುರಿತಂತೆ ಆರ್‌ಸಿಬಿ, ಡಿಎನ್‌ಎ ಮತ್ತು ಕೆಎಸ್‌ಸಿಎ ಪ್ರತಿನಿಧಿಗಳನ್ನು ತಕ್ಷಣ ಬಂಧಿಸುವಂತೆ ಡಿಜಿಪಿ-ಐಜಿಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೆ ನಾಲ್ವರನ್ನು ಬಂಧಿಸಲಾಗಿದೆ.


ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ವೇಳೆ ೧೧ ಮಂದಿ ಮೃತಪಟ್ಟು, ೫೬ ಮಂದಿ ಗಾಯಗೊಂಡಿದ್ದರು.