
ಡಿಕೆಗೆ ಎಚ್ಡಿಕೆ ಟಾಂಗ್
ಬೆಂಗಳೂರು, ಜ. ೯- ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರಿಗಿಂತ ಆಡಳಿತ ಅನುಭವ ನನಗಿದೆ ಎಂದು ಹೇಳಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಕೊಳ್ಳೆ, ಸುಲಿಗೆ, ಬೇಲಿ, ಚದುರಡಿ, ಕಮೀಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ಪಿರಿಯನ್ಸ್ ಅಲ್ಲ ಡಿ.ಕೆ. ಶಿವಕುಮಾರ್ ಎಂದಿದ್ದಾರೆ.
ನಮ್ಮ ಪಕ್ಷದ ವಿಲೀನದ ಚಿಂತನೆ ಪಕ್ಕಕ್ಕಿಡಿ. ನನ್ನ ಮತ್ತು ನಿಮ್ಮ ಆಡಳಿತ ಅನುಭವದ ಬಗ್ಗೆ ಮಾತನಾಡೋಣ. ನಮ್ಮಿಬ್ಬರ ಆಡಳಿತ ಅನುಭವದ ಬಗ್ಗೆ ನೀವು ಹೇಳುವುದಲ್ಲ, ಜನರನ್ನೇ ಕೇಳಬೇಕು. ನಿಮಗೆ ಭೂಕಬ್ಜ, ಒತ್ತುವರಿ ಕರತಲಾಮಲಕ. ಅದೇ ರೀತಿ ಮತ್ತೊಬ್ಬರ ಸಚಿವರ ಖಾತೆಯನ್ನು ಒತ್ತುವರಿ ಮಾಡುವುದರಲ್ಲಿಯೂ ನೀವು ನಿಸ್ಸೀಮರು. ಅದನ್ನಷ್ಟೇ ನಾನು ಹೇಳಿದ್ದು ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ.
ಏನೋ ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿದ ಅವಕಾಶದಲ್ಲಿ ಜನರಿಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ. ನಿಮಗೆ ಸಿದ್ದಿಸಿರುವ ಅಂತಹ ಭಾರೀ ಅನುಭವ ನನಗಿಲ್ಲ. ಅದನ್ನು ವಿನಮ್ರವಾಗಿ ಒಪ್ಪಿಕೊಳ್ಳುವೆ ಎಂದು ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್ಗೆ ಟಾಂಗ್ ನೀಡಿದ್ದಾರೆ.
ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆಯನ್ನು ಗೃಹ ಸಚಿವರೇ ನಡೆಸಬೇಕಿತ್ತು. ಅದು ಅವರ ಅಧಿಕಾರ ವ್ಯಾಪ್ತಿ. ಅವರು ಹೊರತುಪಡಿಸಿದರೆ ಮುಖ್ಯಮಂತ್ರಿಗಳು ಅಂತಹ ಸಭೆ ನಡೆಸಬಹುದು. ನೀವು ಸಭೆ ನಡೆಸಿದ್ದು ಶಿಷ್ಟಾಚಾರ, ಅಧಿಕಾರ ಸ್ಪಷ್ಟ ಉಲ್ಲಂಘನೆ. ಇದನ್ನು ಆಡಳಿತ ಅನುಭವ, ಸೀನಿಯಾರಿಟಿ ಎಂದು ಬೆನ್ನು ತಟ್ಟಿಕೊಳ್ಳುತ್ತೀರಾ ಎಂದು ಕುಮಾರಸ್ವಾಮಿ ಡಿ.ಕೆ. ಶಿವಕುಮಾರ್ ರವರನ್ನು ಪ್ರಶ್ನಿಸಿದ್ದಾರೆ.
ತಾವು ಡಿಸಿಎಂ ಆಗಿರಬಹುದು, ಆದರೆ ಮಂತ್ರಿ ಪದವಿಗೆ ಇರುವಷ್ಟೇ ಶಿಷ್ಟಾಚಾರ, ಅಧಿಕಾರ ವ್ಯಾಪ್ತಿ ಆ ಹುದ್ದೆಗಿದೆ ಎನ್ನುವುದು ಗೊತ್ತಿಲ್ಲವೇ. ಅದಕ್ಕೇನು ಎಕ್ಸ್ಟ್ರಾ ಕೊಂಬು, ಕೋಡು ಇರಲ್ಲ. ಇರಲಿ ಎಂದು ತಾವು ಸಿಕ್ಕಿಸಿಕೊಳ್ಳುವುದಕ್ಕೂ ಬರಲ್ಲ. ನಿಮ್ಮ ಎಕ್ಸ್ಫಿರಿಯನ್ಸ್ಗೆ ಈ ಸಣ್ಣ ವಿಷಯವೂ ತಟ್ಟಲಿಲ್ಲವೇ ಮಿಸ್ಟರ್ ಡಿ.ಕೆ. ಶಿವಕುಮಾರ್ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಪೊಲೀಸ್ ಅಧಿಕಾರಿಗಳ ಸಭೆ ಮಾಡಿ ಎಂದು ಗೃಹ ಸಚಿವರು ಅಥವಾ ಸಿಎಂ ನಿಮಗೆ ಹೇಳಿದ್ದರಾ, ಇಲ್ಲವಲ್ಲಾ. ಅದಕ್ಕೆ ನಾನು ಹೇಳಿದ್ದು. ಅವರೇನು ಹೆಬ್ಬೆಟ್ಟು ಗೃಹ ಮಂತ್ರಿಗಳಾ ಅಥವಾ ರಬ್ಬರ್ಸ್ಟಾಂಪ್ ಗೃಹ ಮಂತ್ರಿಗಳಾ ಎಂದು ಪ್ರಶ್ನಿಸಿರುವ ಅವರು, ಒಬ್ಬ ಹಿರಿಯ ಖಾತೆಯನ್ನು ನೀವು ಹೀಗೆ ಅಕ್ರಮವಾಗಿ ಒತ್ತುವರಿ ಮಾಡುವುದಕ್ಕೆ ಸಂವಿಧಾನದಲ್ಲಿ ವಿಶೇಷ ತಿದ್ದುಪಡಿಯನ್ನೇನಾದರೂ ಮಾಡಿಸಿದ್ದೀರಾ, ನಿಮ್ಮದು ಭಾರೀ ಅನುಭವ, ಸಿಕ್ಕಾಪಟ್ಟೆ ಸೀನಿಯಾರಿಟಿ. ಇಂಥ ಸಣ್ಣ ವಿಷಯ ನಿಮಗೇಕೆ ತಿಳಿಯಲಿಲ್ಲ ಮಿಸ್ಟರ್ ಡಿಕೆಶಿ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.




























