
ಚಿಕ್ಕಬಳ್ಳಾಪುರ,ಸೆ.೧೦: ಆರೋಗ್ಯವೇ ಭಾಗ್ಯವಾಗಿದ್ದು, ಉತ್ತಮ ಆರೋಗ್ಯವಿದ್ದರೆ ಜೀವನದಲ್ಲಿ ಎಲ್ಲ ಸೌಭಾಗ್ಯಗಳನ್ನು ಪಡೆಯಲು ಸಾಧ್ಯ. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಪೌಷ್ಠಿಕ ಹಾಗೂ ಸಮತೋಲಿತ ಆಹಾರ ಸೇವಿಸುವ ಮೂಲಕ ಆರೋಗ್ಯಕರ ಜೀವನ ನಡೆಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ.ಪಿ. ರಾಮಲಿಂಗೇಗೌಡ ತಿಳಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಪೌಷ್ಠಿಕ ಆಹಾರ ಅತ್ಯಂತ ಅಗತ್ಯವಾಗಿದೆ. ಮಕ್ಕಳು, ಗರ್ಭಿಣಿಯರು, ಬಾಣಂತಿಯರು, ಮಹಿಳೆಯರು ಹಾಗೂ ವೃದ್ಧರು ತಮ್ಮ ದೈನಂದಿನ ಆಹಾರದಲ್ಲಿ ಅಗತ್ಯ ಪ್ರಮಾಣದ ಪೌಷ್ಠಿಕಾಂಶಗಳನ್ನು ಒಳಗೊಂಡಿರುವಂತೆ ನೋಡಿಕೊಳ್ಳಬೇಕು. ಆಹಾರದಲ್ಲಿ ಸೊಪ್ಪು, ತರಕಾರಿ, ಬೇಳೆ, ಧಾನ್ಯಗಳು, ಹಣ್ಣುಗಳು ಸೇರಿದಂತೆ ನೈಸರ್ಗಿಕವಾಗಿ ದೊರೆಯುವ ಪೌಷ್ಠಿಕ ಆಹಾರ ಪದಾರ್ಥಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಗರ್ಭಿಣಿ ಮಹಿಳೆಯರಿಗೆ ಪೌಷ್ಠಿಕ ಆಹಾರಗಳನ್ನು ವಿತರಣೆ ಮಾಡಲಾಯಿತು.
ಈ ವೇಳೆ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ಶಿಲ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್.ವೆಂಕಟೇಶರೆಡ್ಡಿ, ವಕೀಲರ ಸಂಘದ ಜಿಲ್ಲಾಧ್ಯಕ್ಷ ಅಭಿಲಾ?, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಗರ್ಭಿಣಿ ಮಹಿಳೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
































