
ಗದಗ, ಜೂ೫ : ವಿಶ್ವ ಬಾಲಕಾರ್ಮಿಕರ ವಿರೋಧಿ ದಿನಾಚರಣೆಯ ಜೂನ್ ೧೨ ರಂದು ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆಯ ನಿಮಿತ್ತ ಜರುಗಿದ ಪೂರ್ವಭಾವಿ ಸಭೆ ಮತ್ತು ಜಿಲ್ಲಾ ಮಟ್ಟದ ಟಾಸ್ಕಪೋರ್ಸ ಕಮಿಟಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಶಿಷ್ಟಾಚಾರದನ್ವಯ ಆಮಂತ್ರಣ ಮುದ್ರಣಕ್ಕೆ ಕ್ರಮ ವಹಿಸಬೇಕು. ಗ್ರಾಮ ಪಂಚಾಯತಿ, ಪುರಸಭೆ ನಗರಸಭೆಯಲ್ಲಿ ಡಂಗುರ ಸಾರಿಸಿ ಜನಗಳಿಗೆ ಜಾತಾ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಬೇಕು ಎಂದರು.
ತಾವು ಕೆಲಸ ಮಾಡುವ ಸರ್ಕಾರಿ ಕಚೇರಿಗಳಲ್ಲಿ ವಿಶ್ವ ಬಾಲ ಕಾರ್ಮಿಕರ ಪದ್ಧತಿ ವಿರೋಧಿ ದಿನ ಕುರಿತು ಪ್ರಮಾಣ ವಚನ ಸ್ವೀಕಾರ ಮಾಡಬೇಕು. ಶಾಲಾ ಕಾಲೇಜುಗಳಲ್ಲಿ ಜಾತಾ ಕಾರ್ಯಕ್ರಮ ಏರ್ಪಡಿಸಬೇಕು. ಪ್ರಬಂಧ ಸ್ಪರ್ಧೆ, ಚಿತ್ರಕಲೆ, ಭಾಷಣ ಏರ್ಪಡಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತ ೯ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜರುಗುವುದು.
ಜಿಲ್ಲೆಯಾದ್ಯಂತ ಜೂನ್ ೧೩ ರಿಂದ ಜೂನ್ ೩೦ ರವರೆಗೆ ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣಾ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸುವುದು. ಬಾಲ ಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ಕುರಿತು ಉಪನ್ಯಾಸ ಕಾರ್ಯಕ್ರಮವು ಜರುಗುವುದು. ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ವಿರೋಧಿ ಸಂದೇಶ ಸಾರುವ ದ್ವನಿ ಮುದ್ರಿಕೆಯನ್ನ ಜಿಲ್ಲೆಯಾದ್ಯಂತ ಹೊರಡಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಒಟ್ಟಾರೆಯಾಗಿ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ನಿರ್ದೇಶನ ನೀಡಿದರು.
ವೇದಿಕೆ ವ್ಯವಸ್ಥೆ, ವೇದಿಕೆ ಅಲಂಕಾರ, ಸ್ಪರ್ಧೆಗಳ ಆಯೋಜನೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ. ಆರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಿ.ವೈ.ಎಸ್.ಪಿ ಮುರ್ತುಜಾ ಖಾದ್ರಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ.ಎಸ್.ಸೋಮನಕಟ್ಟಿ, ಶಾಲಾ ಶಿಕ್ಷಣಾ ಇಲಾಖೆಯ ಉಪನಿರ್ದೇಶಕ ಆರ್.ಎಸ್ ಬುರಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧ ಮಣ್ಣೂರ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಯಶ್ರೀ ತೊಟಗೇರ, ನಗರಾಭಿವೃದ್ಧಿ ಯೋಜನೆ ನಿರ್ದೇಶಕ ಬಸವರಾಜ ಕೊಟೂರು, ಬಾಲ ಕಾರ್ಮಿಕ ಇಲಾಖೆಯ ಯೋಜನೆ ನಿರ್ದೇಶಕ ಸಂದೇಶ ಪಾಟೀಲ್, ಗದಗ ಬೆಟಗೇರಿ ನಗರಸಭೆ ಪೌರಯುಕ್ತ ರಾಜಾರಾಮ್ ಪವಾರ, ಸ್ಪಂದನ ಸಂಸ್ಥೆಯ ಎನ್.ಜಿ.ಓ ಅಶ್ವಿನಿ ಹಿರೇಮಠ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
























