
ನವದೆಹಲಿ, ಜು.೨೪: ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಸಿಜೆಪಿ ವಿದ್ಯಾರ್ಥಿ ಪ್ರತಿಭಟನೆ ಹಾಗೂ ನೀಟ್ ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳನ್ನು ಮೋದಿ ಸರ್ಕಾರ ದೇಶದ ಶತ್ರುಗಳು ಎಂಬಂತೆ ನಡೆಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಮಾಧ್ಯಮದಲ್ಲಿ ಪ್ರಕಟವಾದ ಲೇಖನದಲ್ಲಿ ಈ ಕುರಿತು ವಿಸ್ತೃತವಾಗಿ ಬರೆದಿರುವ ಸೋನಿಯಾ ಗಾಂಧಿ, ಸರ್ಕಾರದ ಧೋರಣೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.
ಜುಲೈ ೨೦ರಂದು ದೆಹಲಿ ಪೊಲೀಸ್ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಟೀಯರ್ ಗ್ಯಾಸ್ ಮತ್ತು ಪೆಲೆಟ್ಗಳನ್ನು ಬಳಸಿ ಹಿಂಸಾತ್ಮಕವಾಗಿ ಹತ್ತಿಕ್ಕಲು ಯತ್ನಿಸಿವೆ. ಮನೆಗೆ ಮರಳುತ್ತಿದ್ದ ವಿದ್ಯಾರ್ಥಿಗಳನ್ನೂ ಬಿಡದೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಸೋನಿಯಾ ಗಾಂಧಿ ಕಿಡಿಕಾರಿದ್ದಾರೆ.
ಆ ದಿನದ ವಿಡಿಯೊಗಳು ಪ್ರತಿಯೊಬ್ಬರ ಮನಸ್ಸನ್ನು ಕಲಕಿವೆ. ಈಗಲಾದರೂ ಸ್ಪಷ್ಟವಾಗಿ ಹೇಳುವ ಸಮಯ ಬಂದಿದೆ. ‘ನಿಲ್ಲಿಸಿ, ಇವರು ನಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಎಂದು ಸೋನಿಯಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೋದಿ ಸರ್ಕಾರವು ಸಾರ್ವಜನಿಕ ಶಿಕ್ಷಣದಿಂದ ಹಿಂದೆ ಸರಿಯುತ್ತಿದೆ. ಶಾಲಾ ಶಿಕ್ಷಣದ ಬಜೆಟ್ ಅನ್ನು ಶೇ.೫೦ ರಷ್ಟು ಹಾಗೂ ಉನ್ನತ ಶಿಕ್ಷಣದ ಬಜೆಟ್ ಅನ್ನುಶೇ. ೩೩ರಷ್ಟು ಕಡಿತಗೊಳಿಸಲಾಗಿದೆ. ಕಳೆದ ೧೨ ವರ್ಷಗಳಲ್ಲಿ ಸರ್ಕಾರ ಸುಮಾರು ೧ ಲಕ್ಷ ಸರ್ಕಾರಿ ಶಾಲೆಗಳನ್ನು ಮುಚ್ಚಿ ೪೩೦೦೦ ಖಾಸಗಿ ಶಾಲೆಗಳಿಗೆ ಉತ್ತೇಜನ ನೀಡಿದೆ ಎಂದು ಅವರು ಅಂಕಿಅಂಶ ಸಹಿತ ವಾಗ್ದಾಳಿ ನಡೆಸಿದ್ದಾರೆ.
ಪರೀಕ್ಷಾ ಪದ್ಧತಿ ಮತ್ತು ಎನ್ಟಿಎ ಸುಧಾರಣೆಗೆ ಸಂಬಂಧಿಸಿದ ಸಂಸದೀಯ ಸಮಿತಿಯ ಶಿಫಾರಸುಗಳನ್ನು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿರಸ್ಕರಿಸಿದ್ದಾರೆ. ಇಷ್ಟೆಲ್ಲಾ ಗೊಂದಲಗಳು ಹಾಗೂ ವೈಫಲ್ಯಗಳು ಸಂಭವಿಸಿದರೂ ಅವರು ರಾಜೀನಾಮೆ ನೀಡದಿರುವುದು ವಿದ್ಯಾರ್ಥಿಗಳ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಸೋನಿಯಾ ಗಾಂಧಿ ಲೇಖನದಲ್ಲಿ ಉಲ್ಲೇಖಿಸಿದ್ದಾರೆ.































