ರಾಜ್ಯಾದಲ್ಲಿ ಮುಂಗಾರು ಜೋರು

ಬೆಂಗಳೂರು,ಜೂ.೨೬- ಕರಾವಳಿ ಮತ್ತು ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಅಬ್ಬರ ಜೋರಾಗಿದೆ. ಕೊಡಗಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಬಾರಿ ಮಳೆಯಾಗಲಿರುವ ೭ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದ್ದು ಹಲವು ಕಡೆ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ೭೫ ರಲ್ಲಿ ಭೂ ಕುಸಿತ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಭೂ ಕುಸಿತ ಸಂಭವಿಸಿದ ಕಾರಣ ಶಿರಾಡಿ ಘಾಟ್ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಬೆಂಗಳೂರು ಹಾಗೂ ಮಂಗಳೂರು ನಡುವೆ ಪ್ರಯಾಣಕ್ಕೆ ಬದಲಿ ಮಾರ್ಗ ಬಳಕೆಗೆ ಸೂಚನೆ ನೀಡಲಾಗಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಇಲಾಖೆ ಬೆಳಗಾವಿ, ಉತ್ತರ ಕನ್ನಡ, ದಕ್ಷಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಮಂಡ್ಯ, ಮೈಸೂರು ಹಾಗೂ ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಮತ್ತು ಬೆಳಗಾವಿಯ ಕಣಕುಂಬಿ ಭಾಗದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರೆಯುತ್ತಿದ್ದಾನೆ. ಇದರಿಂದ ಬೆಳಗಾವಿ ಜಿಲ್ಲೆಯಲ್ಲಿ ಹರಿಯುವ ಸಪ್ತ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಶುರುವಾಗಿದ್ದು, ಜಿಲ್ಲೆಯ ಜನರು ಆತಂಕಕ್ಕೆ ಸಿಲುಕಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಜನರ ಸ್ಥಿತಿ ಹೇಳತೀರದ್ದಾಗಿದೆ. ಅದರಲ್ಲೂ ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದ ಜಿಲ್ಲೆಯ ಏಳು ನದಿಗಳು ಅಪಾಯದ ಮಟ್ಟಮೀರಿ ಹರಿಯುತ್ತಿವೆ. ಜನರು ಜೀವ ಹಿಡಿದು ಬದುಕುವಂತಾಗಿದೆ

ಖಾನಾಪುರ ತಾಲೂಕಿನ ಕಣಕುಂಬಿ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗ್ತಿದ್ದು ಮಲಪ್ರಭಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ನದಿಗೆ ಒಳ ಹರಿವು ಹೆಚ್ಚಾಗಿರುವುದರಿಂದ ಹಬ್ಬಾನಟ್ಟಿ ಮಾರುತಿ ದೇವಸ್ಥಾನ ಸಂಪೂರ್ಣವಾಗಿ ಜಲಾವೃತಗೊಂಡಿದೆ.

ಹತ್ತೇ ದಿನದಲ್ಲಿ ಹತ್ತು ಅಡಿಗಳಷ್ಟು ನೀರು ಬಂದಿದ್ದು ಇಡೀ ದೇವಸ್ಥಾನವೇ ಮುಳುಗಿ ಕಲಶ ಮಾತ್ರ ಗೋಚರಿಸುತ್ತಿದೆ. ದೇವಸ್ಥಾನದ ಮುಂಭಾಗದಲ್ಲಿರುವ ಶಿವನ ದೇವಸ್ಥಾನಕ್ಕೂ ನೀರು ನುಗ್ಗಿದ್ದು ಇದರಿಂದ ಇಡೀ ದೇವಸ್ಥಾನವೇ ಮುಳುಗಿದೆ.

ಖಾನಾಪುರ ಹೊರವಲಯದಲ್ಲಿ ಹರಿಯುವ ಹಾಲಾತ್ರಿ ಹಳ್ಳ ಕೂಡ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಳ್ಳಕ್ಕೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮುಳುಗಡೆಯಾಗಿದೆ. ಹೆಮ್ಮಡಗಾ, ಗವಾಳಿ, ಪಾಸ್ತೋಳಿ ಸೇರಿ ಹತ್ತಕ್ಕೂ ಅಧಿಕ ಗ್ರಾಮಗಳ ಸಂಪರ್ಕ ಕಡಿತಗೊಂಡಿವೆ.

ಗೋವಾಕ್ಕೆ ಸಂಪರ್ಕಿಸುವ ಇದ್ದ ಒಂದು ಸೇತುವೆ ಕೂಡ ಮುಳುಗಿದ್ದು, ಇದರಿಂದ ಧಾರವಾಡದ ಮೇಲೆ ಗೋವಾಕ್ಕೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಮಲಪ್ರಭಾ ನದಿ ಅಕ್ಕಪಕ್ಕದ ಜಮೀನುಗಳಿಗೂ ಹೊಕ್ಕಿದ್ದು ಇದರಿಂದ ಬೆಳೆ ಕಳೆದುಕೊಳ್ಳುವ ಆತಂಕದಲ್ಲಿ ಜನರಿದ್ದಾರೆ.


ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್


ಕೊಡಗು ಜಿಲ್ಲೆಯಲ್ಲಿ ಮಳೆಯೊಂದಿಗೆ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಜನರಲ್ಲಿ ಆತಂಕ ಮೂಡಿದೆ. ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜತೆಗೆ ಇಂದು ಪ್ರಾಥಮಿಕ, ಪ್ರೌಢಶಾಲೆ, ಅಂಗನವಾಡಿ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.


ಕಳೆದ ೨೪ ಗಂಟೆಗಳಲ್ಲಿ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯಲ್ಲಿ ೭ ಇಂಚು, ದಕ್ಷಿಣ ಕೊಡಗಿನ ಶ್ರೀಮಂಗಲದಲ್ಲಿ ೬ ಇಂಚು, ಮಡಿಕೇರಿ ತಾಲ್ಲೂಕಿನ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ೫ ಇಂಚಿಗೂ ಅಧಿಕ ಮಳೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಹಾರಂಗಿ ಜಲಾಶಯದಿಂದ ಹೆಚ್ಚುವರಿ ೫ ಕ್ಯೂಸೆಕ್ ನೀರನ್ನು ನದಿಗೆ ಹರಿಯ ಬಿಡಲಾಗಿದೆ.


ಭಾರೀ ಗಾಳಿಯಿಂದ ಗ್ರಾಮೀಣ ಭಾಗದಲ್ಲಿ ಮರ ಮತ್ತು ವಿದ್ಯುತ್ ಕಂಬಗಳು ಬಿದ್ದು ಹಾನಿಯಾಗಿದೆ. ನದಿತೀರ, ಎತ್ತರ ಮತ್ತು ತಗ್ಗು ಪ್ರದೇಶಗಳಲ್ಲಿ ಆತಂಕದ ವಾತಾವರಣವಿದ್ದು, ಜಿಲ್ಲಾಡಳಿತ ಹಾಗೂ ಸ್ಥಳೀಯ ಆಡಳಿತ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಮಡಿಕೇರಿಯಲ್ಲಿ ಭಾರೀ ಗಾಳಿಯೊಂದಿಗೆ ಮೈಕೊರೆಯುವ ಚಳಿ ಇದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.


ಜಿಲ್ಲೆಯಲ್ಲಿ ಕಳೆದ ೨೪ ಗಂಟೆ ಅವಧಿಯಲ್ಲಿ ಸರಾಸರಿ ೬೦.೯೨ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೨೨.೫೦ ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ ೧೨೩೪.೯೧ ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ ೫೮೨.೩೨ ಮಿ.ಮೀ ಮಳೆಯಾಗಿತ್ತು.


ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೫೭.೧೮ ಮಿ.ಮೀ. ಕಳೆದ ವರ್ಷ ಇದೇ ದಿನ ೨೨.೯೫ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೧೮೦೦.೨೦ ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ ೮೩೩.೬೫ ಮಿ.ಮೀ. ಮಳೆಯಾಗಿತ್ತು.


ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೪೯.೯೫ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೪೪.೨೫ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೧೨೩೦.೩೦ ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ೫೩೭.೭೫ ಮಿ.ಮೀ. ಮಳೆಯಾಗಿತ್ತು.


ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೭೩.೫೨ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೨೨.೭೫ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೧೧೭೧.೨೮ ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ೫೬೬.೪೯ ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೧೦೭.೦೫ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೧೮.೫೫ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೧೨೫೧.೦೪ ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ೪೭೨.೦೧ ಮಿ.ಮೀ. ಮಳೆಯಾಗಿತ್ತು.

ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೧೬.೯೦ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೪ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೭೨೧.೭೪ ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ೫೦೧.೭೦ ಮಿ.ಮೀ. ಮಳೆಯಾಗಿತ್ತು.

ಶಾಲಾ-ಕಾಲೇಜುಗಳಿಗೆ ರಜೆ:

ಹೆಚ್ಚು ಮಳೆ ಸುರಿಯುತ್ತಿರುವ ಕಾರಣ ಕುಶಾಲನಗರ ಹೊರತುಪಡಿಸಿ, ಕೊಡಗು ಜಿಲ್ಲೆಯ ಎಲ್ಲಾ ತಾಲೂಕುಗಳು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು, ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಅರಕಲಗೂಡು ತಾಲೂಕುಗಳ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಬೆಳಗಾವಿ, ಖಾನಾಪುರ, ಕಿತ್ತೂರು ತಾಲೂಕಿನಲ್ಲಿ ಮಳೆ ಅಬ್ಬರ ಜೋರಾಗಿದ್ದು, ಮೂರು ತಾಲೂಕಿನ ಶಾಲಾ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಬಾರಿ ಮಳೆಯಿಂದ ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ನದಿ, ತೊರೆ , ಹಳ್ಳ- ಕೊಳ್ಳ ತುಂಬಿ ಹರಿಯುತ್ತಿದ್ದು ಜನ ಜೀವನ ಸಂಪೂರ್ಣ ಸ್ಥಗಿತವಾಗಿದೆ. ಹಲವು ಭಾಗಗಳಲ್ಲಿ ರೈತರು ಬೆಳೆದಿದ್ದ ಬೆಳೆ ಸಂಪೂರ್ಣ ನೀರಿನಲ್ಲಿ ಜಲಾವೃತವಾಗಿದೆ.

ಚಾರ್ಮುಡಿ ಘಾಟ್ ಬಂದ್

ಬಾರಿ ಮಳೆಯಿಂದ ಶಿರಾಢಿ ಘಾಟ್‌ನಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ ಬಳಸುವಂತೆ ಸೂಚಿಸಲಾಗಿದೆ

ಮಂಗಳೂರು ಕಡೆಯಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸಂಪಾಜೆ ಘಾಟ್ ಬಳಸುವಂತೆ ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ