ಬೀದರ: ಸೆ.1:ಬೀದರ್ ಲೋಕಸಭಾ ಸದಸ್ಯರಾದ ಶ್ರೀ ಸಾಗರ್ ಈಶ್ವರ ಖಂಡ್ರೆ ಅವರು ಇಂದು ಭಾಲ್ಕಿ ತಾಲೂಕಿನ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸಿ, ಪರಿಶೀಲನೆ ನಡೆಸಿದರು.
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಾವಿರಾರು ಎಕರೆಯಲ್ಲಿ ಬೆಳೆದು ನಿಂತಿದ್ದ ಸೋಯಾ, ತೊಗರಿ ಸೇರಿದಂತೆ ಹಲವು ಬೆಳೆಗಳು ನಾಶವಾಗಿದೆ. ನೂರಾರು ಮನೆಗಳು ಹಾನಿಗೊಳಗಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ದವಸ ಧಾನ್ಯ ನೀರು ಪಾಲಾಗಿದೆ. ಕೆಲವು ಸಂಪರ್ಕ ಸೇತುವೆಗಳು ಕೊಚ್ಚಿಹೋಗಿದ್ದು, ರಸ್ತೆ ಸಂಪರ್ಕ, ವಿದ್ಯುತ್ ಮತ್ತು ನೀರು ಸರಬರಾಜು ಕಡಿತವಾಗಿದೆ. ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಸಂಸದರು ರೈತರ ಹೊಲಗಳಿಗೆ ಭೇಟಿ ನೀಡಿ, ಜಮೀನಿನಲ್ಲಿ ನೀರು ನಿಂತಿರುವುದು ಮತ್ತು ಪ್ರಮುಖ ಬೆಳೆಗಳಿಗೆ ಉಂಟಾದ ನಷ್ಟವನ್ನು ಸ್ವತಃ ಪರಿಶೀಲಿಸಿದರು. ವಿಪರೀತ ಮಳೆಯಿಂದ ಉಂಟಾದ ಬೆಳೆ ಹಾನಿಯ ಬಗ್ಗೆ ತುರ್ತು ಸಮೀಕ್ಷೆ ನಡೆಸಿ, ರೈತರಿಗೆ ಬೆಳೆ ವಿಮೆ ಕಂಪನಿಗಳಿಂದ ಸೂಕ್ತ ಪರಿಹಾರ ದೊರಕಿಸುವಂತೆ ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮನೆಗಳಿಗೆ ಹಾನಿಯಾದ ಕುಟುಂಬಗಳಿಗೆ ತಕ್ಷಣದ ಪರಿಹಾರ ನಿಧಿ ನೀಡುವಂತೆ, ರಸ್ತೆಗಳು, ಸೇತುವೆಗಳು, ವಿದ್ಯುತ್ ಮತ್ತು ನೀರು ಸರಬರಾಜು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ತುರ್ತಾಗಿ ರ್ಪುನಃಸ್ಥಾಪನೆ ಮಾಡುವಂತೆ ಸಂಭಂದಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಆಡಳಿತಾಧಿಕಾರಿಗಳು, ಜನಪ್ರತಿನಿಧಿಗಳು, ಗ್ರಾಮಸ್ಥರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.























