
ಶಿವಮೊಗ್ಗ, ಡಿ.೧೦- ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ಡಿಸೆಂಬರ್ ೧೫ ಹಾಗೂ ೧೬ ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು,ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಿಗೆ ಪಡೆದ (ದಸ್ತು) ಪತ್ರ ಬರಹಗಾರರ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಜಿ ಎಂ ಸುರೇಶ್ ಬಾಬು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಡಿಸೆಂಬರ್ ೧೫ ರಂದು ರಾಜ್ಯಾದ್ಯಂತ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು. ಡಿಸೆಂಬರ್ ೧೬ ರಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗ ಧರಣಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಪರವಾನಿಗೆ ಪಡೆದ ಪತ್ರ ಬರಹಗಾರರೆಲ್ಲರೂ ಭಾಗಿಯಾಗುತ್ತಿದ್ದಾರೆ. ಎರಡು ದಿನಗಳ ಕಾಲ ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಬೇಡಿಕೆಗಳೇನು, ತೆಲಂಗಾಣ ಮಾದರಿಯಲ್ಲಿ ಪರವಾನಿಗೆ ಪಡೆದ ಪತ್ರ ಬರಹಗಾರರಿಗೆ ಮಾತ್ರ ಲಾಗಿನ್ ವ್ಯವಸ್ಥೆ ಕಲ್ಪಿಸಬೇಕು. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗಲಿದೆ. ಹಾಗೆಯೇ ಅನದಿಕೃತವಾಗಿ ಪತ್ರ ಬರಹ ಮಾಡುವವರಿಗೆ ಕಡಿವಾಣ ಬೀಳಲಿದೆ ಎಂದು ತಿಳಿಸಿದ್ದಾರೆ.
ಕಾವೇರಿ ತಂತ್ರಾಂಶದಲ್ಲಿ ಹಲವು ನ್ಯೂನ್ಯತೆಗಳಿದ್ದು, ಅವುಗಳ ಪರಿಹಾರಕ್ಕೆ ಕಾಲಮಿತಿಯೊಳಗೆ ಕ್ರಮಕೈಗೊಳ್ಳಬೇಕು. ಹಾಗೆಯೇ ಪತ್ರ ಬರಹಗಾರರ ಎಲ್ಲ ಬೇಡಿಕೆಗಳನ್ನು ಕಾಲಮಿತಿಯೊಳಗೆ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಶಿವಮೊಗ್ಗ ನಗರದ ನೋಂದಣಿ ಇಲಾಖೆ ಕಚೇರಿ ಎದುರು ಡಿಸೆಂಬರ್ ೧೫ ರಂದು ಬೆಳಿಗ್ಗೆ ಧರಣಿ ನಡೆಸಲಾಗುವುದು. ಸ್ಥಳೀಯ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಅರ್ಪಿಸಲಾಗುವುದು ಎಂದು ಇದೇ ವೇಳೆ ಜಿ ಎಂ ಸುರೇಶ್ ಬಾಬು ಅವರು ಮಾಹಿತಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷರಾದ ಎಸ್ ಹೆಚ್ ಲೋಹಿತ್ ಕುಮಾರ್, ಗೌರವಾಧ್ಯಕ್ಷರಾದ ಎಂ ಜಿ ಬಾಲಕೃಷ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಮಾನೆ, ತಾಲೂಕು ಪ್ರಧಾನ ಕಾರ್ಯದರ್ಶಿ ಆಂಜನೇಯ ಸೇರಿದಂತೆ ಮೊದಲಾದವರಿದ್ದರು.




























