ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ:ನಿಗದಿತ ಗುರಿ ಸಾಧಿಸಿ: ಡಾ.ಔದ್ರಾಮ

ಸಂಜೆವಾಣಿ ವಾರ್ತೆ,
ವಿಜಯಪುರ,ಫೆ.೧೭: ಪ್ರಸ್ತುತ ಲಭ್ಯವಿರುವ ಇಲಾಖಾವಾರು ನಿಗದಿಪಡಿಸಿದ ಅನುದಾನವನ್ನು ಮುಂಬರುವ ಸಭೆಯೊಳಗಾಗಿ ನೂರರಷ್ಟು ಪ್ರಗತಿ ಸಾಧಿಸಿ ವರದಿ ನೀಡುವಂತೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ೨೦೨೫-೨೬ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಜನವರಿ ಮಾಹೆಯ ಅಂತ್ಯದವರೆಗೆ ಸಾಧಿಸಿದ ಪ್ರಗತಿ ವರದಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ವರ್ಷದಲ್ಲಿ ನಿಗದಿಪಡಿಸಿದ ಭೌತಿಕ ಹಾಗೂ ಆರ್ಥಿಕ ಗುರಿಗೆ ಅನುಗನುಗುಣವಾಗಿ ಸಮರ್ಪಕವಾಗಿ ಬಳಸಿ ಬಾಕಿ ಇರುವ ಯೋಜನೆಗಳನ್ನು ಪೂರ್ಣಗೊಳಿಸಬೇಕು.
ಯೋಜನಗಳಿಗೆ ನಿಗದಿಪಡಿಸಿದ ಅನುದಾನ ಬಳಸಿಕೊಂಡು ಬಾಕಿ ಉಳಿಯದಂತೆ ಹಾಗೂ ಲ್ಯಾಪ್ಸ್ ಆಗದಂತೆ ತ್ವರಿತವಾಗಿ ಕಾಮಗಾರಿಗಳನ್ನು ಕೈಗೊಂಡು ಪೂರ್ಣಗೊಳಿಸಿ ವರದಿ ನೀಡಬೇಕು ಎಂದು ಸೂಚಿಸಿದರು.
ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜಿಲ್ಲಾ ಮಟ್ಟದ ಸಭೆಯನ್ನು ಆಯೋಜಿಸುವ ಮುನ್ನ ಸಂಬAಧಪಟ್ಟ ಅಧಿಕಾರಿಗಳು ಪ್ರತಿ ಮಾಹೆ ೧೫ನೇ ದಿನಾಂಕದೊಳಗಾಗಿ ಪೂರ್ಣ ಪ್ರಮಾಣದ ವರದಿಯನ್ನು ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆಯ ಕಚೇರಿಗೆ ಮಾಹಿತಿಯನ್ನು ಒದಗಿಸಿ ಸಹಕರಿಸಬೇಕು.ಆ ವರದಿ ಆಧರಿಸಿ ಜಿಲ್ಲಾ ಮಟ್ಟದ ಸಭೆಯಲ್ಲಿ ಚರ್ಚಿಸಲು ಬಹಳ ಅನುಕೂಲವಾಗಲಿದೆ. ಇನ್ನೂ ಪೂರ್ಣ ಪ್ರಮಾಣದ ಅನುದಾನವನ್ನು ಬಳಸದೇ ಇರುವ ಇಲಾಖೆಗಳು ಮುಂದಿನ ಸಭೆಯೊಳಗಾಗಿ ಯೋಜನೆಗಳ ಪೂರ್ಣ ಪ್ರಮಾಣ ಅನುದಾನ ಬಳಸಿಕೊಂಡು ವರದಿಯನ್ನು ನೀಡುವಂತೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಸ್ವಾಗತಿಸಿ, ವಂದಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿನಾಥ ಕುಸನಾಳ, ಹೆಸ್ಕಾಂನ ಅಧೀಕ್ಷಕ ಅಭಿಯಂತರರಾದ ಸಿದ್ದಪ್ಪ ಬಿಂಜಗೇರಿ, ಜಿಲ್ಲಾ ಆಯುಷ್ ಅಧಿಕಾರಿಗಳಾದ ವಿದ್ಯಾವತಿ ಅಥಣಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ, ಕೃಷಿ ಇಲಾಖೆಯ ಸಹಾಯ ನಿರ್ದೇಶಕರಾದ ಶಿವನಗೌಡ ಪಾಟೀಲ, ಮಹಾನಗರ ಪಾಲಿಕೆ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ, ಲೀಡ ಬ್ಯಾಂಕ್‌ನ ವ್ಯವಸ್ಥಾಪಕ ಸಿದ್ದಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.