Home ಜಿಲ್ಲೆ ಬೆಂಗಳೂರು ಬೆಸ್ಕಾಂ ಖಾಸಗೀಕರಣ ವಿರುದ್ದ ಶ್ರೀನಿವಾಸ್ ಆಕ್ರೋಶ

ಬೆಸ್ಕಾಂ ಖಾಸಗೀಕರಣ ವಿರುದ್ದ ಶ್ರೀನಿವಾಸ್ ಆಕ್ರೋಶ

ಬಂಗಾರಪೇಟೆ.ಜೂ೧೭: ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ವಿತರಣಾ ಸೇವೆಯನ್ನು ಸರ್ಕಾರಿ ಸ್ವಾಮ್ಯದ ವಿದ್ಯುತ್ ವಿತರಣಾ ಕಂಪನಿಗಳು ಹಲವು ವರ್ಷಗಳಿಂದ ಯಶಸ್ವಿಯಾಗಿ ನಿರ್ವಹಿಸುತ್ತಿದ್ದು, ಸಾರ್ವಜನಿಕರು, ರೈತರು, ಕೈಗಾರಿಕೋದ್ಯಮಿಗಳು ಹಾಗೂ ವಿವಿಧ ವರ್ಗದ ಗ್ರಾಹಕರಿಗೆ ನಿರಂತರ ಮತ್ತು ಗುಣಮಟ್ಟದ ಸೇವೆಯನ್ನು ಒದಗಿಸುತ್ತಿವೆ. ಇಂತಹ ಸನ್ನಿವೇಶದಲ್ಲಿ ಟಾಟಾ ಪವರ್ ಕಂಪನಿಯು ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಗಿ ಪಡೆಯಲು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆ.ಇ.ಆರ್.ಸಿ.)ಕ್ಕೆ ಅರ್ಜಿ ಸಲ್ಲಿಸಿರುವುದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ ಎಂದು ರೈತ ಮುಖಂಡ ಮರಗಲ್ ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ನಗರದಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುತ್ ವಿತರಣಾ ಕ್ಷೇತ್ರವು ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಅತ್ಯಂತ ಮಹತ್ವದ ಸೇವೆಯಾಗಿದ್ದು, ಖಾಸಗಿ ಕಂಪನಿಗಳಿಗೆ ಈ ಕ್ಷೇತ್ರದಲ್ಲಿ ಅವಕಾಶ ನೀಡುವುದರಿಂದ ಭವಿಷ್ಯದಲ್ಲಿ ಗ್ರಾಹಕರ ಹಿತಾಸಕ್ತಿ, ರೈತರ ಸಬ್ಸಿಡಿ ಯೋಜನೆಗಳು, ನೌಕರರ ಭದ್ರತೆ ಹಾಗೂ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ. ಜೊತೆಗೆ ಸರ್ಕಾರದ ನೇರ ಮೇಲ್ವಿಚಾರಣೆ ಮತ್ತು ನಿಯಂತ್ರಣವೂ ಕಡಿಮೆಯಾಗುವ ಸಾಧ್ಯತೆ ಇದೆ. ಬೆಸ್ಕಾಂ ಖಾಸಗೀಕರಣವನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಟಾಟಾ ಪವರ್ ಕಂಪನಿಗೆ ಮಾರಾಟ ಮಾಡಲು ತುದಿಗಾಲಲ್ಲಿ ನಿಂತಿದೆ, ರಾಜ್ಯ ಸರ್ಕಾರಕ್ಕೆ ಎಷ್ಟರ ಮಟ್ಟಿಗೆ ಬುದ್ದಿಯಿದೆ ಎಂದು ಅವರು ಕಿಡಿಕಾರಿದರು.


ಮುಂದಿನ ದಿನಗಳಲ್ಲಿ ಇದರ ಪರಿಣಾಮ ನೇರವಾಗಿ ರೈತರ ಮೇಲೆ ಬೀಳುತ್ತದೆ. ಜೊತೆಗೆ ಗ್ರಾಹಕರಿಗೂ ಸಹ ಅತ್ಯಂತ ಅಪಾಯಕಾರಿಯಾಗಿದ್ದು, ಇಂತಹ ನಿರ್ಧಾರ ತೆಗೆದುಕೊಂಡಿರುವುದರಿಂದ ಬಡ ವರ್ಗದ ಜನತೆಗೆ ತೀವ್ರ ತೊಂದರೆಯಾಗಲಿದೆ. ಆದ್ದರಿಂದ, ವಿದ್ಯುತ್ ಕಾಯ್ದೆ?೨೦೦೩ರ ಸೆಕ್ಷನ್ ೧೦೮ರ ಅಡಿಯಲ್ಲಿ ರಾಜ್ಯ ಸರ್ಕಾರಕ್ಕೆ ಇರುವ ಅಧಿಕಾರವನ್ನು ಬಳಸಿಕೊಂಡು, ಟಾಟಾ ಪವರ್ ಕಂಪನಿಯು ಸಲ್ಲಿಸಿರುವ ವಿದ್ಯುತ್ ವಿತರಣಾ ಪರವಾನಗಿ ಅರ್ಜಿಯನ್ನು ತಿರಸ್ಕರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ರಾಜ್ಯದ ವಿದ್ಯುತ್ ವಿತರಣಾ ವ್ಯವಸ್ಥೆಯು ಸಾರ್ವಜನಿಕ ವಲಯದಲ್ಲಿಯೇ ಮುಂದುವರಿದು, ಜನಸಾಮಾನ್ಯರ ಹಿತಾಸಕ್ತಿ ಕಾಪಾಡುವಂತೆ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.