Home ಜಿಲ್ಲೆ ಶಿವಮೊಗ್ಗ ಹುಲಿಕಲ್ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ತಾತ್ಕಾಲಿಕ ಬಂದ್

ಹುಲಿಕಲ್ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ತಾತ್ಕಾಲಿಕ ಬಂದ್

ಶಿವಮೊಗ್ಗ, ಏ.೧೨– ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-೫೨ ರ ಹುಲಿಕಲ್ ಘಾಟ್ (ಬಾಳೆಬರೆ ಘಾಟ್) ರಸ್ತೆಯಲ್ಲಿ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಡಳಿತ ಆದೇಶಿಸಿದೆ.

ಕಳೆದ ಮಳೆಗಾಲದಲ್ಲಿ ಈ ಮಾರ್ಗದ ಹೇರ್‌ಪಿನ್ ತಿರುವಿನಲ್ಲಿ ಭೂಕುಸಿತ ಸಂಭವಿಸಿತ್ತು. ಇದರ ದುರಸ್ತಿಗಾಗಿ ತಡೆಗೋಡೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿತ್ತು. ಆದರೆ, ಏಪ್ರಿಲ್ ೦೯ ರಂದು ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸುಮಾರು ೧೨ ಮೀಟರ್ ಎತ್ತರದಿಂದ ಮತ್ತೆ ಭೂಕುಸಿತ ಉಂಟಾಗಿದ್ದು, ಕಾಂಕ್ರೀಟ್ ರಸ್ತೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ರಸ್ತೆಯು ಸಂಚಾರಕ್ಕೆ ಯೋಗ್ಯವಾಗಿಲ್ಲದ ಕಾರಣ, ಕಾಮಗಾರಿ ಪೂರ್ಣಗೊಳ್ಳುವವರೆಗೆ ರಸ್ತೆಯನ್ನು ಬಂದ್ ಮಾಡಲಾಗಿದೆ.

ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳು:

ಘಾಟ್ ರಸ್ತೆ ಬಂದ್ ಆಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಈ ಕೆಳಗಿನ ಪರ್ಯಾಯ ರಸ್ತೆಗಳನ್ನು ಬಳಸಲು ಸೂಚಿಸಲಾಗಿದೆ:

ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಹೋಗುವ ಭಾರಿ ವಾಹನಗಳು: ತೀರ್ಥಹಳ್ಳಿ – ರಾವೆ – ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ರಸ್ತೆ.

ಯಡೂರು/ಮಾಸ್ತಿಕಟ್ಟೆ ಮಾರ್ಗವಾಗಿ ಹೋಗುವ ಭಾರಿ ವಾಹನಗಳು: ತೀರ್ಥಹಳ್ಳಿ – ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ರಸ್ತೆ.

ಶಿವಮೊಗ್ಗ/ಸಾಗರದಿಂದ ಹೊಸನಗರ ಮಾರ್ಗವಾಗಿ ಹೋಗುವ ಭಾರಿ ವಾಹನಗಳು: ಶಿವಮೊಗ್ಗ-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ – ಹೊನ್ನಾವರ – ಭಟ್ಕಳ – ಬೈಂದೂರು – ಕುಂದಾಪುರ ರಸ್ತೆ.

ಈ ಬದಲಾವಣೆಯು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ರಕ್ಷಣಾತ್ಮಕ ಕಾಮಗಾರಿ ಮುಗಿಯುವವರೆಗೆ ಚಾಲ್ತಿಯಲ್ಲಿರುತ್ತದೆ. ಸಾರ್ವಜನಿಕರು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ತಿಳಿಸಿದ್ದಾರೆ.